ಇದು ನನ್ನ ಕರ್ತವ್ಯ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಮೆಹಬೂಬಾ ಮುಫ್ತಿ
ಶ್ರೀನಗರ, ಡಿಸೆಂಬರ್ 27: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಕಾಶ್ಮೀರದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಲು ನನ್ನನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ. ಅವರ ಅದಮ್ಯ ಧೈರ್ಯವನ್ನು ವಂದಿಸಿ ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವ ಯಾರೊಂದಿಗಾದರೂ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ. ಉತ್ತಮ ಭಾರತದತ್ತ ಅವರ ನಡಿಗೆಯಲ್ಲಿ ಅವರೊಂದಿಗೆ ಸೇರಿಕೊಳ್ಳುತ್ತೇನೆ' ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಹೇಳಿದ್ದಾರೆ.
ಸೆಪ್ಟೆಂಬರ್ನಲ್ಲಿ ಕನ್ಯಾಕುಮಾರಿಯಿಂದ ಪ್ರಾರಂಭವಾಗಿರುವ ಯಾತ್ರೆಯ ಕೊನೆಯ ಹಂತದಲ್ಲಿ ರಾಹುಲ್ ಗಾಂಧಿಯವರೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ಸೇರುವ ನಿರೀಕ್ಷೆಯಿದೆ.

10 ರಾಜ್ಯಗಳ ಮೂಲಕ 2,800 ಕಿ.ಮೀ.ಗೂ ಹೆಚ್ಚು ಕ್ರಮಿಸಿರುವ ಯಾತ್ರೆ ಒಂಬತ್ತು ದಿನಗಳ ಚಳಿಗಾಲದ ವಿರಾಮದಲ್ಲಿದ್ದು, ಜನವರಿ 3 ರಂದು ಪುನರಾರಂಭಗೊಳ್ಳಲಿದೆ. ಅಂದು ಉತ್ತರ ಪ್ರದೇಶವನ್ನು ಪ್ರವೇಶಿಸಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್ ಚೌಧರಿ ಸೇರಿದಂತೆ ರಾಜ್ಯದ ಪ್ರಮುಖ ಬಿಜೆಪಿಯೇತರ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಸೋಮವಾರ ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದ್ದ ಮೆಹಬೂಬಾ ಮುಫ್ತಿ, ಜಾತ್ಯತೀತತೆಯನ್ನು ಬಲಪಡಿಸಲು ಮತ್ತು ದೇಶದಲ್ಲಿ ಏಕತೆಯನ್ನು ಉತ್ತೇಜಿಸಲು ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ನಾನು ರಾಹುಲ್ ಗಾಂಧಿ ಅವರಿಗೆ ವಂದಿಸುತ್ತೇನೆ ಎಂದು ತಿಳಿಸಿದ್ದರು.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುವ ಯಾತ್ರೆಯು ಸೆಪ್ಟೆಂಬರ್ 7 ರಂದು ಆರಂಭವಾಗಿದೆ. ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಹಾಗೂ ಹರಿಯಾಣದ ಮೂಲಕ ಯಾತ್ರೆ ಸಾಗಿ ಹೋಗಿದೆ.
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಹಾಗೂ ಮಾಜಿ ಉಪರಾಷ್ಟ್ರಪತಿಗಳಾದ ವೆಂಕಯ್ಯ ನಾಯ್ಡು ಅವರಿಗೆ ಬಹಿರಂಗ ಆಹ್ವಾನ ನೀಡಲಾಗಿತ್ತು. ಭಾರತವನ್ನು ಜೋಡಿಸಲು ಬಯಸುವ ಜನರೆಲ್ಲರೂ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದರು.












Click it and Unblock the Notifications