ದೆಹಲಿಯಲ್ಲಿ ಮಂಗಳವಾರ ಎನ್ಡಿಎ ಸಭೆ; 38 ಪಕ್ಷಗಳು ಭಾಗಿ
ನವದೆಹಲಿ, ಜುಲೈ 17; ಮುಂದಿನ ಲೋಕಸಭೆ ಚುನಾವಣೆಯ ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡು ದಿನದ ಸಭೆ ಆರಂಭಗೊಂಡಿದೆ. ಮತ್ತೊಂದು ಕಡೆ ಎನ್ಡಿಎ ಮೈತ್ರಿಕೂಟದ ಸಭೆ ಮಂಗಳವಾರ ದೆಹಲಿಯಲ್ಲಿ ನಡೆಯಲಿದೆ. 2024ರ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಸಭೆಗಳು ಕುತೂಹಲ ಮೂಡಿಸಿವೆ.
ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನವದೆಹಲಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದರು. ಎನ್ಡಿಎ ಮೈತ್ರಿಕೂಟದ ಜನಪ್ರಿಯತೆ ಹೆಚ್ಚಾಗುತ್ತಿದೆ. ನರೇಂದ್ರ ಮೋದಿ ಸರ್ಕಾರದ ಆಡಳಿತ, ಯೋಜನೆಗಳ ಇದಕ್ಕೆ ಸಹಾಯಕವಾಗಿದೆ ಎಂದರು.

ಮಂಗಳವಾರ ನಡೆಯಲಿರುವ ಎನ್ಡಿಎ ಮೈತ್ರಿಕೂಟದ ಸಭೆಯಲ್ಲಿ ಹಳೆಯ ಮಿತ್ರಪಕ್ಷಗಳು ಮತ್ತು ಹೊಸದಾಗಿ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿರುವ ಪಕ್ಷಗಳು ಪಾಲ್ಗೊಳ್ಳಲಿವೆ. ಒಟ್ಟು 38 ಪಕ್ಷಗಳು ಸಭೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಹೇಳಿದರು.
ವಿರೋಧ ಪಕ್ಷಗಳು ಮತ್ತು ಎನ್ಡಿಎ ಮೈತ್ರಿಕೂಟ ಮುಂದಿನ ಲೋಕಸಭೆ ಚುನಾವಣೆಯ ತಯಾರಿ ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿಯೇ ಎನ್ಡಿಎ ಮೈತ್ರಿಕೂಟ 2024ರ ಲೋಕಸಭೆ ಚುನಾವಣೆಯನ್ನು ಎದುರಿಸಲಿದೆ.
ಹೊಸದಾಗಿ ಅನೇಕ ಪಕ್ಷಗಳು ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿವೆ. ಭಾನುವಾರ ಉತ್ತರ ಪ್ರದೇಶದ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ (ಎಸ್ಬಿಎಸ್ಪಿ) ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಎನ್ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದ್ದರು.
ಉತ್ತರ ಪ್ರದೇಶದ ಮಾಜಿ ಸಚಿವ ಓಂ ಪ್ರಕಾಶ್ ರಾಜ್ಭರ್ ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದಿಂದ ದೂರವಾಗಿದ್ದರು. 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಮಾಜವಾದಿ ಪಕ್ಷ ಮತ್ತು ಎಸ್ಬಿಎಸ್ಪಿ ಒಟ್ಟಾಗಿ ಸ್ಪರ್ಧಿಸಿದ್ದವು. ಎರಡೂ ಪಕ್ಷಗಳಿಗೆ ಚುನಾವಣೆಯಲ್ಲಿ ಹಿನ್ನಡೆಯಾಗಿತ್ತು.
ಜುಲೈ ಆರಂಭದಲ್ಲಿ ಮೈತ್ರಿ ಕೊನೆಗೊಳಿಸುವುದಾಗಿ ಎಸ್ಬಿಎಸ್ಪಿ ಘೋಷಣೆ ಮಾಡಿತ್ತು. ಭಾನುವಾರ ಓಂ ಪ್ರಕಾಶ್ ರಾಜ್ಭರ್ ಎನ್ಡಿಎ ಮೈತ್ರಿಕೂಟ ಬೆಂಬಲಿಸುತ್ತೇನೆ ಎಂದು ಹೇಳಿದ್ದರು. ಮಂಗಳವಾರ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಅವರು ಸಹ ಪಾಲ್ಗೊಳ್ಳಲಿದ್ದಾರೆ.
ಸೋಮವಾರ ಸಂಜೆ ಲೋಕಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಎನ್ಡಿಎ ಮೈತ್ರಿಕೂಟಕ್ಕೆ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ನಡೆದ ಸಭೆಯ ಬಳಿಕ ಅವರು ಈ ಘೋಷಣೆ ಮಾಡಿದ್ದು, ಮಂಗಳವಾರ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿರುವ ಎನ್ಪಿಪಿ, ಎನ್ಡಿಪಿಪಿ, ಎಸ್ಕೆಎಂ, ಐಟಿಎಫ್ಟಿ, ಬಿಪಿಪಿ, ಎಜಿಪಿ ಪಕ್ಷಗಳು ಸಹ ಸಭೆಯಲ್ಲಿ ಪಾಲ್ಗೊಳ್ಳಲಿವೆ. ಬಿಹಾರ ಮತ್ತು ಉತ್ತರ ಪ್ರದೇಶದ ಮೂರು ಹೊಸ ಪಕ್ಷಗಳು. ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಸಹ ಎನ್ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದ್ದು, ಸಭೆಯಲ್ಲಿ ಪಾಲ್ಗೊಳ್ಳಲಿವೆ.
ಎನ್ಡಿಎ ಮೈತ್ರಿಕೂಟ ಬೆಂಬಲಿಸಿರುವ ತಮಿಳುನಾಡಿನ ಎಐಎಡಿಎಂಕೆ, ತಮಿಳು ಮಹಿಳಾ ಕಾಂಗ್ರೆಸ್, ಮಹಾರಾಷ್ಟ್ರದ ಏಕನಾಥ್ ಶಿಂಧೆ ಬಣದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಸಹ ಮಂಗಳವಾರದ ಸಭೆಯಲ್ಲಿ ಭಾಗಿಯಾಗಲಿವೆ.
ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ಹಬ್ಬಿದೆ. ಆದರೆ ಈ ಕುರಿತು ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮಾತನಾಡಿದ್ದು, "ಎನ್ಡಿಎ ಮೈತ್ರಿ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನನಗೆ ಯಾರೂ ಕರೆ ಕೂಡ ಮಾಡಿಲ್ಲ" ಎಂದು ಸ್ಪಷ್ಟಪಡಿಸಿದರು.












Click it and Unblock the Notifications