Maharashtra Election 2024: ದೆಹಲಿಗೆ ಹೊರಟ ಫಡ್ನವೀಸ್, ಪತ್ರಿಕಾಗೋಷ್ಠಿ ಕರೆದ ಏಕನಾಥ್ ಶಿಂಧೆ
ಮುಂಬೈ, ನವೆಂಬರ್ 27: ಮಹಾರಾಷ್ಟ್ರದ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ದೆಹಲಿ ತಲುಪಿದೆ. 2024ರ ವಿಧಾನಸಭೆ ಚುನಾವಣೆಯಲ್ಲಿ 230 ಸ್ಥಾನಗಳಲ್ಲಿ ಗೆದ್ದಿರುವ 'ಮಹಾಯತಿ' ಮೈತ್ರಿಕೂಟ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಅಡೆತಡೆ ಎದುರಿಸುತ್ತಿದೆ. 132 ಸೀಟು ಗೆದ್ದಿರುವ ಬಿಜೆಪಿ, 57 ಸೀಟು ಗೆದ್ದಿರುವ ಶಿವಸೇನೆ (ಏಕನಾಥ್ ಶಿಂಧೆ ಬಣ) ನಡುವೆ ಮುಖ್ಯಮಂತ್ರಿ ಹುದ್ದೆಗೆ ಜಟಾಪಟಿ ನಡೆಯುತ್ತಿದೆ.
ಬುಧವಾರ ಹಂಗಾಮಿ ಸಿಎಂ ಏಕನಾಥ್ ಶಿಂಧೆ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ದೆಹಲಿಗೆ ಹೊರಟಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, "ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ನೀಡುತ್ತೇನೆ" ಎಂದು ಹೇಳಿದರು.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಕಾರಣಕ್ಕೆ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. 'ಮಹಾಯತಿ' ಮೈತ್ರಿಕೂಟದ ಭಾಗವಾದ ಮತ್ತೊಂದು ಪಕ್ಷ ಎನ್ಸಿಪಿ (ಅಜಿತ್ ಪವಾರ್ ಬಣ) ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಲು ಒಪ್ಪಿದೆ. ರಾಜ್ಯ ವಿಧಾನಸಭೆ ಅವಧಿ ಮುಗಿದಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಿದ್ದು, ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿದೆ. ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಬಿಜೆಪಿ 'ಮಹಾಯತಿ' ಮೈತ್ರಿಕೂಟದ ನೆರವಿನಿಂದ ಸರ್ಕಾರ ರಚಿಸಲಿದೆ. ಮೈತ್ರಿಕೂಟದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೀಟು ಹೊಂದಿದ್ದು, ಸರ್ಕಾರ ರಚನೆಗೆ ಸ್ಪಷ್ಟವಾದ ಬಹುಮತವಿದೆ. ಆದರೆ ಸರ್ಕಾರ ರಚನೆ ವಿಳಂಬವಾಗುತ್ತಿದೆ.
ಹೈಕಮಾಂಡ್ ನಾಯಕರ ಭೇಟಿ: ನೂತನ ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ರಾಜ್ಯದಲ್ಲಿ ಬಗೆಹರಿದಿಲ್ಲ. ಆದ್ದರಿಂದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೇವೇಂದ್ರ ಫಡ್ನವೀಸ್ ಬುಧವಾರ ಮಧ್ಯಾಹ್ನ ದೆಹಲಿ ವಿಮಾನವೇರಿದ್ದಾರೆ.
ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿ ಆಗುವುದಿಲ್ಲ. ಇನ್ನೂ ಎರಡು ವರ್ಷ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅವಕಾಶ ನೀಡಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ. ಆದರೆ ರಾಜ್ಯ ಬಿಜೆಪಿ, ಆರ್ಎಸ್ಎಸ್ ನಾಯಕರು ಶಿವಸೇನೆಗೆ ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಲು ಒಪ್ಪಿಲ್ಲ.
ಬಿಜೆಪಿ 132, ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೇರಿರುವ 'ಮಹಾಯತಿ' ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ, ಕೆಲವು ಖಾತೆಗಳನ್ನು ಎರಡು ಪಕ್ಷಕ್ಕೆ ನೀಡುವ ಬಿಜೆಪಿ ಸೂತ್ರಕ್ಕೆ ಶಿವಸೇನೆ ಒಪ್ಪುತ್ತಿಲ್ಲ. ಚುನಾವಣೆಯನ್ನು ಏಕನಾಥ್ ಶಿಂಧೆ ನೇತೃತ್ವದಲ್ಲೇ ಎದುರಿಸಿದ್ದು, ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು ಎಂದು ಪಟ್ಟು ಹಿಡಿದಿದೆ.
ವಿಮಾನ ನಿಲ್ದಾಣದಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, "ಶೀಘ್ರವೇ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲಾಗುತ್ತದೆ. ಮಹಾಯತಿ ಮೈತ್ರಿಕೂಟದ ಮೂರು ಪಕ್ಷಗಳ ಹಿರಿಯ ನಾಯಕರು ಒಟ್ಟಾಗಿ ತೀರ್ಮಾನ ಕೈಗೊಳ್ಳಲಿದ್ದಾರೆ" ಎಂದರು.
ಯಾವ ಪಕ್ಷಕ್ಕೆ ಯಾವ ಖಾತೆ ಸಿಗಲಿದೆ? ಎಂಬ ಪ್ರಶ್ನೆಗೆ ಉತ್ತರ ನೀಡಿದ ಫಡ್ನವೀಸ್, "ಮೊದಲು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಉಳಿದ ವಿಚಾರಗಳ ಬಗ್ಗೆ ಬಳಿಕ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದರು.












Click it and Unblock the Notifications