Breaking: ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್
ಮುಂಬೈ, ಅ. 31: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್ಸಿಪಿ ಪ್ರಕಾರ, ಶರದ್ ಪವಾರ್ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
"ಡಿಸ್ಚಾರ್ಜ್ ನಂತರ ಶರದ್ ಪವಾರ್ ನವೆಂಬರ್ 4 ಮತ್ತು 5 ರಂದು ಶಿರಡಿಯಲ್ಲಿ ನಡೆಯಲಿರುವ ಪಕ್ಷದ ಶಿಬಿರಗಳಲ್ಲಿ ಭಾಗವಹಿಸುತ್ತಾರೆ" ಎಂದು ಎನ್ಸಿಪಿ ತಿಳಿಸಿದೆ.
ಹಿರಿಯ ನಾಯಕ ಶರದ್ ಪವಾರ್ ಅವರು ಈ ಹಿಂದೆ ಕಳೆದ ವರ್ಷ ಏಪ್ರಿಲ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎನ್ಸಿಪಿ ಮುಖ್ಯಸ್ಥರಿಗೆ ಪಿತ್ತಕೋಶದಲ್ಲಿ ಕಲ್ಲು ಇರುವುದು ಪತ್ತೆಯಾಗಿತ್ತು.

ಮಾರ್ಚ್ 30, 2021 ರಂದು, ಶರದ್ ಪವಾರ್ ಅವರು ಎಂಡೋಸ್ಕೋಪಿಕ್ ರೆಟ್ರೋಗ್ರೇಡ್ ಕೋಲಾಂಜಿಯೋಪಾಂಕ್ರಿಯಾಟೋಗ್ರಫಿ (ERCP) ಗೆ ಒಳಗಾಗಿದ್ದರು ಎಂದು ವರದಿಯಾಗಿದೆ.
ಶರದ್ ಪವಾರ್ ಅವರು ಶಿರಡಿಯಲ್ಲಿ ತಮ್ಮ ಪಕ್ಷದ ಶಿಬಿರಗಳಲ್ಲಿ ಭಾಗವಹಿಸುವುದಲ್ಲದೆ, ನವೆಂಬರ್ 8 ರಂದು ನಾಂದೇಡ್ ಮೂಲಕ ಮಹಾರಾಷ್ಟ್ರಕ್ಕೆ ಪ್ರವೇಶಿಸುವ ಕಾಂಗ್ರೆಸ್ನ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಲಿದ್ದಾರೆ.

ಇದಕ್ಕೂ ಮುನ್ನ, ಕಾಂಗ್ರೆಸ್ ಮುಖಂಡರಾದ ಅಶೋಕ್ ಚೌವಾಣ್ ಮತ್ತು ಬಾಳಾಸಾಹೇಬ್ ಥೋರಟ್ ಭೇಟಿಯಾಗಿ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ತಮಗೆ ಆಹ್ವಾನ ನೀಡಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದರು.
"ಈ ಯಾತ್ರೆಯು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿದೆ. ಆದರೆ ಈ ಪಾದಯಾತ್ರೆ ಮೂಲಕ ಸಮಾಜದಲ್ಲಿ ಸೌಹಾರ್ದತೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೇರೆ ಬೇರೆ ಪಕ್ಷಗಳ ನಾಯಕರು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇವೆ" ಎಂದು ಶರದ್ ಪವಾರ್ ಹೇಳಿದ್ದಾರೆ.












Click it and Unblock the Notifications