Maharashtra Election: ಮುಂಬೈನಲ್ಲಿ ಜಿ.ಪರಮೇಶ್ವರ ಪ್ರಚಾರ ಸಭೆ: ಹೆಚ್ಚಾಯ್ತು ಗೆಲುವಿನ ವಿಶ್ವಾಸ
ಮುಂಬೈ, ನವೆಂಬರ್ 15: ಮಹಾರಾಷ್ಟ್ರದಲ್ಲಿ ಚುನಾವಣೆ ಕಾವು ಏರತೊಡಗಿದೆ. ಮತದಾನಕ್ಕೆ ದಿನಗಣನೆ ಆರಂಭವಾಗಿದೆ.
ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗೆದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಕಾಂಗ್ರೆಸ್ ಹಿರಿಯ ವೀಕ್ಷಕ ಹಾಗೂ ಕರ್ನಾಟಕ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮುಂಬೈ ಮತ್ತು ಕೊಂಕಣ್ ಭಾಗದಲ್ಲಿ ಮುಖಂಡರ ಜತೆ ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪ್ರಚಾರ ಸಭೆ ನಡೆಸಿದರು. ಕರ್ನಾಟಕದಲ್ಲಿ ಎಲ್ಲ ವರ್ಗದ ಜನರಿಗೆ 05 ಗ್ಯಾರಂಟಿ ಯೋಜನೆಗಳನ್ನು ಸಮರ್ಪವಾಗಿ ಅನುಷ್ಟಾನಗೊಳಿಸಿರುವುದನ್ನು ಸಹಿಸಲಾಗದ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಸರ್ಕಾರದ ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ ಎಂದು ಅವರು ತಿರುಗೇಟು ಕೊಟ್ಟರು.
ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ಚುನಾವಣೆಯಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವು 162ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಾವೇ ಸರ್ಕಾರ ರಚನೆ ಮಾಡಲಿದ್ದೇವೆ.
ಬಿಜೆಪಿ ಸೇರಿ ಆಡಳಿತ ಪಕ್ಷದ ವಿರುದ್ಧ ಕಿಡಿ
ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನಾವಿಸ್ ಅವರು ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ. ಡ್ರಗ್ಸ್ ದಂಧೆ, ಮಹಿಳೆಯರ ನೇಲಿನ ದೌರ್ಜನ್ಯ, ಕೊಲೆ ಹೆಚ್ಚಾಗಿವೆ. ಮುಂಬೈ ನಗರದಲ್ಲಿ ಮಹಿಳಾ ಸುರಕ್ಷತೆಗೆ ಒತ್ತು ನೀಡಿಲ್ಲ. ಕೇಂದ್ರ ಸರ್ಕಾರ ನಿರ್ಭಯಾ ಯೋಜನೆಯಡಿ ನೀಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಲ್ಲ. ಹೀಗಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಎರಡನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ ಎಂದು ಹೇಳಿದರು.
ಡ್ರಗ್ ದಂಧೆ ನಿಯಂತ್ರಣ ಮಾಡುವಲ್ಲಿ ಮಹಾರಾಷ್ಟ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಯುವಕರು ದೊಡ್ಡಮಟ್ಟದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣವು ಜನರ ಸುರಕ್ಷತೆಯ ಪ್ರಶ್ನೆಯನ್ನು ಹುಟ್ಟುಹಾಕಿದೆ. ಮುಂಬೈನಲ್ಲಿ ನಡೆಯುವ ಹಿಂಸಾತ್ಮಕ ಅಪರಾಧಗಳು ಜನರಲ್ಲಿ ಆತಂಕ ಹುಟ್ಟಿಸಿದೆ. ಮಹಾರಾಷ್ಟ್ರದ ಈ ದುಸ್ಥಿತಿಗೆ ಕಾರಣರಾದ ಬಿಜೆಪಿ ನಾಯಕರು ತಕ್ಕ ಪ್ರತಿಫಲ ಅನುಭವಿಸಲಿದ್ದಾರೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ನಿಂದ ಪ್ರವಾಸ, ವೀಕ್ಷಕರ ಅವಲೋಕನ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೊಷಣೆಯಾದ ಬಳಿಮ ಮುಂಬೈ ಮತ್ತು ಕೊಂಕಣದಲ್ಲಿ ನಾನು ಪ್ರವಾಸ ಕೈಗೊಂಡು ಕೆಲವು ಅವಲೋಕನಗಳನ್ನು ಮಾಡಿದ್ದೇನೆ. ಹಿಂದಿನ ಸರ್ಕಾರವು ಮಹಾರಾಷ್ಟ್ರದ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂಬುದು ಸ್ಥಳೀಯ ಜನರ ಮಾತಾಗಿದೆ. ಏಕ್ನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರು ಬಡವರ ಪರವಾಗಿ ಆಡಳಿತವನ್ನು ನೀಡಿಲ್ಲ. ಉಳ್ಳವರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದು ಹರಿಹಾಯ್ದರು.
ದೇವೇಂದ್ರ ಫಡ್ನವಿಸ್ ಅವರು ಆಂಬ್ಯುಲೆನ್ಸ್ ಖರೀದಿಗೆ ರೂ. 8 ಸಾವಿರ ಕೋಟಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. 5 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆವನ್ನು ಈಡೇರಿಸಿಲ್ಲ. ಮಹಾರಾಷ್ಟ್ರದ ಅಭಿವೃದ್ಧಿಯ ಅನುದಾನವನ್ನು ಗುಜುರಾತ್ಗೆ ಸಾಗಿಸುತ್ತಿದ್ದಾರೆ. ಮಹಾರಾಷ್ಟ್ರದ ನಾಗರಿಕರ ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ಸುಳ್ಳು ಆಪಾದನೆ
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಮಹಿಳೆಯರು, ಬಡವರ ಅಭಿವೃದ್ಧಿಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದೆವು. ಸರ್ಕಾರ ಅಸ್ಥಿತ್ವಕ್ಕೆ ಬಂದ ಕೂಡಲೇ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ, 200 ಯೂನಿಟ್ ಉಚಿತ ವಿದ್ಯುತ್, ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆಯಡಿ 3 ಸಾವಿರ ರೂ. ನೀಡುತ್ತಿದ್ದೇವೆ. ಕಳೆದ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳಲ್ಲ
ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಜೊತೆಗೆ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಸಹಿಸದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಷಾ ಹಾಗೂ ಇತರೆ ಬಿಜೆಪಿ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications