ಮೇ 31ರಂದು ಕೇರಳಕ್ಕೆ ಮುಂಗಾರು ಆಗಮನ
ನವದೆಹಲಿ, ಮೇ 30; ಕೆಲವು ದಿನಗಳಿಂದ ತೌಕ್ತೆ, ಯಾಸ್ ಚಂಡಮಾರುತದ ಪ್ರಭಾವದಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಮೇ 31ರಂದು ನೈಋತ್ಯ ಮುಂಗಾರು ಭಾರತದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೇ 31ರಂದು ನೈಋತ್ಯ ಮುಂಗಾರು ಕೇರಳದ ಕರಾವಳಿಗೆ ಅಪ್ಪಳಿಸುವ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಭಾರತದ ಕೃಷಿ ಚಟುವಟಿಕೆಗೆ ನೈಋತ್ಯ ಮುಂಗಾರು ತನ್ನದೇ ಆದ ಕೊಡುಗೆ ನೀಡುತ್ತದೆ. ದೇಶದ ಶೇ 50ರಷ್ಟು ಕೃಷಿ ಭೂಮಿ ಜೂನ್ನಿಂದ ಸೆಪ್ಟೆಂಬರ್ ತನಕ ಸುರಿಯುವ ಮುಂಗಾರು ಮಳೆಯ ಮೇಲೆ ಅವಲಂಬಿತವಾಗಿದೆ.

ಮುಂಗಾರು ಮಳೆಯನ್ನು ಆಶ್ರಯಿಸಿ ರೈತರು ಭತ್ತ, ಕಬ್ಬು, ಜೋಳ, ಹತ್ತಿ, ಸೋಯಾಬಿನ್ ಮುಂತಾದ ಬೆಳೆಗಳನ್ನು ಬೆಳೆಯುತ್ತಾರೆ. ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಅವಧಿ ಎಂದು ಪರಿಗಣಿಸಲಾಗುತ್ತದೆ.
ಈ ವರ್ಷ ಹಲವಾರ ಚಂಡಮಾರುತಗಳ ಪರಿಣಾಮ ಸಾಮಾನ್ಯವಾಗಿ ಪ್ರತಿ ತಿಂಗಳು ಮಳೆಯಾಗಿದೆ. ಈ ಬಾರಿ ಮುಂಗಾರು ಸಹ ವಾಡಿಕೆಯಂತೆ ಇರಲಿದ್ದು, ನಿರೀಕ್ಷಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತಿದ್ದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಆರಂಭವಾಗುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗುತ್ತದೆ.
ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ರೈತರು ಕೃಷಿ ಚಟುವಟಿಕೆಯಲ್ಲಿ ಬ್ಯುಸಿಯಾಗುತ್ತಾರೆ. ಮುಂಗಾರು ಆಗಮನದ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ.












Click it and Unblock the Notifications