ಮಹಾರಾಷ್ಟ್ರ ಚುನಾವಣೆ: ಬಿಜೆಪಿಗೆ ರೈತರ ಸವಾಲು, ಕಾಂಗ್ರೆಸ್ಗೆ ಖುಷಿ!
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಈ ನಡುವೆ ಮಹಾರಾಷ್ಟ್ರ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಭರ್ಜರಿ ಸರ್ಕಸ್ ನಡೆಸಿವೆ. ಆದರೆ, ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಈ ಬಾರಿಯ ವಿಧಾನಸಭೆ ಚುನಾವಣೆ ಅಂತ್ಯಂತ ಸವಾಲಿನಿಂದ ಕೂಡಿದೆ.
ಮಹಾರಾಷ್ಟ್ರದಲ್ಲಿ ಉತ್ತರ ಭಾಗವು ಬಿಜೆಪಿಯ ಭದ್ರಕೋಟೆಯಾಗಿದೆ. ಹಲವು ವರ್ಷಗಳಿಂದ ಈ ಭಾಗದಲ್ಲಿ ಬಿಜೆಪಿ ತನ್ನ ಅಸ್ತಿತ್ವನ್ನು ಉಳಿಸಿಕೊಳ್ಳುವುದರ ಜೊತೆಗೆ ಭರ್ಜರಿ ಗೆಲುವನ್ನು ಸಹ ದಾಖಲಿಸುತ್ತಿದೆ. ಆದರೆ, ಈ ಬಾರಿ ಇಲ್ಲಿ ಪರಿಸ್ಥಿತಿ ತೀರ ಭಿನ್ನವಾಗಿದೆ. ಮಹಾರಾಷ್ಟ್ರದಲ್ಲೇ ಆರ್ಎಸ್ಎಸ್ನ ಪ್ರಧಾನ ಕಚೇರಿ ಇದೆ. ಆರ್ಎಸ್ಎಸ್ ಸಂಪರ್ಕವು ಬಿಜೆಪಿಗೆ ಇಲ್ಲಿ ಪ್ಲಸ್ ಪಾಯಿಂಟ್ ಆಗಿದೆ. ಇನ್ನು ಈ ರಾಜ್ಯದ ಉತ್ತರ ಭಾಗದಲ್ಲಿ ನಾಸಿಕ್, ಜಲಗಾಂವ್, ಧುಲೆ ಮತ್ತು ನಂದೂರ್ ಎನ್ನುವುದು ಸೇರಿದಂತೆ ಆರು ಲೋಕಸಭಾ ಕ್ಷೇತ್ರಗಳು ಹಾಗೂ 35 ವಿಧಾನಸಭಾ ಕ್ಷೇತ್ರಗಳು ಇವೆ.

ಈ ಕ್ಷೇತ್ರಗಳಲ್ಲಿ ಬಿಜೆಪಿ ಬಿಗಿಹಿಡಿತವನ್ನು ಸಾಧಿಸಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ನಡೆದಿರುವ ಕೆಲವು ಬೆಳವಣಿಗೆಗಳಿಂದ ರೈತರು ಆಕ್ರೋಶಗೊಂಡಿದ್ದು, ಈ ಬಾರಿ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಈ ಭಾಗದಲ್ಲಿನ ರೈತರು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೇಲೆ ಅಸಮಾನಿತರಾಗಿದ್ದಾರೆ. ಹೀಗಾಗಿ, ಈ ಬಾರಿ ಮಹಾರಾಷ್ಟ್ರದ ಉತ್ತರ ಭಾಗವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಷಯವೆಂದರೆ, ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿಗೆ ಹಿನ್ನಡೆಯಾಗಿದೆ. ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುತ್ತಿದೆ. ಈ ಒಕ್ಕೂಟವನ್ನು ಮಹಾಯುತಿ ಎನ್ನಲಾಗುತ್ತದೆ. ಬಿಜೆಪಿ, ಶಿವಸೇನಾ (ಏಕನಾಥ್ ಶಿಂಧೆ ಬಣ) ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಅಜಿತ್ಪವಾರ್ಬಣ) ಆಡಳಿತರೂಢ ಪಕ್ಷಗಳಾಗಿವೆ.
ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಹಾಗೂ ರೈತರ ಕೋಪದಿಂದಾಗಿ ಹಿನ್ನಡೆಯಾಗಿದೆ. ಇದೀಗ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ)ಯು ಮಹಾಯುತಿಗೆ ಟಕ್ಕರ್ ಕೊಡಲು ಮುಂದಾಗಿದೆ. ಹೀಗಾಗಿ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಅಲರ್ಟ್ ಆಗಿವೆ.
ಇನ್ನು ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಈ ಭಾಗದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಎನ್ಸಿಪಿ (ಎಸ್ಪಿ) ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳು ತಲಾ ಒಂದು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಆದರೆ, 2019ನೇ ಸಾಲಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಐದು ಲೋಕಸಭಾ ಕ್ಷೇತ್ರಗಳಲ್ಲಿಯೂ, ಶಿವಸೇನೆ ಒಂದು ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಿತ್ತು. ಆ ಸಂದರ್ಭದಲ್ಲಿ ಇಲ್ಲಿ ಎನ್ಡಿಎ ಪ್ರಾಬಲ್ಯವಿತ್ತು. ಆದರೆ, ಕಳೆದ ಮೂರು ವರ್ಷದಲ್ಲಿ ಮಹಾರಾಷ್ಟ್ರ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗಿವೆ.
ಈರುಳ್ಳಿ ಪ್ರಮುಖ ಬೆಳೆ: ಮಹಾರಾಷ್ಟ್ರದ ಉತ್ತರ ಭಾಗವು ಈರುಳ್ಳಿ ಬೆಳೆಯನ್ನು ಅತಿ ಹೆಚ್ಚು ಬೆಳೆಯುವ ಪ್ರದೇಶಗಳಲ್ಲಿ ಒಂದಾಗಿದೆ. ಈ ಭಾಗದಲ್ಲಿ ದೇಶದಲ್ಲೇ ಅತಿ ಹೆಚ್ಚು ಈರುಳ್ಳಿಯನ್ನು ಬೆಳೆಯಲಾಗುತ್ತದೆ. ಇಲ್ಲಿ ಶೇ 30ರಷ್ಟು ಈರುಳ್ಳಿಯನ್ನು ಬೆಳೆಯಲಾಗುತ್ತಿದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೆಲವು ನಿರ್ಧಾರಗಳು ಇಲ್ಲಿನ ರೈತರ ಮೇಲೆ ಪರಿಣಾಮ ಬೀರಿವೆ. ಹೀಗಾಗಿ, ಕೆಲವು ರೈತರು ಬಿಜೆಪಿಯ ಮೇಲೆ ಅಸಮಾಧಾನಿತರಾಗಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರವು 2023ರ ಡಿಸೆಂಬರ್ನಲ್ಲಿ ಭಾರತದಲ್ಲಿ ಈರುಳ್ಳಿ ಪೂರೈಕೆ ಸಮಸ್ಯೆಗಳನ್ನು ನಿಯಂತ್ರಿಸಲು ಮತ್ತು ಸ್ಥಿರ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈರುಳ್ಳಿ ರಫ್ತು ಮಾಡುವುದನ್ನು ನಿಷೇಧಿಸಿತು. ನಿಷೇಧಕ್ಕೂ ಮುನ್ನ ಈರುಳ್ಳಿ ಮೇಲೆ ಶೇ.40 ರಫ್ತು ಸುಂಕ ವಿಧಿಸಿತ್ತು. ರಫ್ತು ನಿಷೇಧವು ಏಪ್ರಿಲ್ ಅಂತ್ಯದವರೆಗೆ ಮುಂದುವರಿದಿತ್ತು. ಅಲ್ಲದೇ ಕೇಂದ್ರ ಸರ್ಕಾರವು ಈರುಳ್ಳಿ ಮೇಲಿನ ರಫ್ತು ಸುಂಕವನ್ನು 40% ರಿಂದ 20% ಕ್ಕೆ ಇಳಿಸಿತ್ತು. ಈ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಗಳು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ಅದನ್ನು ಬಿಜೆಪಿ ಹೇಗೆ ಎದುರಿಸಲಿದೆ. ಮತದಾರರು ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ಬೆಳವಣಿಗೆ ಕಾಂಗ್ರೆಸ್ಗೆ ಲಾಭವಾಗುವ ಸಾಧ್ಯತೆಯೂ ಇದೆ.












Click it and Unblock the Notifications