ಮೇಕೆದಾಟು ಯೋಜನೆ; ಕೇಂದ್ರಕ್ಕೆ ತಮಿಳುನಾಡು ಪತ್ರ
ನವದೆಹಲಿ, ಅಕ್ಟೋಬರ್ 10 : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕ ಸರ್ಕಾರ ಯೋಜನೆ ಕುರಿತು ಸಲ್ಲಿಸಿರುವ ಡಿಪಿಆರ್ ತಿರಸ್ಕಾರ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ಗೆ ಪತ್ರ ಬರೆದಿದ್ದಾರೆ. 10/7/2019ರಂದು ಸರ್ಕಾರ ಬರೆದಿರುವ ಪತ್ರದಲ್ಲಿ ಮನವಿಯನ್ನು ಪುರಸ್ಕರಿಸಬೇಕು. ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಉಲ್ಲೇಖಿಸಿದ್ದಾರೆ.
ಮೇಕೆದಾಟು ಯೋಜನೆ : ಕೇಂದ್ರದ ವಿರುದ್ಧ ಡಿಕೆಶಿ ಅಸಮಾಧಾನ!
ಮೇಕೆದಾಟು ಯೋಜನೆ ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟ್ 16/2/2018ರಂದು ನೀಡಿದ ತೀರ್ಪಿನ ಉಲ್ಲಂಘನೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಕೇರಳ ಸರ್ಕಾರ ಸಹ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಮೇಕೆದಾಟು ಯೋಜನೆ : ಮೋದಿಗೆ ತಮಿಳುನಾಡು ಪತ್ರ
ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿಯನ್ನು ಸಲ್ಲಿಸಿದೆ. ಅರ್ಜಿಯ ವಿಚಾರಣೆ ಇನ್ನೂ ಬಾಕಿ ಇದೆ. ಆದ್ದರಿಂದ, ಕರ್ನಾಟಕ ಸರ್ಕಾರ ಸಲ್ಲಿಸಿರುವ ಡಿಪಿಆರ್ ತಿರಸ್ಕರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದಿಂದ ಡಿಪಿಆರ್ ಸಲ್ಲಿಕೆ
ಡಿಪಿಆರ್ ಸಲ್ಲಿಕೆ ಮಾಡಲಾಗಿದೆ
ಮೇಕೆದಾಟುವಿನಲ್ಲಿ ಕುಡಿಯುವ ನೀರಿಗಾಗಿ ಜಲಾಶಯ ನಿರ್ಮಾಣ ಮಾಡುವ ಕುರಿತು ವಿವರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಜಲ ಆಯೋಗ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು. ಸರ್ಕಾರ ಡಿಪಿಆರ್ ತಯಾರಿಸಿ ಸಲ್ಲಿಕೆ ಮಾಡಿದೆ.
ಯೋಜನೆಗೆ ಅನುಮತಿ ನೀಡಿಲ್ಲ
ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ವೇಳೆ ಡಿಪಿಆರ್ ತಯಾರು ಮಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದೆ.
5 ಸಾವಿರ ಕೋಟಿ ವೆಚ್ಚದ ಯೋಜನೆ
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 67.16 ಟಿಎಂಸಿ ಅಡಿ. ಯೋಜನೆ ಪೂರ್ಣಗೊಂಡರೆ 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು ಎಂದು ಸರ್ಕಾರ ಹೇಳಿದೆ. ಮೇಕೆದಾಟು ಯೋಜನೆಯ ಒಟ್ಟು ವೆಚ್ಚ 5912 ಕೋಟಿ ರೂ. ಗಳು.
ಕಾವೇರಿ ಕೊಳ್ಳದ ರಾಜ್ಯಗಳ ವಿರೋಧ
ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ 2013ರಲ್ಲಿ ಪ್ರಸ್ತಾವನೆ ಸಿದ್ಧಪಡಿಸಿತ್ತು. ಯೋಜನೆಗೆ ತಮಿಳುನಾಡು, ಪುದುಚೇರಿ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಯೋಜನೆ ಜಾರಿಯಾದರೆ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣ ಕಡಿಮೆಯಾಗಲಿದೆ ಎಂಬುದು ತಮಿಳುನಾಡು ಸರ್ಕಾರದ ವಾದವಾಗಿದೆ.