Jammu & Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಲು ಪ್ರಮುಖ ಕಾರಣಗಳಿವು
ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. 370ನೇ ವಿಧಿಯನ್ನು ರದ್ದು ಮಾಡಿ, ಜಮ್ಮು ಮತ್ತು ಕಾಶ್ಮೀರವನ್ನು ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳಿಕೊಂಡೇ ಬಿಜೆಪಿ ಭರ್ಜರಿ ಪ್ರಚಾರ ಮಾಡಿತ್ತು. ಮೂರು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಶನಿವಾರ ಹೊರಬಿದ್ದ ಚುನಾವಣೋತ್ತರ ಫಲಿತಾಂಶಗಳು ಬಿಜೆಪಿಗೆ ಆಘಾತ ಕೊಟ್ಟಿವೆ.
ಸಿವೋಟರ್ ಎಕ್ಸಿಟ್ ಪೋಲ್ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ ಫಲಿತಾಂಶ ಬರಲಿದೆ. ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ 40-48 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ 95 ಸದಸ್ಯರ ಬಲ ಇದ್ದು, 90 ಶಾಸಕರು ಚುನಾಯಿತ ಪ್ರತಿನಿಧಿಗಳಾಗಿದ್ದರೆ, ಐವರನ್ನು ಲೆಫ್ಟಿನೆಂಟ್ ಗವರ್ನರ್ ನಾಮ ನಿರ್ದೇಶನ ಮಾಡುತ್ತಾರೆ.

ಸಿವೋಟರ್ ಸಮೀಕ್ಷೆ ಪ್ಕಾರ ಬಿಜೆಪಿ 27-31 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಕಾಶ್ಮೀರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ ಮುಂದುವರೆಸಿದ್ದು, ಜಮ್ಮು ಭಾಗದಲ್ಲಿ ತನ್ನ ಭದ್ರಕೋಟೆಯನ್ನು ಬಲಪಡಿಸಿಕೊಂಡಿದೆ. ಸ್ವತಂತ್ರವಾಗಿ ಸ್ಪರ್ಧೆ ಮಾಡಿದ್ದ ಬಿಜೆಪಿ ಸರ್ಕಾರ ರಚಿಸುವ ಕನಸು ಕಂಡಿತ್ತು, ಆದರೆ ಚುನಾವಣೋತ್ತರ ಫಲಿತಾಂಶಗಳು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಿವೆ.
ಬಿಜೆಪಿ ಸೋಲಿಗೆ ಕಾರಣಗಳೇನು?
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್ರಂತಹ ಘಟಾನುಘಟಿ ನಾಯಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಆದರೂ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದ್ದಾರೆ. ಮುಖ್ಯವಾಗಿ 370ನೇ ವಿಧಿಯನ್ನು ರದ್ದು ಮಾಡಿದ್ದು, ಜನಪರ ನಿರ್ಧಾರ ಎನ್ನುವುದನ್ನು ಮತದಾರರಿಗೆ ಅರ್ಥ ಮಾಡಿಸುವಲ್ಲಿ ಬಿಜೆಪಿ ವಿಫಲವಾಗಿದೆ.
2019ರ ಆಗಸ್ಟ್ ತಿಂಗಳಿನಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ, ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಸಂದರ್ಭದಲ್ಲಿ ಹಲವು ತಿಂಗಳು ಸಾಕಷ್ಟು ನಿರ್ಬಂಧಗಳನ್ನು ಹೇರಲಾಗಿತ್ತು. ಪರಿಸ್ಥಿತಿ ತಿಳಿಯಾದ ಬಳಿಕ ಕೇಂದ್ರ ಸರ್ಕಾರ ಅಭಿವೃದ್ಧು, ಉದ್ಯೋಗ ಮತ್ತು ಭಯೋತ್ಪಾದನೆ ನಿರ್ಮೂಲನೆ ಮಾಡುವ ಭರವಸೆ ನೀಡಿತ್ತು. ಆದರೆ ಆರ್ಟಿಕಲ್ 370 ರದ್ದು ಮಾಡಿದ್ದರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಿರುವ ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಡಲು ವಿಫಲವಾಯಿತು.
ಮತ್ತೊಂದೆಡೆ 370ನೇ ಆರ್ಟಿಕಲ್ ರದ್ದು ಮಾಡಿದ್ದು ಜನ ವಿರೋಧಿ ನಡೆ ಎಂದು ಪ್ರಾದೇಶಿಕ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಪ್ರಚಾರ ಮಾಡಿದವು. ಬಿಜೆಪಿ ಕಾಶ್ಮೀರದ ವಿರೋಧಿ ಎಂದು ಬಿಂಬಿಸಿದವು, ಇದು ಕೂಡ ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ.
ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಕಲ್ಲು ತೂರಾಟದಂತಹ ಘಟನೆಗಳಲ್ಲಿ ಕಠಿಣ ಕ್ರಮ ತೆಗೆದುಕೊಂಡರೂ, ಜನರ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳಲಾಗಿದೆ ಎಂದು ಜನ ಭಾವಿಸಿದರು.
ಕೇಂದ್ರಾಡಳಿತ ಪ್ರದೇಶ ಮಾಡಿದ ಬಳಿಕ, ನಿರುದ್ಯೋಗವನ್ನು ಕಡಿಮೆ ಮಾಡಲು ಬೃಹತ್ ಹೂಡಿಕೆ ಮಾಡುವ ಭರವಸೆ ನೀಡಿತು. ಆದರೆ ಭರವಸೆ ಕೊಟ್ಟಂತೆ ಉದ್ಯೋಗಗಳ ಸೃಷ್ಟಿ ಮಾಡುವಲ್ಲಿ ವಿಫಲವಾಗಿದ್ದು ಜನರ ಅಸಮಾಧಾನಕ್ಕೆ ಕಾರಣವಾಯಿತು.
ಪಿಡಿಪಿ ಮತ್ತು ಎನ್ಸಿ ಪಕ್ಷಗಳನ್ನು ದೂರವಿಟ್ಟು ಅಪ್ನಿ ಪಾರ್ಟಿ ಮತ್ತು ಪೀಪಲ್ಸ್ ಕಾನ್ಫರೆನ್ಸ್ನಂತಹ ಹೊಸ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಯವ ಮೂಲಕ ತನ್ನ ಪ್ರಾಬಲ್ಯ ವಿಸ್ತರಿಸಲು ಪ್ರಯತ್ನ ಮಾಡಿತು. ಆದರೆ ಎನ್ಸಿ, ಪಿಡಿಪಿಯಂತಹ ಪ್ರಮುಖ ಪಕ್ಷಗಳನ್ನು ಕಡೆಗಣಿಸಿದ್ದು ಹಿನ್ನಡೆಗೆ ಕಾರಣವಾಯಿತು.












Click it and Unblock the Notifications