Mettur Dam: ಮೆಟ್ಟೂರು ಜಲಾಶಯ ಭರ್ತಿ: ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲು ಸಿದ್ಧತೆ
ಕರ್ನಾಟಕ ಮತ್ತು ಕೇರಳದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು ರಾಜ್ಯದ ಕಾವೇರಿ ಕೊಳ್ಳದ ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಕೆಆರ್ ಎಸ್, ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದ್ದು, ಮೆಟ್ಟೂರು ಜಲಾಶಯಕ ಕೂಡ ಭರ್ತಿಯಾಗಿದೆ.
ಕರ್ನಾಟಕ, ಕೇರಳದಲ್ಲಿ ಭಾರಿ ಮಳೆಯಾದ ಪರಿಣಾಮ ಕೆಲವೇ ದಿನಗಳಲ್ಲಿ ಮೆಟ್ಟೂರು ಜಲಾಶಯ ತುಂಬಿದ್ದು, ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.

120 ಅಡಿ ಗರಿಷ್ಠ ಅಡಿ ಇರುವ ಮೆಟ್ಟೂರು ಜಲಾಶಯದಲ್ಲಿ ಇಂದು 119.20 ಅಡಿ ನೀರು ಸಂಗ್ರಹವಾಗಿದೆ. ಸದ್ಯ ಜಲಾಶಯದ ಒಳಹರಿವು 41,722 ಕ್ಯೂಸೆಕ್ಸ್ ಇದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಹೊರ ಹರಿವು ಪ್ರಮಾಣವನ್ನು 23,000 ಕ್ಯೂಸೆಕ್ಸ್ಗೆ ಏರಿಕೆ ಮಾಡಲಾಗಿದೆ. ಇಂದಿನ ನೀರನ ಸಂಗ್ರಹ 91.915 ಟಿಎಂಸಿ ಇದೆ.
ವಯನಾಡಿನಲ್ಲಿ ಭಾರಿ ಮಳೆಯಾದ ಕಾರಣ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. 30,805 ಕ್ಯೂಸೆಕ್ಸ್ ಒಳಹರಿವು ಇದ್ದು, ಇದು ಮತ್ತಷ್ಟು ಹೆಚ್ಚಾಗುವ ಕಾರಣ, ಮುಂಜಾಗ್ರತಾ ಕ್ರಮವಾಗಿ 80,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಕೆಆರ್ ಎಸ್ ಜಲಾಶಯದ ಒಳಹರಿವು ಕೂಡ ಹೆಚ್ಚಾಗಲಿದ್ದು, ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತದೆ. ಎಲ್ಲವನ್ನೂ ಸೇರಿಸಿ ಸುಮಾರು 1 ರಿಂದ 1.5 ಲಕ್ಷ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಹರಿಯಲಿದೆ.
ಭಾರಿ ಒಳಹರಿವು ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಮೆಟ್ಟೂರು ಜಲಾಶಯದ ಅಧಿಕಾರಿಗಳು ಅಪಾರ ಪ್ರಮಾಣದ ನೀರನ್ನು ಹೊರಬಿಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಯಾವುದೇ ಕ್ಷಣದಲ್ಲೂ ಜಲಾಶಯದಿಂದ 75,000 ಕ್ಯೂಸೆಕ್ಸ್ನಿಂದ 1,25,000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಿದ್ದು, ನದಿ ಪಾತ್ರದ ಪ್ರದೇಶಗಳಿಗೆ ಪ್ರವಾಹ ಮುನ್ನೆಚ್ಚರಿಕೆ ನೀಡಿದ್ದಾರೆ.
ಮತ್ತೆ ಮಳೆ ಅಬ್ಬರ
ಕರ್ನಾಟಕ ಕಾವೇರಿ ಕೊಳ್ಳದಲ್ಲಿ ಮತ್ತೆ ಮಳೆ ಅಬ್ಬರಿಸಲು ಶುರು ಮಾಡಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ಬಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗಿದ್ದು, ಕೆಆರ್ ಎಸ್ ಜಲಾಶಯ ಸೇರಲಿದೆ. ಕೆಆರ್ ಎಸ್ ಈಗಾಗಲೇ ಭರ್ತಿಯಾಗಿರುವ ಕಾರಣ, ಯಾವುದೇ ಕ್ಷಣದಲ್ಲಿ ಬೇಕಾದರೂ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಹೊರಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications