ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬಿ. ವೈ. ವಿಜಯೇಂದ್ರ! ಕುತೂಹಲ ಮೂಡಿಸಿದ ಮಾತುಕತೆ
ನವದೆಹಲಿ, ಜುಲೈ 20: ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಹಲವು ಬದಲಾವಣೆಯನ್ನ ತರುವ ನಿಟ್ಟಿನಲ್ಲಿ ಚಿಂತನೆಯನ್ನ ನಡೆಸಿದ್ದು, ರಾಜಕೀ ವಿದ್ಯಮಾನದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿ ಮಾತುಕಥೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಈ ಕುರಿತು ಕರ್ನಾಟಕ ಬಿಜೆಪಿ ಉಪಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಸಂಘಟನಾ ಚಾತುರ್ಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಗೃಹ ಸಚಿವ ಅಮಿತ್ ಶಾ ಜೀ ಅವರನ್ನು ಭೇಟಿಮಾಡಲಾಯಿತು. ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ನಾಯಕರು ಕಡೆಗಣಿಸಿದ ಪರಿಣಾಮವಾಗಿಯೇ ಸೋಲಾಯಿತು ಎಂದು ಹಲವು ಬಿಜೆಪಿ ನಾಯಕರು ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ದು, ಸದ್ಯ ಚುನಾವಣಾ ಫಲಿತಾಂಶ ಬಂದು ಎರಡು ತಿಂಗಳಾದರೂ ವಿಪಕ್ಷ ನಾಯಕನ ಆಯ್ಕೆ ಸಾಧ್ಯವಾಗಿಲ್ಲ.
ಇತ್ತ ವಿಧಾನಸಭಾ ಚುನಾವಣೆಯಲ್ಲಿ ಆಗಿರುವ ತಪ್ಪು ಮತ್ತೆ ಲೋಕಸಭಾ ಚುನಾವಣೆಯಲ್ಲಿಯು ಆಗಬಾರದು ಎಂದು ಈಗಗಾಲೇ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆಯನ್ನ ನೀಡಿದ್ದಾರೆ ಎನ್ನಲಾಗಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಕುರಿತು ಹಲವು ನಾಯಕರು ರೇಸ್ ನಲ್ಲಿದ್ದು, ಬಹಿರಂಗವಾಗಿಯೇ ಬೇಡಿಕೆಯನ್ನ ಇಟ್ಟಿದ್ದಾರೆ.
ಇನ್ನೂ ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ಮೂಲಕ ಮತಬ್ಯಾಂಕ್ ಮರಳಿ ಪಡೆಯಲು ಕರ್ನಾಟಕದಲ್ಲಿ ವಿಜಯೇಂದ್ರ ನಾಯಕತ್ವದಲ್ಲಿ ಎದುರಿಸಲು ಬಿಜೆಪಿ ರಣತಂತ್ರ ಹಣೆಯುತ್ತಿದೆ ಎಂಬ ಕುರಿತೂ ರಾಜಕೀಯ ವಲಯಗಳಲ್ಲಿ ಚರ್ಚೆಗಳು ಆರಂಭವಾಗಿದ್ದು, ಅಮಿತ್ ಶಾ ಹಾಗೂ ಜೆ ಪಿ ನಡ್ಡಾ ಅವರ ಭೇಟಿ ಇದಕ್ಕೆ ಪುಷ್ಠಿಕೊಟ್ಟಂತಿದೆ.
ನವದೆಹಲಿಯಲ್ಲಿ ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಟ್ವೀಟ್ನಲ್ಲಿ, ವಿಧಾನ ಸಭೆ ಹಾಗೂ ಹೊರಗೆ ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ ವಿರುದ್ಧ ಹೋರಾಟ ರೂಪಿಸುವ ಕುರಿತು ಹಾಗೂ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಪಡೆಯಲಾಯಿತು' ಎಂದು ವಿಜಯೇಂದ್ರ ತಿಳಿಸಿದ್ದಾರೆ. ನಡ್ಡಾ ಭೇಟಿಯ ಬಳಿಕ ಅಮಿತ್ ಶಾ ಅವರನ್ನ ಭೇಟಿ ಮಾಡಿ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.












Click it and Unblock the Notifications