ಮಣಿಪುರ ಚುನಾವಣೆ; ಸ್ವತಂತ್ರವಾಗಿ ಎನ್ಪಿಪಿ ಸ್ಪರ್ಧೆ?
ಇಂಫಾಲ, ಡಿಸೆಂಬರ್ 03; ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಎನ್ಪಿಪಿ ಪಕ್ಷ ಸ್ವತಂತ್ರವಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದೆ. ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಸ್ತಿತ್ವದಲ್ಲಿದ್ದು, ಎನ್ಪಿಪಿ ಪಕ್ಷ ಸರ್ಕಾರದ ಭಾಗವಾಗಿದೆ.
ಮೇಘಾಲಯ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ 2022ರ ವಿಧಾನಸಭೆ ಚುನಾವಣೆಯಲ್ಲಿ ಮಣಿಪುರದಲ್ಲಿ 40 ರಿಂದ 45 ಸ್ಥಾನಗಳಲ್ಲಿ ಸ್ವತಂತ್ರವಾಗಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.
60 ಸದಸ್ಯ ಬಲದ ಮಣಿಪುರ ವಿಧಾನಸಭೆಗೆ 2022ರ ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಎನ್ಪಿಪಿ ಪಾಲುದಾರ. ಉಪಮುಖ್ಯಮಂತ್ರಿ ಮತ್ತು ಇಬ್ಬರು ಸಚಿವರು ಎನ್ಪಿಪಿ ಪಕ್ಷದ ಶಾಸಕರಾಗಿದ್ದಾರೆ.

ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಕಾನ್ರಾಡ್ ಸಂಗ್ಮಾ ಈ ಕುರಿತು ಮಾತನಾಡಿದ್ದಾರೆ, "30 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಸ್ವತಂತ್ರವಾಗಿ ಸ್ಪರ್ಧಿಸುವ ಕುರಿತು ಪ್ರಾಥಮಿಕ ಚರ್ಚೆ ನಡೆದಿದೆ" ಎಂದು ಹೇಳಿದ್ದಾರೆ.
"ಎನ್ಪಿಪಿಯ ಚುನಾವಣಾ ಸಮಿತಿ ಈ ಕುರಿತು ವರದಿ ನೀಡಲಿದೆ. 30 ಸ್ಥಾನಗಳಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. 40 ರಿಂದ 45 ಸ್ಥಾನಗಳಲ್ಲಿ ಕಣಕ್ಕಿಳಿಯುವ ಕುರಿತು ಸಮಿತಿ ಕೇಂದ್ರ ಚುನಾವಣಾ ಸಮಿತಿಗೆ ವರದಿ ನೀಡಲಿದೆ. ಆ ವರದಿಗಾಗಿ ಕಾಯುತ್ತಿದ್ದೇವೆ" ಎಂದು ಕಾನ್ರಾಡ್ ಸಂಗ್ಮಾ ತಿಳಿಸಿದ್ದಾರೆ.
ಮಣಿಪುರದಲ್ಲಿನ ಆಡಳಿತ ಮತ್ತು ಪ್ರತಿಪಕ್ಷಗಳು ಈಗಾಗಲೇ ಚುನಾವಣಾ ತಯಾರಿ ಆರಂಭಿಸಿವೆ. ಪ್ರಚಾರ ಸಭೆಗಳನ್ನು ನಡೆಸುತ್ತಿವೆ. ಕಾನ್ರಾಡ್ ಸಂಗ್ಮಾ ಕೆಲವು ದಿನಗಳ ಹಿಂದೆ ಮಣಿಪುರಕ್ಕೆ ಭೇಟಿ ನೀಡಿದ್ದರು, ಪಕ್ಷದ ನಾಯಕರ ಜೊತೆ ಸಭೆಯನ್ನು ನಡೆಸಿದ್ದರು, ಕೆಲವು ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ್ದರು.
2017ರ ವಿಧಾನಸಭೆ ಚುನಾವಣೆಯಲ್ಲಿ ಎನ್ಪಿಪಿ 4 ಸ್ಥಾನಗಳಲ್ಲಿ ಜಯಗಳಿಸಿತ್ತು. ರಾಜ್ಯದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ರಚನೆ ಮಾಡಲು ಕೈ ಜೋಡಿಸಿತ್ತು. ಆದರೆ 2022ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯಲು ಬಯಸುತ್ತಿರುವುದು ಏಕೆ? ಎಂಬುದು ಸ್ಪಷ್ಟವಾಗಿಲ್ಲ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 60ರ ಪೈಕಿ 28 ಸೀಟುಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ಗೆ ಮೂವರು ಸದಸ್ಯರ ಕೊರತೆ ಇತ್ತು. 21 ಸ್ಥಾನದಲ್ಲಿ ಗೆದ್ದು 2ನೇ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಮೈತ್ರಿ ಮಾಡಿಕೊಂಡ ಸರ್ಕಾರ ರಚನೆ ಮಾಡಿತು.
ಚುನಾವಣಾ ಪೂರ್ವ ಸಮೀಕ್ಷೆಗಳು; ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ. ಎಬಿಪಿ ಮತ್ತು ಸಿ-ವೋಟರ್ ಸಮೀಕ್ಷೆ ಪ್ರಕಾರ ಮಣಿಪುರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ.
ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 28, ಕಾಂಗ್ರೆಸ್ 23, ಎನ್ಪಿಎಫ್ 6, ಇತರರು 3 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಕೆಲವು ದಿನಗಳ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಜಯಗಳಿಸಿದ್ದು, ಕಾಂಗ್ರೆಸ್ಗೆ ಹಿನ್ನಡೆಯಾಗಿದೆ.
ಮಣಿಪುರ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇಲ್ಲ. ಆಗಸ್ಟ್ನಲ್ಲಿ ಪಕ್ಷ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. ಆಗ 6 ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಅವಿಶ್ವಾಸ ನಿರ್ಣಯದ ಮತದಾನ ನಡೆಯುವ ದಿನ 8 ಶಾಸಕರು ಗೈರಾದರು.
ಅಕ್ಟೋಬರ್ 30ರಂದು ರಾಜ್ಯದ 9 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಿತು. ಬಿಜೆಪಿ ಮೈತ್ರಿಕೂಟ ಎಲ್ಲಾ ಸ್ಥಾನಗಳಲ್ಲಿ ಗೆದ್ದುಬೀಗಿತು. ಹಲವು ವರ್ಷಗಳ ಕಾಲ ರಾಜ್ಯವನ್ನು ಆಳಿದ ಕಾಂಗ್ರೆಸ್ ಪಕ್ಷ ಉಪ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿ ಮುಖಭಂಗ ಅನುಭವಿಸಿತು.












Click it and Unblock the Notifications