ಭಾರತ್ ಬಂದ್: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಸೂಚನೆ
ನವದೆಹಲಿ, ಡಿಸೆಂಬರ್ 7: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ಡಿಸೆಂಬರ್ 8ರಂದು ಭಾರತ್ ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ ಬೆಂಬಲ ವ್ಯಕ್ತಪಡಿಸುವುದರಲ್ಲಿ ವಿರೋಧಪಕ್ಷಗಳು ಕೂಡ ಜತೆಗೂಡಿವೆ. ವಿವಿಧ ವ್ಯಾಪಾರ ಸಂಘಟನೆಗಳು, ಸಾರಿಗೆ ಒಕ್ಕೂಟಗಳು, ವಕೀಲರ ಸಂಘಟನೆಗಳು ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಘೋಷಿಸಿವೆ.
'ಭಾರತ್ ಬಂದ್' ಪ್ರಯುಕ್ತ ಕೇಂದ್ರ ಗೃಹ ಸಚಿವಾಲಯವು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೆಲವು ಸಲಹೆ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಮಂಗಳವಾರ ನಡೆಯುವ ಬಂದ್ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಾತರಿಪಡಿಸಿಕೊಳ್ಳಲು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಮತ್ತು ಆಡಳಿತ ವಿಭಾಗಗಳಿಗೆ ಸೂಚನೆ ನೀಡಲಾಗಿದೆ.
ಡಿಸೆಂಬರ್ 8ರ ಭಾರತ್ ಬಂದ್; ಏನಿರುತ್ತೆ, ಏನಿರಲ್ಲ?
ಇದೇ ರೀತಿ ಬಂದ್ ಸಂದರ್ಭದಲ್ಲಿ ಯಾವುದೇ ವಿನಾಯಿತಿ ಇಲ್ಲದೆ ನಾವಲ್ ಕೊರೊನಾ ವೈರಸ್ ಮಾರ್ಗಸೂಚಿಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವಂತೆಯೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯ ಮನವಿ ಮಾಡಿದೆ.
'ಭಾರತ್ ಬಂದ್ ಅನ್ನು ಯಾವುದೇ ರಾಜಕೀಯ ಪಕ್ಷ ಪ್ರಜಾಸತ್ತಾತ್ಮವಾಗಿ ನಡೆಸಿದರೆ ತೊಂದರೆಯಿಲ್ಲ. ಆದರೆ ಈ ಸಂದರ್ಭದಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ. ಕೆಲವು ರಾಜಕೀಯ ಪಕ್ಷಗಳು ರೈತರಿಗೆ ಕಳಂಕ ತರಲು ಸಂಚು ರೂಪಿಸುತ್ತಿವೆ' ಎಂದು ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಆರೋಪಿಸಿದ್ದಾರೆ.
'ರಾಜಕೀಯ ದುರಾಸೆಗಾಗಿ ನಡೆಯುತ್ತಿರುವ ಸಂಚಿನ ಕೃತ್ಯಗಳನ್ನು ರೈತರು ತಿರಸ್ಕರಿಸುವಂತೆ ಮನವಿ ಮಾಡುತ್ತೇನೆ' ಎಂದು ಕಿಶನ್ ರೆಡ್ಡಿ ತಿಳಿಸಿದರು.
ಭಾರತ್ ಬಂದ್: ರೈತರಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದೇನು?
ರೈತರು ಕರೆ ನೀಡಿರುವ ಭಾರತ್ ಬಂದ್ ಅನ್ನು ಯಾರಾದರೂ ರಾಜ್ಯದಲ್ಲಿ ಬಲವಂತವಾಗಿ ಹೇರಲು ಪ್ರಯತ್ನಿಸುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಎಚ್ಚರಿಕೆ ನೀಡಿದ್ದಾರೆ. ಒಂದು ಸ್ಥಳದಲ್ಲಿ ನಾಲ್ಕು ಮಂದಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಸಿಆರ್ಪಿಸಿ ಸೆಕ್ಷನ್ 144ರ ಅಡಿ ಗುಜರಾತ್ ಡಿಜಿಪಿ ನಿಷೇಧಾಜ್ಞೆ ಹೊರಡಿಸಿದ್ದಾರೆ.