ಮಹಾರಾಷ್ಟ್ರ; ಭಾರತ್ ಜೋಡೋ ಯಾತ್ರೆಗೆ ಸಾಥ್ ನೀಡಲಿರುವ ಶರದ್ ಪವಾರ್
ನವದೆಹಲಿ, ಅ.23: ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರಕ್ಕೆ ಪ್ರವೇಶಿಸಿದಾಗ ಅದರಲ್ಲಿ ಭಾಗವಹಿಸುವುದಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಭಾನುವಾರ ಹೇಳಿದ್ದಾರೆ. ಈ ಯಾತ್ರೆ ಸಮಾಜದಲ್ಲಿ ಸಾಮರಸ್ಯವನ್ನು ತರುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಶರದ್ ಪವಾರ್, "ರಾಜ್ಯ ಕಾಂಗ್ರೆಸ್ ನಾಯಕರಾದ ಅಶೋಕ್ ಚವ್ಹಾಣ್ ಮತ್ತು ಬಾಳಾಸಾಹೇಬ್ ಥೋರಟ್ ತಮ್ಮನ್ನು ಭೇಟಿ ಮಾಡಿ ನವೆಂಬರ್ 7 ರಂದು ರಾಜ್ಯಕ್ಕೆ ಪ್ರವೇಶಿಸುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಾರೆ" ಎಂದು ಹೇಳಿದ್ದಾರೆ.
ಕರ್ನಾಟಕ ಶಾಂತಿ, ಸಾಮರಸ್ಯದ ನಾಡು; ರಾಜ್ಯದ ಜನತೆಗೆ ರಾಹುಲ್ ಭಾವುಕ ಪತ್ರ
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯು 150 ದಿನಗಳಲ್ಲಿ 3,570 ಕಿ.ಮೀ ನಡೆಯಲಿದೆ. ಈ ಯಾತ್ರೆಯು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದುವರೆಗೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶ ನಾಲ್ಕು ರಾಜ್ಯಗಳನ್ನು ಸುತ್ತಿದ್ದಾರೆ.
"ಈ ಯಾತ್ರೆಯು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿದೆ. ಆದರೆ ಈ ಪಾದಯಾತ್ರೆ ಮೂಲಕ ಸಮಾಜದಲ್ಲಿ ಸೌಹಾರ್ದತೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೇರೆ ಬೇರೆ ಪಕ್ಷಗಳ ನಾಯಕರು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇವೆ" ಎಂದು ಶರದ್ ಪವಾರ್ ಹೇಳಿದ್ದಾರೆ.
ಇನ್ನು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚುನಾವಣೆಗಳಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
"ಕೆಲವು ಕ್ಷೇತ್ರಗಳಲ್ಲಿ ರಾಜಕೀಯವನ್ನು ತರಬಾರದು, ಅದನ್ನು ಮಾಡುವವರು ಅಜ್ಞಾನಿಗಳು, ನಾನು ಬಿಸಿಸಿಐ ಅಧ್ಯಕ್ಷನಾಗಿದ್ದಾಗ ಗುಜರಾತ್ನ ಪ್ರತಿನಿಧಿ (ಈಗಿನ ಪ್ರಧಾನಿ) ನರೇಂದ್ರ ಮೋದಿ, ಅರುಣ್ ಜೇಟ್ಲಿ ದೆಹಲಿಯನ್ನು ಪ್ರತಿನಿಧಿಸಿದರೆ, ಅನುರಾಗ್ ಠಾಕೂರ್ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸಿದ್ದರು. ನಮ್ಮ ಕೆಲಸ ಆಟಗಾರರಿಗೆ ಸೌಲಭ್ಯಗಳನ್ನು ಒದಗಿಸುವುದು. ನಾವು ಇತರ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ" ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಭಾರತದ ಮಾಜಿ ಆಲ್ರೌಂಡರ್ ಆಟಗಾರ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಇದೀಗ ಬಿಸಿಸಿಐನ 36ನೇ ಅಧ್ಯಕ್ಷರಾಗಿದ್ದಾರೆ.
ಜಯ್ ಷಾ ಸತತ ಎರಡನೇ ಅವಧಿಗೆ ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಇತರ ಪದಾಧಿಕಾರಿಗಳಲ್ಲಿ ಖಜಾಂಚಿ ಆಶಿಶ್ ಶೇಲಾರ್, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಜಂಟಿ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸೇರಿದ್ದಾರೆ.