ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ
ನವದೆಹಲಿ, ಜೂನ್ 28: "ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ನೆರವಿಗಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅನ್ನು ವಿಸ್ತರಿಸಲಾಗುವುದು," ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೊವಿಡ್-19 ಪಿಡುಗಿನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಉಚಿತವಾಗಿ ಆಹಾರ ಧಾನ್ಯವನ್ನು ಒದಗಿಸುವ ಉದ್ದೇಶದಿಂದ 2020ರ ಮಾರ್ಚ್ 26ರಂದು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಪರಿಚಯಿಸಲಾಗಿತ್ತು.
ದೇಶದಲ್ಲಿ ಆರಂಭಿಕ ಹಂತದಲ್ಲಿ 2020ರ ಏಪ್ರಿಲ್ ತಿಂಗಳಿನಿಂದ ಜೂನ್ ವರೆಗೂ ಮಾತ್ರ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ತದನಂತರ ಬಡವರಿಗೆ ನೆರವು ನೀಡುವ ಉದ್ದೇಶದಿಂದ ನವೆಂಬರ್ ತಿಂಗಳವರೆಗೂ ಯೋಜನೆಯನ್ನು ವಿಸ್ತರಿಸಲಾಗಿತ್ತು.

1.33 ಲಕ್ಷ ಕೋಟಿ ರೂಪಾಯಿ ಯೋಜನೆ:
ಕಳೆದ 2020-21ನೇ ಸಾಲಿನಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗಾಗಿ ಒಟ್ಟು 1,33,972 ಕೋಟಿ ರೂಪಾಯಿ ವೆಚ್ಚ ಮಾಡಲಾಗಿತ್ತು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ಹಾವಳಿ ಹೆಚ್ಚಾದ ಹಿನ್ನೆಲೆ ಬಡವರಿಗೆ ಆಹಾರ ಭದ್ರತೆ ಒದಗಿಸುವ ಉದ್ದೇಶದಿಂದ 2021ರ ಮೇ ತಿಂಗಳಿನಲ್ಲಿ ಪುನಾರಂಭಿಸಲಾಯಿತು. 2021ರ ಮೇ ತಿಂಗಳಿನಿಂದ ನವೆಂಬರ್ ವರೆಗೂ ಬಡ ಕುಟುಂಬಗಳಿಗೆ ಉಚಿತವಾಗಿ 5 ಕೆಜಿ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು.
ದೇಶದಲ್ಲಿ ಈವರೆಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗಾಗಿ ಸರಾಸರಿ ಒಟ್ಟು 2,27,841 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ನೀಡಿರುವ ಅಂಕಿ-ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.












Click it and Unblock the Notifications