ಮಣಿಪುರದಲ್ಲಿ ಕಾಂಗ್ರೆಸ್ ಗೆದ್ದರೆ ಯುವಕರಿಗೆ ನಿರುದ್ಯೋಗಿ ಭತ್ಯೆ; ಪ್ರಿಯಾಂಕಾ ಗಾಂಧಿ
ನವದೆಹಲಿ, ಫೆಬ್ರವರಿ 15: ಮಣಿಪುರ ವಿಧಾನಸಭೆ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಯುವಕರಿಗೆ ನಿರುದ್ಯೋಗಿ ಭತ್ಯೆ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪರ ವರ್ಚುವಲ್ ಮೆರವಣಿಗೆಯನ್ನು ನಡೆಸಿದ ಪ್ರಿಯಾಂಕಾ ಗಾಂಧಿ, ರಾಜ್ಯದ ನಿರುದ್ಯೋಗ ಸಮಸ್ಯೆ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ, ರಾಜ್ಯದ ಪ್ರತಿಯೊಬ್ಬ ನಿರುದ್ಯೋಗಿ ಯುವಕರಿಗೂ ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಿಸಿದರು.
ಮಣಿಪುರ ವಿಧಾನಸಭೆ ಚುನಾವಣೆ ದಿನಾಂಕ ಬದಲಾವಣೆ
ಮಣಿಪುರದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಬಿಜೆಪಿ ಸರ್ಕಾರ ರಚನೆಯಾದ ನಂತರದ ಐದು ವರ್ಷಗಳಲ್ಲಿ ಒಂದೇ ಒಂದು ಬಾರಿ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಗಳು ನಡೆದಿಲ್ಲ ಎಂದು ದೂಷಿಸಿದರು. ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಪ್ರಿಯಾಂಕಾ ಗಾಂಧಿ ಚರ್ಚೆ ನಡೆಸಿದರು.
ಮಣಿಪುರದಲ್ಲಿ ಸಮಸ್ಯೆಗಳ ಸಂಖ್ಯೆ ಹೆಚ್ಚಳ:
ಬಿಜೆಪಿ ಮೈತ್ರಿ ಸರ್ಕಾರವು ಅಸ್ತಿತ್ವದಲ್ಲಿ ಇರುವ ಮಣಿಪುರದಲ್ಲಿ ಸಮಸ್ಯೆಗಳು ಹೆಚ್ಚುತ್ತವೇ ಇವೆ. ಜನರಿಗೋಸ್ಕರ ಕೆಲಸ ಮಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಅನುಭವಿಸುತ್ತಿದೆ. ಈಶಾನ್ಯ ರಾಜ್ಯದ ವಿದ್ಯುತ್ ವಲಯದಲ್ಲಿ ಅಭಿವೃದ್ಧಿಯನ್ನು ಮಾಡಬೇಕಿದೆ. ಮಣಿಪುರದ ಜನರಿಗೆ ಉತ್ತಮ ಹಾಗೂ ಶುದ್ಧ ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಒದಗಿಸುವುದು ಕಾಂಗ್ರೆಸ್ ಪಕ್ಷದ ಪ್ರಮುಖ ಗುರಿಯಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ರಾಜ್ಯದ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸಬೇಕಿದೆ. ಆ ಮೂಲಕ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯು ಜಾತಿ, ಧರ್ಮದ ಮೇಲೆ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ. ಕಾಂಗ್ರೆಸ್ ಅಭಿವೃದ್ಧಿಯ ಮೇಲೆ ರಾಜಕೀಯವನ್ನು ಮಾಡುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಮಣಿಪುರದಲ್ಲಿ 2 ಹಂತಗಳಲ್ಲಿ ಮತದಾನ:
ಮಣಿಪುರದ 60 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ಫೆಬ್ರವರಿ 27ರಂದು 38 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸೈಕುಲ್, ಕಂಗ್ ಪೊಕ್ಪಿ, ಸೈತು, ತಿಪಾಯಿಮುಖ್, ಥಾಂಲೊನ್, ಹೆಂಗ್ಲೆಪ್, ಚುರಾಚಂದಾಪುರ್, ಸಾಯಿಕೋಟ್ ಹಾಗೂ ಸಿಂಘಾಟ್ ಕ್ಷೇತ್ರಗಳು ಗುಡ್ಡಗಾಡು ಪ್ರದೇಶದಲ್ಲಿದ್ದು ಈ ಪ್ರದೇಶದಲ್ಲಿ ಬಹುತೇಕ ಕ್ರೈಸ್ತ ಸಮುದಾಯದ ಮತದಾರರಿದ್ದಾರೆ. ಎರಡನೇ ಮತದಾನ ಮಾರ್ಚ್ 3 ರಂದು ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರ ಬರಲಿದೆ.