ಮಲ್ಲಿಕಾರ್ಜುನ ಖರ್ಗೆಯನ್ನು ಬಲಿಪಶು ಮಾಡಿತಾ ಕಾಂಗ್ರೆಸ್?
ನವದೆಹಲಿ, ಅಕ್ಟೋಬರ್ 27: ಭಾರತದಲ್ಲಿ ಮುಂದೆೆ ನಡೆಯಲಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಭಂಗ ಅನುಭವಿಸಿದರೆ ಅದಕ್ಕೆ ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆರನ್ನು ಬಲಿಪಶು ಮಾಡಲಾಗುವುದು ಎಂದು ಬಿಜೆಪಿ ದೂಷಿಸಿದೆ.
ಅಖಿಲ ಭಾರತ ಕಾಂಗ್ರೆಸ್ ಕಮಿತಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಹೊಸ್ತಿಲಿನಲ್ಲಿಯೇ ನಡೆಯಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಕಳಪೆ ಪ್ರದರ್ಶನ ನೀಡಿದರೆ ಅವರನ್ನೇ ಬಲಿಪಶು ಮಾಡಲಾಗುವುದು ಎಂದು ಬಿಜೆಪಿ ಹೇಳುತ್ತಿದೆ.
ಹಿರಿಯ ಕಾಂಗ್ರೆಸ್ ನಾಯಕನ ಸ್ಥಾನಕ್ಕೇರುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದರು. ಉತ್ತರದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕುಟುಂಬ ರಾಜಕಾರಣದ ಆಡಳಿತವನ್ನು ಸೂಚಿಸುತ್ತದೆ. ಈ ಹಿಂದೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ "ಸುಳ್ಳು ಮತ್ತು ದ್ವೇಷದ ವ್ಯವಸ್ಥೆಯನ್ನು" ಕಾಂಗ್ರೆಸ್ ತೊಡೆದು ಹಾಕುತ್ತದೆ ಎಂದು ಹೇಳಿದ್ದರು.

ಖರ್ಗೆ ಎದುರು ಉಭಯ ರಾಜ್ಯಗಳ ಚುನಾವಣೆ ಸವಾಲು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸದಾಗಿ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಮೊದಲ ಸವಾಲು ಎದುರಾಗಿದೆ. 24 ವರ್ಷಗಳ ನಂತರದಲ್ಲಿ ಪಕ್ಷದ ನೇತೃತ್ವವನ್ನು ಗಾಂಧಿಯೇತರ ಕುಟುಂಬದ ವ್ಯಕ್ತಿಯೊಬ್ಬರು ವಹಿಸಿಕೊಂಡಿದ್ದು ಆಗಿದೆ. ಗಾಂಧಿ ಕುಟುಂಬದವರು ಸ್ಪರ್ಧೆಯಿಂದ ಹೊರಗುಳಿದ ನಂತರ ನೇರ ಸ್ಪರ್ಧೆಯಲ್ಲಿ ಶಶಿ ತರೂರ್ ಅನ್ನು ಮಲ್ಲಿಕಾರ್ಜುನ ಖರ್ಗೆ ಸೋಲಿಸಿದರು. ವಿರೋಧ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಗೆ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯು ಮೊದಲ ಸವಾಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ
ಹಿಮಾಚಲ ಪ್ರದೇಶ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತಗಳ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 27 ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ವಾಪಸ್ ಪಡೆಯುವುದಕ್ಕೆ ಅಕ್ಟೋಬರ್ 29 ಕೊನೆಯ ದಿನವಾಗಿದೆ

ಗುಜರಾತ್ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿಲ್ಲ
ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದೇ ದಿನ ದಿನಾಂಕ ಪ್ರಕಟವಾಗಬೇಕಿತ್ತು. ಆದರೆ ಒಂದು ತಿಂಗಳ ಅಂತರದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ನಿರ್ಧರಿಸಿದೆ. ಹೀಗಾಗಿ ಈ ಹಿಂದೆ ಹಿಮಾಚಲ ಪ್ರದೇಶ ಚುನಾವಣೆ ದಿನಾಂಕವನ್ನು ಮಾತ್ರ ಪ್ರಕಟಿಸಲಾಗಿತ್ತು.

ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಸ್ವೀಕಾರ
ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸಿದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ಸಿನ ಅಗ್ರಗಣ್ಯ ನಾಯಕರು ಹಾಜರಾಗಿದ್ದರು. ಸಂಸದ ರಾಹುಲ್ ಗಾಂಧಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಪಾಲ್ಗೊಂಡಿದ್ದರು.
ಕಳೆದ 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಇನ್ನು ಮುಂದೆ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿದ್ದಾರೆ. 1972 ರಿಂದ 2008ರ ತನಕ 9 ಬಾರಿ ಶಾಸಕರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದಾರೆ. 2009 ರಿಂದ 2019ರ ತನಕ 2 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.












Click it and Unblock the Notifications