Breaking: ನ.14ಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಮೋರ್ಬಿ ಸೇತುವೆ ಕುಸಿತ ಪ್ರಕರಣ ವಿಚಾರಣೆ
ನವದೆಹಲಿ, ನವೆಂಬರ್ 01: ಗುಜರಾತ್ನ ಮೊರ್ಬಿ ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ನವೆಂಬರ್ 14ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಗುಜರಾತ್ ದುರಂತಕ್ಕೆ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಕಾರಣವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಮೊರ್ಬಿ ಸೇತುವೆ ಕುಸಿತ ದುರಂತದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಕೋರಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಕೀಲ ವಿಶಾಲ್ ತಿವಾರಿ ಎಂಬುವವರು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಸಲ್ಲಿಸಿದ್ದಾರೆ. ಮೊರ್ಬಿ ಸೇತುವೆ ಕುಸಿತ ಪ್ರರಕಣದ ಕುರಿತು ನ್ಯಾಯಾಂಗ ತನಿಖೆ ಆಗಬೇಕೆಂದು ಒತ್ತಾಯಿಸಿದ್ದಾರೆ. ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ಆಯೋಗವನ್ನು ನೇಮಿಸಲು ಕೋರಿದ್ದಾರೆ.

140ಕ್ಕೂ ಹೆಚ್ಚು ಮಂದಿ ಸಾವು:
ಗುಜರಾತ್ನ ಮೊರ್ಬಿ ಸೇತುವೆ ದುರಂತದಲ್ಲಿ 140ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ತಿಳಿದುಬಂದಿದೆ. ಈಗ ಮೃತಪಟ್ಟವರಲ್ಲಿ 50 ಮಕ್ಕಳು ಹಾಗೂ 40 ಮಹಿಳೆಯರು ಸೇರಿದ್ದಾರೆ.
ಅಕ್ಟೋಬರ್ 26ರಂದು ಸಂಚಾರಕ್ಕೆ ಸೇತುವೆ ಮುಕ್ತ:
ಶತಮಾನಕ್ಕೂ ಹಳೆಯದಾದ ಸೇತುವೆಯನ್ನು ದುರಸ್ತಿ ಮಾಡಲಾಗಿತ್ತು. ಇದೇ ಅಕ್ಟೋಬರ್ 26ರಂದು ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತ ಮಾಡಲಾಗಿತ್ತು. ಸುಮಾರು 500 ಜನರು ಸಂಚಾರ ಮಾಡುತ್ತಿದ್ದಾಗ ಸೇತುವೆ ಕುಸಿದುಬಿದ್ದಿದೆ. ಘಟನೆಯಲ್ಲಿ ಈಗಾಗಲೇ 140ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಶೋಧ ಕಾರ್ಯ ನಡೆಯುತ್ತಿದೆ. ನೂರಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.
ದುರಸ್ತಿ ಕಾರ್ಯದ ಹೊಣೆ ಹೊತ್ತಿದ್ದ ಕಂಪನಿಯು ಅರ್ಹತಾ ಪ್ರಮಾಣ ಪತ್ರವನ್ನು ಪಡೆದುಕೊಂಡಿರಲಿಲ್ಲ. ಇದಕ್ಕೆ ಗುಜರಾತ್ ಸರ್ಕಾರ ಹಾಗೂ ಸ್ಥಳೀಯ ಆಡಳಿತವೇ ನೇರ ಹೊಣೆ. ಹೀಗಾಗಿ, ಪ್ರಕರಣದ ಕುರಿತು ಪಾರದರ್ಶಕ ತನಿಖೆ ಆಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರ ಮೇಲೆ ದೂರ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ












Click it and Unblock the Notifications