Maharashtra Assembly Elections 2024: ಮಹಾರಾಷ್ಟ್ರ ಚುನಾವಣೆ ರಾಜ್ ಠಾಕ್ರೆ ಮಹತ್ವದ ತೀರ್ಮಾನ
ಮುಂಬೈ, ಅಕ್ಟೋಬರ್ 14: ರಾಜಕೀಯ ಪಕ್ಷಗಳು ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿವೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ವಾರ ಅಥವ ಮುಂದಿನ ವಾರ ಕೇಂದ್ರ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡುವ ನಿರೀಕ್ಷೆ ಇದೆ. ಚುನಾವಣೆ ಎದುರಿಸಲು ಬಿಜೆಪಿ ನೇತೃತ್ವದಲ್ಲಿ 'ಮಹಾಯತಿ' ಮತ್ತು ಕಾಂಗ್ರೆಸ್ ನೇತೃತ್ವದಲ್ಲಿ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ ಈಗಾಗಲೇ ರಾಜ್ಯದಲ್ಲಿ ರಚನೆಯಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024ರಲ್ಲಿ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಪಕ್ಷವು ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿದೆ. ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವಾಗ ರಾಜ್ ಠಾಕ್ರೆ ಈ ಕುರಿತು ಘೋಷಣೆಯನ್ನು ಮಾಡಿದ್ದಾರೆ.

ಭಾನುವಾರ ರಾಜ್ ಠಾಕ್ರೆ ಈ ಕುರಿತು ಘೋಷಣೆ ಮಾಡಿದ್ದಾರೆ. "ಮುಂಬರುವ ಚುನಾವಣೆಯಲ್ಲಿ ಎಂಎನ್ಎಸ್ ಪಕ್ಷವು ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿ ನೇತೃತ್ವ ಮಹಾಯತಿ ಮತ್ತು ವಿರೋಧ ಪಕ್ಷಗಳ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ಮೈತ್ರಿಕೂಟದಿಂದ ಸಮಾನ ಅಂತರ ಕಾಯ್ದುಕೊಳ್ಳಲಿದೆ" ಎಂದು ಹೇಳಿದ್ದಾರೆ.
ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರಾಜ್ ಠಾಕ್ರೆ, "ಮಹಾರಾಷ್ಟ್ರವನ್ನು ನಮ್ಮ ಕೈಗೆ ಕೊಡಿ, ಹೇಗೆ ಬದಲಾಯಿಸುತ್ತೇವೆ ನೋಡಿ. ಈ ಬಾರಿ ಮಹಾಯತಿ ಮತ್ತು ಮಹಾವಿಕಾಸ್ ಅಘಾಡಿಗೆ ಅವಕಾಶ ನೀಡಬೇಡಿ. ಬದಲಾವಣೆ ಬೇಕಾದರೆ ನಮಗೆ ಅಧಿಕಾರ ನೀಡಿ" ಎಂದು ರಾಜ್ ಠಾಕ್ರೆ ಕರೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ಸೀಮಿತ: ಲೋಕಸಭೆ ಚುನಾವಣೆ 2024ರಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಪಕ್ಷವು ಎನ್ಡಿಎ ಮೈತ್ರಿಕೂಟದ ಜೊತೆ ಇತ್ತು. ಆದ್ದರಿಂದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿಯೂ ಪಕ್ಷ ಎನ್ಡಿಎ ಮೈತ್ರಿಕೂಟ ಬೆಂಬಲಿಸಿ ಮಹಾಯತಿ ಮೈತ್ರಿಕೂಟ ಸೇರಬಹುದು ಎಂದು ಅಂದಾಜಿಸಲಾಗಿತ್ತು.
ಆದರೆ ಭಾನುವಾರ ಎಂಎನ್ಎಸ್ ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕುತೂಹಲವನ್ನು ಮೂಡಿಸಿದೆ. "ಎನ್ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡಿರುವುದು ಕೇವಲ ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ" ಎಂದು ರಾಜ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.
'ನಾ ಯತಿ ನಾ ಅಘಾಡಿ' ಎಂದು ಹೇಳುವ ಮೂಲಕ ರಾಜ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಈ ಮೂಲಕ ಪಕ್ಷದ ಕಾರ್ಯಕರ್ತರಿಗೆ ಇದ್ದ ಗೊಂದಲವನ್ನು ನಿವಾರಿಸಿದ್ದಾರೆ. ಚುನಾವಣೆಗೆ ಸಿದ್ಧರಾಗಿ ಎಂದು ಕರೆ ನೀಡಿದ್ದಾರೆ.
"ನೀವು ಚುನಾವಣೆಗೆ ಯಾರ ಜೊತೆಗೋ ಸರ್ಧಿಸುತ್ತೀರಿ. ಚುನಾವಣೆ ಬಳಿಕ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳುತ್ತೀರಿ. ಕೆಲವು ಪಕ್ಷಗಳು ಒಡೆದು ಭಾಗವಾಗಿವೆ. ಮಹಾರಾಷ್ಟ್ರ ಎಂದಿಗೂ ದೆಹಲಿಯ ಮುಂದೆ ತಲೆಬಾಗಿಲ್ಲ, ದೆಹಲಿಯವರು ನಮ್ಮನ್ನು ಆಳುವಂತೆ ಮಾಡಬೇಡಿ" ಎಂದು ರಾಜ್ ಠಾಕ್ರೆ ಎರಡೂ ಮೈತ್ರಿಕೂಟದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 146. ವಿಧಾನಸಭೆ ಚುನಾವಣೆಗಾಗಿ ರಾಜ್ಯದ ಆಡಳಿತ ಪಕ್ಷಗಳಾದ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ರಚನೆ ಮಾಡಿಕೊಂಡಿದ್ದು, ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ.
ರಾಜ್ಯದ ವಿರೋಧ ಪಕ್ಷಗಳು ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ರಚನೆ ಮಾಡಿಕೊಂಡಿವೆ. ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದಲ್ಲಿ ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ಪಕ್ಷಗಳಿವೆ. ಈ ಮೈತ್ರಿಕೂಟದ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದ್ದು, ಯಾರಿಗೆ ಎಷ್ಟು ಸೀಟು? ಎಂದು ಇನ್ನೂ ಘೋಷಣೆಯಾಗಿಲ್ಲ.












Click it and Unblock the Notifications