ಸ್ನಾತಕೋತ್ತರ ಪದವಿ ಪರೀಕ್ಷೆ ರದ್ದುಗೊಳಿಸಲು 'ಇದೊಂದು' ಕಾರಣ ಸಾಕಾ?
ಮುಂಬೈ, ಜುಲೈ.12: ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸ್ನಾತಕೋತ್ತರ ಮತ್ತು ತಾಂತ್ರಿಕ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂದು ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್ ವಿರೋಧ ವ್ಯಕ್ತಪಡಿಸಿದ್ದಾರೆ.
ಸ್ನಾತಕೋತ್ತರ ಪದವಿ ಮತ್ತು ತಾಂತ್ರಿಕ ಪದವಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಯುಜಿಸಿ ಎಲ್ಲ ಸಿದ್ಧತೆಗಳನ್ನು ಮಾಡುತ್ತಿದೆ.
ವಿಶ್ವವಿದ್ಯಾಲಯಗಳಿಗೆ ವೇಳಾಪಟ್ಟಿ: ಯುಜಿಸಿ ಮಹತ್ವದ ಆದೇಶ
ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ನಿವಾಸ ಮತ್ತು ರಾಜ ಭವನ್ ದಂತಾ ಸುರಕ್ಷಿತ ಸ್ಥಳದಲ್ಲೇ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ. ಇಂಥ ಅಪಾಯಕಾರಿ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಅದೆಷ್ಟು ಸುರಕ್ಷಿತವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಿ ಕೊಡುವುದಕ್ಕೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸುವುದಕ್ಕೆ ಒತ್ತಾಯ
ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದ್ದರಿಂದ ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವಾಲಯ ಮತ್ತು ಯೂನಿವರ್ಟಿಸಿ ಗ್ರ್ಯಾಂಟ್ಸ್ ಕಮೀಷನ್ ಗೆ ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್ ಆಗ್ರಹಿಸಿದ್ದಾರೆ.
ಜೀವಗಳ ಜೊತೆಗೆ ಚೆಲ್ಲಾಟ ಆಡುವುದು ಏಕೆ?
ಕೊವಿಡ್-19 ಸೋಂಕಿನಿಂದ ವಿದ್ಯಾರ್ಥಿಗಳಿಗೆ ಹೆೆಚ್ಚು ಅಪಾಯ ಎಂಬುದು ಮೊದಲೇ ಗೊತ್ತಿರುವ ವಿಚಾರ. ರಾಜಭವನ್ ಮತ್ತು ಅಮಿತಾಬ್ ಬಚ್ಚನ್ ನಿವಾಸವು ಹೆಚ್ಚು ಸುರಕ್ಷಿತ ಪ್ರದೇಶವೇ ಆಗಿರುತ್ತದೆ. ಇಂಥ ಪ್ರದೇಶದಲ್ಲಿಯೇ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಹೀಗಿರುವಾಗ ಪರೀಕ್ಷೆಗಳನ್ನು ನಡೆಸುವುದರ ಮೂಲಕ ವಿದ್ಯಾರ್ಥಿಗಳ ಜೀವದ ಜೊತೆಗೆ ಯುಜಿಸಿ ಚೆಲ್ಲಾಟವಾಡಲು ಹೊರಟಿದೆಯಾ ಎಂದು ಉದಯ್ ಸಾಮಂತ್ ಪ್ರಶ್ನಿಸಿದ್ದಾರೆ. ಈಗಲಾದರೂ ಮಾನವ ಸಂಪನ್ಮೂಲ ಸಚಿವಾಲಯವು ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು, ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ಹಲವರ ವಿರೋಧ
ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ಯುಜಿಸಿ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕೊರೊನಾವೈರಸ್ ಅಟ್ಟಹಾಸದ ನಡುವೆ ಪರೀಕ್ಷೆಗಳನ್ನು ನಡೆಸುವುದನ್ನು ಕೈಬಿಡುವಂತೆ ಆಗ್ರಹಿಸಿದ್ದರು. ನವದೆಹಲಿ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೊತೆಗೆ ಸಿಎಂ ಕೇಜ್ರಿವಾಲ್ ಚರ್ಚಿಸಿದ್ದರು.
ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿರೋಧ
ದೇಶಾದ್ಯಂತ ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕ ಎದುರಾಗಿದ್ದು, ಸಂದಿಗ್ಘ ಪರಿಸ್ಥಿತಿಯಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೂಡಾ ವಿರೋಧ ವ್ಯಕ್ತಪಡಿಸಿದ್ದರು. ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸುವುದಕ್ಕೆ ಯುಜಿಸಿಗೆ ಸಲಹೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದರು.