ಮೋದಿ ಉಪನಾಮ ಪ್ರಕರಣ: ಕ್ಷಮೆ ಕೇಳದ ರಾಹುಲ್ಗೆ 'ಸುಪ್ರೀಂ' ರಿಲೀಫ್- ಸಂಸದ ಸ್ಥಾನ ಮರುಸ್ಥಾಪನೆ, ಬಿಜೆಪಿಗೆ ಭಾರೀ ಮುಖಭಂಗ
ನವದೆಹಲಿ, ಆಗಸ್ಟ್ 04: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಮೋದಿ ಉಪನಾಮ ಹೇಳಿಕೆ ಪ್ರಕರಣದಲ್ಲಿ ಅವರಿಗೆ ಎರಡು ವರ್ಷಗಳ ಕಾಲ ಶಿಕ್ಷೆಯನ್ನು ಘೋಷಿಸಲಾಗಿತ್ತು. ಆದರೆ, ಇದಕ್ಕೆ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಮೋದಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.
'ಮೋದಿ ಉಪನಾಮ' ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಕಾಲ ಶಿಕ್ಷೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯರ ಸ್ಥಾನಮಾನವನ್ನು ಮರುಸ್ಥಾಪಿಸಿದೆ. ಇದರಿಂದ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಲು ಅವಕಾಶ ಸಿಕ್ಕಂತಾಗಿದೆ.

ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ಅವರು, 'ರಾಹುಲ್ ಗಾಂಧಿಯವರಿಗೆ ನೀಡಲಾಗಿರುವ ಶಿಕ್ಷೆಯು ಅವರನ್ನು ಆರಿಸಿ ಕಳುಹಿಸಿದ ಮತದಾರರ ಮೇಲೆ ಕೆಟ್ಟ ಪರಿಣಾಮ ಬೀರತ್ತದೆ' ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇಂತಹ ಪ್ರಕರಣದಲ್ಲಿ ಗರಿಷ್ಠ ಮಟ್ಟದ ಶಿಕ್ಷೆಯನ್ನು ವಿಧಿಸುವುದು ಸಮಂಜಸವಲ್ಲ. ಈ ಹಿನ್ನೆಲೆಯಲ್ಲಿ ಅಂತಿಮ ತೀರ್ಪಿನವರೆಗೆ ಶಿಕ್ಷೆಯ ಆದೇಶವನ್ನು ತಡೆಹಿಡಿಯಬೇಕಾಗಿದೆ ಎಂದು ಪೀಠ ಹೇಳಿದೆ.
ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು, '2019 ರಲ್ಲಿ ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಮೋದಿ ಉಪನಾಮದ ವಿರುದ್ಧ ಹರಿಹಾಯ್ದಿದ್ದರು.
'ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ?' ಎಂದು ಅವರು ಕೇಳಿದ್ದರು.
ರಾಹುಲ್ ಗಾಂಧಿ ಪರ ವಾದ ಮಾಡಿರುವ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, 'ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಕಾಂಗ್ರೆಸ್ ನಾಯಕನ ವಿರುದ್ಧ ದಾಖಲಿಸಿರುವ ಪ್ರಕರಣವು ವಿಚಿತ್ರವಾಗಿದೆ. ಏಕೆಂದರೆ ಅವರು ತಮ್ಮ ಭಾಷಣದ ಸಮಯದಲ್ಲಿ ಹೆಸರಿಸಿದ ಒಬ್ಬ ವ್ಯಕ್ತಿಯೂ ಮೊಕದ್ದಮೆ ಹೂಡಿಲ್ಲ' ಎಂದು ಪ್ರತಿಪಾದಿಸಿದರು.

ಮೋದಿ ಉಪನಾಮ ಹೊಂದಿರುವ ಜನರೆಲ್ಲರೂ ರಾಹುಲ್ ಗಾಂಧಿ ವಿರುದ್ಧ ಮೊಕ್ಕದ್ದಮೆ ದಾಖಲಿಸಬೇಕಿತ್ತು. ಆದರೆ, ಅವರ ವಿರುದ್ಧ ಪ್ರಕರಣ ದಾಖಲಿಸಿದವರು ಮಾತ್ರ ಬಿಜೆಪಿ ಸೇರಿದವರು ಎಂದು ಸಿಂಘ್ವಿ ಹೇಳಿದ್ದಾರೆ.
ಪೂರ್ಣೇಶ್ ಮೋದಿ ಅವರೇ ತಮ್ಮ ಮೂಲ ಉಪನಾಮ ಮೋದಿ ಅಲ್ಲ ಎಂದು ಹೇಳಿದ್ದಾರೆ ಎಂದು ಹಿರಿಯ ವಕೀಲ ವಾದಿಸಿದರು.
ವಾದವನ್ನು ಆಲಿಸಿದ ನ್ಯಾಯಮೂರ್ತಿ ಬಿಆರ್ ಗವಾಯಿ, ಅರ್ಜಿದಾರರ ಮೇಲೆ ಶಿಕ್ಷೆ ವಿಧಿಸಲಾಗಿದೆ. ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಗುಜರಾತ್ ನ್ಯಾಯಾಲಯವು ಅರ್ಜಿದಾರರಿಗೆ ಗರಿಷ್ಠ ಶಿಕ್ಷೆಯನ್ನು ಏಕೆ ನೀಡಿದೆ ಎಂಬುದನ್ನು ವಿಚಾರಣಾ ನ್ಯಾಯಾಧೀಶರು ವಿವರಿಸಬೇಕು ಎಂದು ಹೇಳಿದರು.
ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪಿನಿಂದಾಗಿ ಬಿಜೆಪಿ ಹಾಗೂ ಮೋದಿ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು ಗುಜರಾತ್ನ ಮಾಜಿ ಸಚಿವರಾಗಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.












Click it and Unblock the Notifications