ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
ನಗ್ಡಾ, ನವೆಂಬರ್ 25: ಭಾರತ್ ಜೋಡೊ ಯಾತ್ರೆಯ ಹಿನ್ನೆಲೆಯಲ್ಲಿ ಇಂದೋರ್ಗೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದ ಪೋಲಿಸರು ಬಂಧಿಸಿದ್ದಾರೆ.
ಬಂಧನದ ಕುರಿತು ನಗ್ಡಾ ಪೊಲೀಸರು ಇಂದೋರ್ ಕ್ರೈಂ ಬ್ರಾಂಚ್ಗೆ ಮಾಹಿತಿ ನೀಡಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ನಗ್ಡಾ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಕುಮಾರ್ ಶುಕ್ಲಾ, 'ವ್ಯಕ್ತಿಯೊಬ್ಬ ರಾಹುಲ್ ಗಾಂಧಿಯನ್ನು ಕೊಲ್ಲುವ ಬೆದರಿಕೆಯ ಒಡ್ಡಿದ್ದ. ಆತನನ್ನು ಬಂಧಿಸಲಾಗಿದೆ. ಶಂಕಿತನ ಫೋಟೊವನ್ನು ಪೊಲೀಸರು ಇಂದೋರ್ ಕ್ರೈಂ ಬ್ರಾಂಚ್ ಪೊಲೀಸರು ನನಗೆ ಕಳುಹಿಸಿದ್ದರು' ಎಂದು ಹೇಳಿದ್ದಾರೆ.

ಈ ಫೋಟೊ ಆಧಾರದ ಮೇಲೆ, ನಗ್ಡಾದ ಬೈಪಾಸ್ನಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರು ಸ್ಥಳಕ್ಕೆ ತಲುಪಿದರು. ವ್ಯಕ್ತಿಯನ್ನು ಹಿಡಿದು ಪೊಲೀಸ್ ಠಾಣೆಗೆ ಕರೆತಂದರು. ಆಧಾರ್ ಕಾರ್ಡ್ನಲ್ಲಿರುವ ವಿಳಾಸ ಪ್ರಕಾರ, ಶಂಕಿತನು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಬಂದಿದ್ದಾನೆ' ಎಂದು ಶುಕ್ಲಾ ಹೇಳಿದ್ದಾರೆ.
ಇಂದೋರ್ ಪೊಲೀಸರು ಸಂಪೂರ್ಣ ತನಿಖೆ ನಡೆಸಿದ ನಂತರ ಪರಿಸ್ಥಿತಿ ತಿಳಿಯಾಗಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭರವಸೆ ನೀಡಿದ್ದಾರೆ.

ಕಳೆದ ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಭಾರತ್ ಜೋಡೊ ಯಾತ್ರೆ ಆರಂಭವಾಗಿದೆ. ಇದು 3500 ಕಿಮೀ ದೂರವನ್ನು ಕ್ರಮಿಸಲಿದ್ದು, ಕಾಶ್ಮೀರದ ಶ್ರೀನಗರದಲ್ಲಿ ಕೊನೆಗೊಳ್ಳಲಿದೆ. ಯಾತ್ರೆಯು ಈಗಾಗಲೇ ಆರು ರಾಜ್ಯಗಳಲ್ಲಿ ಕ್ರಮಿಸಿದೆ. ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂದ್ರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಯಾತ್ರೆ ಕ್ರಮಿಸಿದೆ. ಪ್ರಸ್ತುತ ಮಧ್ಯ ಪ್ರದೇಶದಲ್ಲಿ ಯಾತ್ರೆ ಸಾಗುತ್ತಿದೆ. ಇದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರು, ಕಲಾವಿದರು, ಕಾರ್ಮಿಕರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಲಕ್ಷಾಂತರ ಜನರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.












Click it and Unblock the Notifications