Haryana: ಹರಿಯಾಣ ಸಿಎಂ ಆಗಿ ನಾಳೆ ಸೈನಿ ಪ್ರಮಾಣ ವಚನ ಸ್ವೀಕಾರ, ಮೋದಿ ಭಾಗಿ!
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬಿಜೆಪಿಯ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಅ.17) ಹರಿಯಾಣ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಅವರ ಪ್ರಮಾಣವಚನ ಕಾರ್ಯಕ್ರಮ ಪಂಚಕುಲದಲ್ಲಿ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಜರಾಗುವುದರಿಂದ ಫುಲ್ ಟೈಟ್ ಸೆಕ್ಯುರಿಟಿ ವ್ಯವಸ್ಥೆ ಕೂಡ ಮಾಡಲಾಗಿದೆ. ಹರಿಯಾಣ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಹಾಗಾಗಿ ಇಂದೇ ಅಲ್ಲಿ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ 48 ಸ್ಥಾನಗಳನ್ನು ಗೆದ್ದು ಬಿಜೆಪಿ ಸತತ ಮೂರನೇ ಬಾರಿ ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ 14 ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ಬಿಜೆಪಿ ಕೇಂದ್ರ ನಾಯಕರು ಸೇರಿದಂತೆ 500 ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಹರಿಯಾಣ ಪೊಲೀಸರ ಮಾಹಿತಿ ಪ್ರಕಾರ, ಕೆಲವು ನಾಯಕರು ಚಾರ್ಟರ್ ವಿಮಾನಗಳ ಮೂಲಕ ಈ ಕಾರ್ಯಕ್ರಮಕ್ಕೆ ಬರುವವರಿದ್ದಾರೆ. ಹಾಗಾಗಿ ಪಂಚಕುಲ ಹೆಲಿಪ್ಯಾಡ್ ಮತ್ತು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗಣ್ಯರು ಬಂದಿಳಿಯಲಿದ್ದಾರೆ. ಅವರಿಗೆ ಸೂಕ್ತ ಬಂದೋಬಸ್ತ್ ಕೂಡ ಮಾಡಲಾಗಿದೆಯಂತೆ.
ಅವರನ್ನು ಬರಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ದಸರಾ ಮೈದಾನದಲ್ಲಿ ಹಲವು ನಾಯಕರಿಗೆ ಅವಕಾಶ ಕಲ್ಪಿಸಲು ಬೃಹತ್ ವೇದಿಕೆ ಸಜ್ಜಾಗಿದೆ. ನೆಲದ ಮಧ್ಯದಲ್ಲಿ ಸುಲಭವಾಗಿ ಚಲಿಸುವಂತೆ ಮಾಡಲು ನೆಲಗಟ್ಟುಗಳನ್ನು ಹೊಂದಿರುವ ವಿಶೇಷ ಮಾರ್ಗವನ್ನು ನಿರ್ಮಿಸಲಾಗುತ್ತಿದೆ.

ಇನ್ನು ಗಣ್ಯರನ್ನು ಬರಮಾಡಿಕೊಳ್ಳಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ದಸರಾ ಮೈದಾನದಲ್ಲಿ ಹಲವು ನಾಯಕರಿಗೆ ಅವಕಾಶ ಕಲ್ಪಿಸಲು ಬೃಹತ್ ವೇದಿಕೆ ಕೂಡ ಸಜ್ಜಾಗಿದೆ.
ಹರಿಯಾಣದ ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹರಿಯಾಣದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮಾಡಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಇಂದು ಚಂಡೀಗಢಕ್ಕೆ ಬರಲಿದ್ದಾರೆ.
ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಹೊಸದಾಗಿ ಚುನಾಯಿತ 48 ಶಾಸಕರ ಸಭೆಯನ್ನು ಚಂಡೀಗಢದಲ್ಲಿ ಕರೆದಿದ್ದು, ಸಿಎಂ ಆಗಲಿರುವ ನಯಾಬ್ ಸಿಂಗ್ ಸೈನಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ನಯಾಬ್ ಸಿಂಗ್ ಸೈನಿ ಅವರು ಕಳೆದ ವಾರ ದೆಹಲಿಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿಯಾಗಿದ್ದರು. ಆದರೆ ಪ್ರಧಾನಿ ಕಾರ್ಯಾಲಯದಿಂದ ಪಿಎಂ ಮೋದಿ ಅವರ ಲಭ್ಯತೆ ಖಚಿತಪಡಿಸಿಕೊಂಡು ಪ್ರಮಾಣ ವಚನ ಸ್ವೀಕಾರದ ದಿನಾಂಕವನ್ನು ಫೈನಲ್ ಮಾಡಲಾಯಿತು. ಅದರಂತೆ ಹರಿಯಾಣ ರಾಜಧಾನಿ ಚಂಡೀಗಢದ ಸಮೀಪವೇ ಇರುವ ಪಂಚಕುಲದಲ್ಲಿ ಮೂರನೇ ಬಾರಿ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭ ನಡೆಯಲಿದೆ.












Click it and Unblock the Notifications