ಬೆಳಗಾವಿ ಗಡಿ ಗಲಾಟೆ: ಕರ್ನಾಟಕಕ್ಕೆ ಬಸ್ ಸೇವೆ ನಿಲ್ಲಿಸಿದ ಮಹಾರಾಷ್ಟ್ರ
ಮುಂಬೈ, ಡಿಸೆಂಬರ್ 06: ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಹಾರಾಷ್ಟ್ರದ ಲಾರಿಗಳಿಗೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಗಡಿ ತಂಟೆಯನ್ನು ವಿರೋಧಿಸಿದ ಕನ್ನಡ ಕಾರ್ಯಕರ್ತರು ಬಸ್ಗಳಿಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ್ದಾರೆ.
ಅತ್ತ ಮಹಾರಾಷ್ಟ್ರದ ಪುಣೆಯಲ್ಲಿ ಕರ್ನಾಟಕದ ಬಸ್ಗಳಿಗೆ ಶಿವಸೇನಾ ಕಾರ್ಯಕರ್ತರು ಮಸಿ ಹಚ್ಚಿದ್ದಾರೆ. ಪರಿಸ್ಥಿತಿ ಬಿಗಾಡಾಯಿಸುತ್ತಿರುವುದನ್ನು ಅರಿತ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬಸ್ಗಳ ಸೇವೆಯನ್ನು ನಿಲ್ಲಿಸಿದೆ. ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬೀದರ್ ಮಾರ್ಗವಾಗಿ ಬರುವ ಎಲ್ಲಾ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ.
ಮೂಕಪ್ರೇಕ್ಷಕನಂತಾದ ಸರ್ಕಾರ: ಸ್ವಾತಿ ಚತುರ್ವೇದಿ
ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮಹಾರಾಷ್ಟ್ರ ನೋಂದಾಯಿತ ಟ್ರಕ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸದ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮೂಕಪ್ರೇಕ್ಷಕನಂತಾಗಿದೆ ಎಂದು ಶಿವಸೇನಾ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಸ್ವಾತಿ ಚತುರ್ವೇದಿ, 'ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳು ಹಾನಿಗೊಳಗಾಗಿವೆ. ಕನ್ನಡ ಪರ ಕಾರ್ಯಕರ್ತರು ಮಹಾರಾಷ್ಟ್ರದ ವಾಹನಗಳನ್ನು ತಡೆದು ನಿಲ್ಲಿಸಿದ್ದಾರೆ. ಈ ಘಟನೆಗಳನ್ನು ಮಹಾರಾಷ್ಟ್ರ ಸರ್ಕಾರ ಮೂಕ ಪ್ರೇಕ್ಷಕನಂತೆ ನೋಡುತ್ತ ಕುಳಿತಿದೆ. ಇದು ನಾಚಿಕೆಗೇಡಿನ ಸಂಗತಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯೊಂದಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಏಕೆ ಕಠಿಣವಾಗಿ ಮಾತನಾಡಬಾರದು ಎಂದು ಪ್ರಶ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಡೆದಿರುವ ಘಟನೆಗಳು ಮಹಾರಾಷ್ಟ್ರ ರಾಜಕಾರಣಿಗಳನ್ನು ಕೆರಳುವಂತೆ ಮಾಡಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎನ್ಸಿಪಿ ಹಿರಿಯ ನಾಯಕ ಶರದ್ ಪವಾರ್ ಅವರು, 'ಈಗ ನಾವು ನಿರ್ಧರಿಸುವ ಸಮಯ ಬಂದಿದೆ' ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications