ಆಮ್ಲಜನಕ ಪೂರೈಕೆ ಸ್ಥಿತಿಗತಿ; ರಾಜ್ಯಗಳಿಗೆ ಪ್ರಧಾನಿ ಮೋದಿ ಭರವಸೆ
ನವದೆಹಲಿ, ಏಪ್ರಿಲ್ 23: ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದರು.
ಶುಕ್ರವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ" ಎಂದರು.
ಆಮ್ಲಜನಕದ ದುರ್ಬಳಕೆಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಸಲಹೆ ನೀಡಿದರು. ಜೊತೆಗೆ ಆಮ್ಲಜನಕದ ಟ್ಯಾಂಕರು ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಮಾನವ ಸಂಪನ್ಮೂಲ ಅಗತ್ಯವೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಸಭೆ ನಂತರ ಆಮ್ಲಜನಕ ಉತ್ಪಾದಕ ಕೈಗಾರಿಕೆಗಳ ಮುಖ್ಯಸ್ಥರೊಂದಿಗೆ ಮೋದಿ ಸಭೆ ನಡೆಸಿ ಆಮ್ಲಜನಕ ಉತ್ಪಾದನೆಯನ್ನು ತ್ವರಿತಗೊಳಿಸುವಂತೆ ತಿಳಿಸಿದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಡೆಟ್ ಅಧ್ಯಕ್ಷ ಮುಖೇಶ್ ಅಂಬಾನಿ, ಏರ್ ವಾಟರ್ ಜೇಮ್ಶೆಡ್ಪುರ ವ್ಯವಸ್ಥಾಪಕ ನಿರ್ದೇಶಕ ನೊರಿಯೊ ಶಿಬುಯಾ, ಜಿಂದಾಲ್ ಸ್ಟೀಲ್ಸ್ನ ನವೀನ್ ಜಿಂದಾಲ್, ಐನಾಕ್ಸ್ನ ಸಿದ್ಧಾರ್ಥ್ ಜೈನ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಆಮ್ಲಜನಕ ಪೂರೈಕೆಗೆ ಮನವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ವಿತರಣೆ ಮಾಡುವಂತೆ ಮನವಿ ಮಾಡಿದರು.












Click it and Unblock the Notifications