Manipur: ಇಬ್ಬರು ವಿದ್ಯಾರ್ಥಿಗಳ ಹತ್ಯೆ ಫೋಟೊ ವೈರಲ್- ಮಣಿಪುರದಲ್ಲಿ ತೀವ್ರಗೊಂಡ ಪ್ರತಿಭಟನೆ, ಹಿಂಸಾಚಾರ
ಗುವಾಹಟಿ, ಸೆಪ್ಟೆಂಬರ್ 26: ಮಣಿಪುರದ ರಾಜಧಾನಿ ಇಂಫಾಲ್ನಲ್ಲಿ ಶಂಕಿತ ಶಸ್ತ್ರಧಾರಿಗಳಿಂದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯಾಗಿದೆ. ಇದಕ್ಕೆ ಸಂಬಂಧಿಸಿದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಬರ್ಬರ ಕೃತ್ಯವನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂತ್ರಸ್ತರಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದ್ದಾರೆ.
ಆಕ್ರೋಶಭರಿತ ವಿದ್ಯಾರ್ಥಿಗಳು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸದ ಕಡೆಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಇವರನ್ನು ಪೊಲೀಸರು ತಡೆದಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಸಿಡಿಸಿದೆ. ಗಾಳಿಯಲ್ಲಿ ಗುಂಡುಗಳನ್ನು ಹಾರಿಸಿದೆ. ಘಟನೆಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸುಮಾರು ಐದು ತಿಂಗಳ ನಿಷೇಧದ ನಂತರ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಮರುಸ್ಥಾಪಿಸಲಾಗಿದೆ. ಇದಾದ ಕೆಲ ಗಂಟೆಗಳಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರವು ಉತ್ತುಂಗದಲ್ಲಿ ಇದ್ದಾಗಲೇ ಜುಲೈ 6 ರಂದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಫೋಟೋಗಳಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಕಂಡುಬಂದಿದ್ದಾರೆ. 17 ವರ್ಷದ ಹುಡುಗಿ ಮತ್ತು 20 ವರ್ಷದ ಯುವಕ ಈ ಫೋಟೊದಲ್ಲಿದ್ದಾರೆ. ಇವರ ಹಿಂದೆ ಸಶಸ್ತ್ರ ಗುಂಪು ಇರುವುದು ಕಂಡುಬಂದಿದೆ. ಅವರ ಹಿಂದೆ, ಬಂದೂಕುಗಳನ್ನು ಹಿಡಿದ ಇಬ್ಬರು ವ್ಯಕ್ತಿಗಳು ಸ್ಪಷ್ಟವಾಗಿ ಗೋಚರಿಸುತ್ತಾರೆ.
ಇನ್ನೊಂದು ಫೋಟೋದಲ್ಲಿ ಇದೇ ವಿದ್ಯಾರ್ಥಿಗಳು ಬರ್ಬರವಾಗಿ ಹತ್ಯೆಯಾಗಿ ಹುಲ್ಲುಹಾಸಿನ ಮೇಲೆ ಬಿದ್ದಿರುವುದು ಕಂಡುಬಂದಿದೆ. ಅಪ್ರಾಪ್ತರನ್ನು ಹತ್ಯೆ ಮಾಡುವ ಮೊದಲು ಅತ್ಯಾಚಾರ ಎಸಗಿರುವ ಆರೋಪಗಳು ಕೇಳಿಬಂದಿವೆ. ತನಿಖಾಧಿಕಾರಿಗಳು ಇದನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಣಿಪುರ ಸರ್ಕಾರವು ಜನರನ್ನು ಸಂಯಮದಿಂದ ಇರುವಂತೆ ಮನವಿ ಮಾಡಿಕೊಂಡಿದೆ. ಇಬ್ಬರ ಅಪಹರಣ ಮತ್ತು ಹತ್ಯೆಯ ತನಿಖೆಗೆ ಅಧಿಕಾರಿಗಳಿಗೆ ಅವಕಾಶ ನೀಡುವಂತೆ ಕೇಳಿಕೊಂಡಿದೆ. ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ, ಪ್ರಕರಣವನ್ನು ಈಗಾಗಲೇ ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದೆ.
ಮಣಿಪುರದಲ್ಲಿ ಮೇ ತಿಂಗಳಲ್ಲಿ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಆರಂಭವಾಯಿತು. ಇದರಲ್ಲಿ 200 ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. 50,000 ಅಧಿಕ ಜನರು ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.












Click it and Unblock the Notifications