ಮಗನ ಮದುವೆಗೆ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸಿದ ಸಂಸದೆ ಸುಮಲತಾ ಅಂಬರೀಶ್
ನವದೆಹಲಿ, ಏಪ್ರಿಲ್. 05: ಕರುನಾಡಿನ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಂಬರೀಶ್ ವಿವಾಹ ನಿಶ್ಚಯವಾಗಿದ್ದು, ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ. ಸ್ವತಃ ಅಭಿಷೇಕ್ ಅಂಬರೀಶ್ ಮತ್ತು ಮಂಡ್ಯ ಸಂಸದೆ ಸಮಲತಾ ಅಂಬರೀಶ್ ಆಹ್ವಾನ ಪತ್ರಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿರುವ ತಾಯಿ ಮಗನ ಜೋಡಿ ಇನ್ನೆರಡು ತಿಂಗಳಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಕೆಲವು ತಿಂಗಳ ಹಿಂದೆಯಷ್ಟೇ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ನಿಶ್ಚತಾರ್ಥ ನಡೆದಿತ್ತು.

ಜೂನ್ ಮೊದಲ ವಾರದಲ್ಲಿ (ಜೂನ್ 5ಕ್ಕೆ) ಈ ಜೋಡಿಯ ಮದುವೆ ನಡೆಯಲಿದ್ದು, ಬೆಂಗಳೂರಿನಲ್ಲಿಯೇ ಅದ್ಧೂರಿ ವಿವಾಹ ನಡೆಯಲಿದೆ ಎನ್ನಲಾಗಿದೆ. ಈಗಾಗಲೇ ಆಮಂತ್ರಣ ಪತ್ರಿಕೆ ಹಂಚಿಕೆ ಮಾಡಲಾಗುತ್ತಿದ್ದು, ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಪ್ರಧಾನಿ ಮೋದಿ ಜೊತೆಗೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಲವು ಪ್ರಮುಖ ಸಂಸದರು ಹಾಗೂ ಸಚಿವರುಗಳಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತದೆ.
ಇತ್ತೀಚೆಗಷ್ಟೆ ಬಿಜೆಪಿ ಪಕ್ಷಕ್ಕೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ಘೋಷಿಸಿದ್ದರು. ಈಗ ಮಗನ ಜೊತೆಗೆ ತೆರಳಿ ಪ್ರಧಾನಿ ಮೋದಿಯವರಿಗೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಈ ಕುರಿತಂತೆ ಸುಮತಲಾ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋ ಮತ್ತು ವಿಷಯವನ್ನು ಹಂಚಿಕೊಂಡಿದ್ದಾರೆ.
"ಭಾರತಕ್ಕೆ ಮತ್ತು ಕರ್ನಾಟಕಕ್ಕೆ ಇಂತಹ ಭರವಸೆಯ ನಾಯಕರು ಮತ್ತು ನಾಯಕತ್ವ ಅಗತ್ಯವಿದೆ ಎನ್ನುವ ದೃಢವಾದ ನಂಬಿಕೆ ನನ್ನದು. ಅಭಿಷೇಕ್ ಅಂಬರೀಶ್ ಅವರ ಮದುವೆಗೆ ಆಗಮಿಸುವಂತೆ ಅವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆಯಲಾಯಿತು" ಎಂದು ಆಹ್ವಾನ ಪತ್ರಿಕೆ ನೀಡುತ್ತಿರುವ ಫೋಟೋವನ್ನು ಹಂಚಿಕೊಂಡು ಸುಮಲತಾ ಟ್ವೀಟ್ ಮಾಡಿದ್ದಾರೆ.
ಭಾರತಕ್ಕೆ ಮತ್ತು ಕರ್ನಾಟಕಕ್ಕೆ ಇಂತಹ ಭರವಸೆಯ ನಾಯಕರು ಮತ್ತು ನಾಯಕತ್ವ ಅಗತ್ಯವಿದೆ ಎನ್ನುವ ದೃಢವಾದ ನಂಬಿಕೆ ನನ್ನದು. ಅಭಿಷೇಕ್ ಅಂಬರೀಶ್ ಅವರ ಮದುವೆಗೆ ಆಗಮಿಸುವಂತೆ ಅವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆಯಲಾಯಿತು. pic.twitter.com/MGdPjoRL4U
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) April 5, 2023
"ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಹಾಗೂ ದೇಶದ ಪ್ರಗತಿಗಾಗಿ ಸದಾ ಸಮರ್ಪಣಾ ಮನೋಭಾವ ಹೊಂದಿರುವ ನಾಯಕರಿಂದ ಪುತ್ರ ಅಭಿಷೇಕ್ ಅಂಬರೀಶ್ ಅವರು ಆಶೀರ್ವಾದ ಪಡೆಯುವಂತಹ ಸೌಭಾಗ್ಯವನ್ನು ಇಂದು ಪಡೆದರು. ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತವು ಭವಿಷ್ಯದಲ್ಲಿ ಇನ್ನೂ ಮಹತ್ತರವಾದ ಹೆಜ್ಜೆಗಳನ್ನು ಇಡಲಿದೆ ಎನ್ನುವ ವಿಶ್ವಾಸ ನನ್ನದು" ಎಂದೂ ಟ್ವೀಟ್ ಮಾಡಿದ್ದಾರೆ.

"ಇದೇ ಸಂದರ್ಭದಲ್ಲಿ ರಾಜ್ಯದ ಮತ್ತು ನನ್ನ ಮಂಡ್ಯ ಕ್ಷೇತ್ರದ ಬಗ್ಗೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ಮಾನ್ಯ ಪ್ರಧಾನಿಗಳು ಮಂಡ್ಯಕ್ಕೆ ಬಂದಾಗ ನನ್ನ ಸ್ವಾಭಿಮಾನಿ ಜನತೆ ಅವರನ್ನು ಬರಮಾಡಿಕೊಂಡ ರೀತಿಯನ್ನು ನೆನಪಿಸಿಕೊಂಡು ಶ್ಲ್ಯಾಘಿಸಿದರು. ಮಂಡ್ಯ ಹಾಗೂ ಕರ್ನಾಟಕದ ಬಗ್ಗೆ ಅವರಿಗಿರುವ ಅಪಾರವಾದ ಅಭಿಮಾನಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು" ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗಿನ ಫೋಟೋ ಹಂಚಿಕೊಂಡಿರುವ ಮದುಮಗ ಅಭಿಷೇಕ್ ಅಂಬರೀಶ್ ಕೂಡ, "ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾಗಿರುವುದು ನಿಜವಾದ ಗೌರವ" ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ್ದ ಲೋಕಸಭೆಯಲ್ಲಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸುವ ಸುಮಲತಾ ಅವರು ತಾವು ಇರುವವರೆಗೂ ತಮ್ಮ ಮಗ ಅಭಿಷೇಕ್ ರಾಜಕೀಯಕ್ಕೆ ಬರುವುದಿಲ್ಲ ಎಂದು ಭರವಸೆ ನೀಡಿದರು. ಅವರು ಕುಟುಂಬ ರಾಜಕಾರಣದ ವಿರುದ್ಧವಾಗಿರುವುದಾಗಿಯೂ ಘೋಷಿಸಿದ್ದರು.












Click it and Unblock the Notifications