ಕಾಂಗ್ರೆಸ್ಗೆ ಹಿನ್ನಡೆ; ಪಕ್ಷ ತೊರೆದ ಮಹಾರಾಷ್ಟ್ರದ ಮಾಜಿ ಸಿಎಂ!
ಮುಂಬೈ, ಫೆಬ್ರವರಿ 12: ಲೋಕಸಭೆ ಚುನಾವಣೆ ಎದುರಾಗಿರುವಾಗಲೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಅಶೋಕ್ ಚೌಹಾಣ್ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಫೆಬ್ರವರಿ 12ರಿಂದಲೇ ಅನ್ವಯವಾಗುವಂತೆ ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

65 ವರ್ಷದ ಅಶೋಕ್ ಚೌಹಾಣ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದ ಜೊತೆಗೆ ಶಾಸಕ ಸ್ಥಾನಕ್ಕೆ ಸಹ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಸ್ಪೀಕರ್ಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ಗೆ ಭಾರೀ ಹಿನ್ನಡೆ ತಂದಿದೆ.
ಅಶೋಕ್ ಚೌಹಾಣ್ ಬೋಕಾರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಈ ಕುರಿತು ಈಗಾಗಲೇ ಮಾತುಕತೆ ಸಹ ನಡೆದಿದೆ ಎಂಬ ಮಾಹಿತಿ ಇದೆ. ರಾಜ್ಯಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವ ಭರವಸೆಯನ್ನು ಬಿಜೆಪಿ ನೀಡಿದೆ ಎಂಬ ಸುದ್ದಿಗಳಿವೆ.
ಜನವರಿ ತಿಂಗಳಿನಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ಮಿಲಿಂದ್ ದಿಯೋರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈಗ ಅಶೋಕ್ ಚೌಹಾಣ್ ಶಾಸಕ ಸ್ಥಾನ ಮತ್ತು ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ವಾರ ಅಶೋಕ್ ಚೌಹಾಣ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆಗ ಮಾತನಾಡಿದ್ದ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, "ಅಶೋಕ್ ಚೌಹಾಣ್ ಬಿಜೆಪಿ ಸೇರುವ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದರೆ ಇದನ್ನು ಹೇಳಬಲ್ಲೆ ಕಾಂಗ್ರೆಸ್ ಕೆಲವು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ" ಎಂದು ಹೇಳಿದ್ದರು.
"ಕಾಂಗ್ರೆಸ್ನಲ್ಲಿ ಅಸಮಾಧಾನಗೊಂಡಿರುವ ಅನೇಕ ನಾಯಕರು ಇದ್ದಾರೆ. ಕೆಲವು ದೊಡ್ಡ ನಾಯಕರು ಪಕ್ಷಕ್ಕೆ ಸೇರಲಿದ್ದಾರೆ ಎಂದು ಹೇಳುತ್ತೇನೆ" ಎಂದು ದೇವೇಂದ್ರ ಫಡ್ನವೀಸ್ ಸ್ಪಷ್ಟಪಡಿಸಿದ್ದರು.
ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಅಶೋಕ್ ಚೌಹಾಣ್ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಜೊತೆ ಅಸಮಾಧಾನಗೊಂಡಿದ್ದರು. ಚೌಹಾಣ್ ಸಲಹೆಗಳನ್ನು ಪಟೋಲೆ ಪುರಸ್ಕರಿಸಿರಲಿಲ್ಲ ಎಂಬುದು ಪ್ರಮುಖ ಕಾರಣ ಎಂದು ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ.
ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ನಾಯಕರಾಗಿದ್ದ ಅಶೋಕ್ ಚೌಹಾಣ್ ಬಳಿಕ ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಏರಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದರು. ನಾಂದೇಡ್ ಕ್ಷೇತ್ರದಿಂದ ಅವರು ಸಂಸದರಾಗಿಯೂ ಆಯ್ಕೆಯಾಗಿದ್ದರು.
ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿದ್ದ ಅವರನ್ನು 2008ರಲ್ಲಿ ವಿಲಾಸ್ ರಾವ್ ದೇಶ್ಮುಖ್ ಬಳಿಕ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿತ್ತು. 2009ರ ಚುನಾವಣೆಯಲ್ಲಿ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು. ಆದರ್ಶ ಹೌಸಿಂಗ್ ಸೊಸೈಟಿ ಹಗರಣದಲ್ಲಿ ಬಲವಂತವಾಗಿ ಅವರ ರಾಜೀನಾಮೆ ಪಡೆಯಲಾಗಿತ್ತು.
ಅಶೋಕ್ ಚೌಹಾಣ್ ಬೆಂಬಲಿಗರಾದ 4 ರಿಂದ 6 ಕಾಂಗ್ರೆಸ ಶಾಸಕರು ಇದ್ದಾರೆ. ಇವರು ಸಹ ಈಗ ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆಯೇ? ಎಂಬ ಕುತೂಹಲವಿದೆ. ಅಶೋಕ್ ಚೌಹಾಣ್ 2015 ರಿಂದ 2019ರ ತನಕ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಪ್ರಭಾವಿ ನಾಯಕನ ರಾಜೀನಾಮೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ ಉಂಟು ಮಾಡಿದೆ.












Click it and Unblock the Notifications