ಉತ್ತರ ಕಾಶಿಯಲ್ಲಿ ಕಮರಿಗೆ ಉರುಳಿದ ಬಸ್, 12 ಮಂದಿ ಸಾವು
ಉತ್ತರಾಖಂಡ್ ನ ಉತ್ತರಕಾಶಿ ಜಿಲ್ಲೆಯಲ್ಲಿ 150 ಆಳದ ಕಮರಿಗೆ ಬಸ್ ಉರುಳಿ, 12 ಮಂದಿ ಸಾವನ್ನಪ್ಪಿ, 13 ಮಂದಿ ಗಾಯಗೊಂಡ ಘಟನೆ ನವೆಂಬರ್ 18ರ ಭಾನುವಾರ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಜಂಕಿಚಟ್ಟಿಯಿಂದ ವಿಕಾಸ್ ನಗರಕ್ಕೆ ಈ ಖಾಸಗಿ ಬಸ್ ತೆರಳುತ್ತಿತ್ತು ದಮ್ತಾ ಬಳಿ ಕಮರಿಗೆ ಬಸ್ ಉರುಳಿತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಚೌಹಾಣ್ ತಿಳಿಸಿದ್ದಾರೆ.
ಸ್ಥಳದಲ್ಲೇ ಹತ್ತು ಮಂದಿ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಸ್ಥಳೀಯ ನಿವಾಸಿಗಳ ಸಹಾಯದೊಂದಿಗೆ ಪೊಲೀಸರು ಶೋಧ ಹಾಗೂ ಪರಿಹಾರ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ನಲ್ಲೇ ಒಂದಿಷ್ಟು ದೇಹಗಳು ಸಿಲುಕಿಕೊಂಡಿರಬಹುದು ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹೆಲಿಕಾಪ್ಟರ್ ನಲ್ಲಿ ಡೆಹ್ರಾಡೂನ್ ಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಕಮರಿಯೊಳಗೆ ಬಿದ್ದ ಬಸ್, ಯುಮುನಾ ನದಿಯಿಂದ ಸ್ವಲ್ಪ ದೂರದಲ್ಲಿ ನಿಂತಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೃತರಿಗೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಶೀಘ್ರವೇ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.












Click it and Unblock the Notifications