Terror Attack: ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ; ಮುಖೇಶ್ ಅಂಬಾನಿ ಘೋಷಣೆ
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಬರ್ಬರ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರಿಗೆ ಉದ್ಯಮಿ ಮುಖೇಶ್ ಅಂಬಾನಿ ಉಚಿತ ಚಿಕಿತ್ಸೆ ನೀಡುವುದಾಗಿ ಗುರುವಾರ ಘೋಷಣೆ ಮಾಡಿದ್ದಾರೆ. ಭಯೋತ್ಪಾದನೆ ಮಾನವೀಯತೆಯ ಶತ್ರು ಎಂದಿರುವ ಅವರು, ಗಾಯಗೊಂಡವರ ನೆರವಿಗೆ ನಿಲ್ಲುವುದಾಗಿ ಹೇಳಿದ್ದಾರೆ.
ಎಲ್ಲಾ ಗಾಯಾಳುಗಳಿಗೆ ಮುಂಬೈನ ರಿಲಯನ್ಸ್ ಫೌಂಡೇಶನ್ ಸರ್ ಎಚ್ಎನ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಂಬಾನಿ ತಿಳಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ 26 ಜನರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯಲ್ಲಿ ಅಮಾಯಕ ಭಾರತೀಯರ ಸಾವಿಗೆ ರಿಲಯನ್ಸ್ ಕುಟುಂಬದ ಎಲ್ಲರೂ ಸಂತಾಪ ವ್ಯಕ್ತಪಡಿಸುತ್ತಾರೆ ಎಂದು ಅಂಬಾನಿ ಹೇಳಿದ್ದಾರೆ.

ಗಾಯಾಳುಗಳು ಶೀಘ್ರ ಮತ್ತು ಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿರುವ ಅವರು, ಮುಂಬೈನಲ್ಲಿರುವ ನಮ್ಮ ರಿಲಯನ್ಸ್ ಫೌಂಡೇಶನ್ ಸರ್ ಎಚ್ಎನ್ ಆಸ್ಪತ್ರೆ ಎಲ್ಲಾ ಗಾಯಾಳುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು. ಇಂತಹ ಕೃತ್ಯಕ್ಕೆ ಯಾರೂ ಯಾವುದೇ ರೀತಿಯಲ್ಲಿ ಬೆಂಬಲಿಸಬಾರದು. ಭಯೋತ್ಪಾದನೆಯ ಪಿಡುಗಿನ ವಿರುದ್ಧದ ನಿರ್ಣಾಯಕ ಯುದ್ಧದಲ್ಲಿ ನಾವು ನಮ್ಮ ಪ್ರಧಾನ ಮಂತ್ರಿಗಳು, ಭಾರತ ಸರ್ಕಾರ ಮತ್ತು ಇಡೀ ದೇಶದೊಂದಿಗೆ ನಿಲ್ಲುತ್ತೇವೆ ಎಂದಿದ್ದಾರೆ.
ಮುಂಬೈನಲ್ಲಿ ಹೈಅಲರ್ಟ್ ಘೋಷಣೆ
ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿಯಾದ ಬೆನ್ನಲ್ಲೇ ಗುರುವಾರ ಮುಂಬೈ ಮತ್ತು ಮುಂಬೈ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿನ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಮಾಯಕರ ಸಾವಿಗೆ ನ್ಯಾಯ ಸಿಗುವವರೆಗೆ ವಿಶ್ರಾಂತಿ ಪಡೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಹಾರದ ಮಧುಬನಿಯಲ್ಲಿ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಕೊಂದ ಕ್ರೌರ್ಯದಿಂದ ಇಡೀ ರಾಷ್ಟ್ರವು ದುಃಖದಲ್ಲಿದೆ ಎಂದಿದ್ದಾರೆ.
ಭಯೋತ್ಪಾದನೆ ಎಂದಿಗೂ ಭಾರತದ ಚೈತನ್ಯವನ್ನು ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ. ನ್ಯಾಯ ಸಿಗುವಂತೆ ನೋಡಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಇಡೀ ರಾಷ್ಟ್ರವು ಈ ಸಂಕಲ್ಪದಲ್ಲಿ ದೃಢವಾಗಿದೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮ ಪರವಾಗಿದ್ದಾರೆ. ಈ ಸಮಯದಲ್ಲಿ ನಮ್ಮೊಂದಿಗೆ ನಿಂತಿರುವ ವಿವಿಧ ದೇಶಗಳ ಜನರು ಮತ್ತು ಅವರ ನಾಯಕರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸುವುದಕ್ಕಿಂತ ದೊಡ್ಡ ಶಿಕ್ಷೆ ಸಿಗುತ್ತದೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿಯು ಈಗ ಭಯೋತ್ಪಾದಕರ ಬೆನ್ನು ಮುರಿಯುತ್ತದೆ ಎಂದು ಅವರು ಹೇಳಿದರು.












Click it and Unblock the Notifications