Manmohan Singh: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ
ಭಾರತದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು, ದೆಹಲಿಯ ಏಮ್ಸ್ನಲ್ಲಿ ಅವರನ್ನು ದಾಖಲಿಸಲಾಗಿತ್ತು, ಆರೋಗ್ಯಸ್ಥಿತಿ ಗಂಭೀರವಾಗಿದ್ದ ಕಾರಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ನಿಧನರಾದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಕಾಂಗ್ರೆಸ್ ಪಕ್ಷದವರಾದರೂ ಎಲ್ಲಾ ಪಕ್ಷಗಳ ನಾಯಕರ ಜೊತೆ ಅವರು ಉತ್ತಮ ಬಾಂಧವ್ಯ ಹೊಂದಿದ್ದರು. ಬಹಿರಂಗವಾಗಿ ಯಾರ ವಿರುದ್ಧವೂ ಜೋರು ದನಿಯಲ್ಲಿ ಕೂಡ ಮಾತನಾಡದ ಮನಮೋಹನ್ ಸಿಂಗ್ ಕೆಲಸದಿಂದಲೇ ಸದ್ದು ಮಾಡಿದವರು.

ಮನಮೋಹನ್ ಸಿಂಗ್ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಂಸದೆ ಪ್ರಿಯಾಂಕ ವಾದ್ರಾ ಆಸ್ಪತ್ರೆಗೆ ಭೇಟಿ ನೀಡಿದ್ದು ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ. ಬೆಳಗಾವಿಯಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ದೆಹಲಿಗೆ ಪ್ರಯಾಣಿಸಿದರು.
ಮನಮೋಹನ್ ಸಿಂಗ್ ನಿಧನಕ್ಕೆ ಹಲವು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, "ಭಾರತವು ಅತ್ಯಂತ ಪ್ರತಿಷ್ಠಿಯ ನಾಯಕರಲ್ಲಿ ಒಬ್ಬರಾಡ ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡಿದೆ. ಹಣಕಾಸು ಸಚಿವರಾಗಿ ಸೇರಿದಂತೆ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಭಾರತದ ಆರ್ಥಿಕ ನೀತಿಯ ಮೇಲೆ ಅವರ ಪ್ರಭಾವವಿದೆ. ಪ್ರಧಾನಿಯಾಗಿ ದೇಶದ ಜನತೆಯೆ ಜೀವನ ಸುಧಾರಿಸಲು ವ್ಯಾಪಕ ಪ್ರಯತ್ನ ಮಾಡಿದರು" ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅಪ್ರತಿಮ ಬುದ್ಧಿವಂತಿಕೆಯ ರಾಜನೀತಿಜ್ಞ, ಅವರ ನಾಯಕತ್ವ ಮತ್ತು ದೃಷ್ಟಿ ನಮ್ಮ ದೇಶದ ಮೇಲೆ ಅಳಿಸಲಾಗದ ಗುರುತಾಗಿದೆ. ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ನಾನು ಮೊದಲ ಬಾರಿಗೆ ಕರ್ನಾಟಕದ ಸಿಎಂ ಆಗಿದ್ದೇನೆ. ನಮ್ಮ ಬಜೆಟ್ ಕಾರ್ಯಕ್ರಮಗಳಿಗೆ ಅವರ ಪ್ರೋತ್ಸಾಹ ಮತ್ತು ಆಹಾರ ಹಕ್ಕು ಕಾಯಿದೆಯಂತಹ ಹೆಗ್ಗುರುತು ಯುಪಿಎ ನೀತಿಗಳು ಕರ್ನಾಟಕದ ಪ್ರಗತಿ ಮತ್ತು ಕಲ್ಯಾಣಕ್ಕೆ ಸಹಾಯ ಮಾಡಿತು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಎಂದು ಹೇಳಿದ್ದಾರೆ.
ಕರ್ನಾಟಕ ವಿಪಕ್ಷ ನಾಯಕ ಆರ್ ಅಶೋಕ್ ಟ್ವಿಟ್ ಮಾಡಿದ್ದು, "ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ. ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ." ಎಂದು ಹೇಳಿದ್ದಾರೆ.












Click it and Unblock the Notifications