New Parliament Inauguration: ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುತ್ತೇವೆ ಎಂದ 2 ವಿಪಕ್ಷಗಳು
ಇದೇ ಮೇ 28ರಂದು ಹೊಸ ಸಂಸತ್ ಭವನ ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಹಲವು ವಿಪಕ್ಷಗಳು ಗೈರು ಹಾಜರಾಗುವುದಾಗಿ ತಿಳಿಸಿವೆ.
ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಎಎಪಿ, ಎನ್ಸಿಪಿ, ಎಡಪಕ್ಷಗಳು ಸೇರಿದಂತೆ 19 ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ನಿರ್ಧರಿಸಿದ್ದರೆ, ಇದೇ ವೇಳೆ ಎರಡು ವಿಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿವೆ.

ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಪಕ್ಷಗಳಲ್ಲದ ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಹಾಗೂ ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿವೆ.
ಸಂಸತ್ ಭವನ ಉದ್ಘಾಟನೆ ದೇಶದ ಪ್ರಜಾಪ್ರಭುತ್ವ ಪಾಲಿಗೆ ಐತಿಹಾಸಿಕ ದಿನ. ಭಿನ್ನಾಭಿಪ್ರಾಯಗಳಿದ್ದರೆ, ಅನಂತರ ಕುಳಿತು ಚರ್ಚಿಸೋಣ ಎಂದು ಬಿಜೆಡಿ ನಾಯಕ ಹಾಗೂ ಒಡಿಶಾ ಸಿಎಂ ನವೀನ್ ಪಟ್ನಾಯಕ್ ತಿಳಿಸಿದ್ದಾರೆ.
19 ವಿಪಕ್ಷಗಳ ಬಹಿಷ್ಕಾರಕ್ಕೆ ಕಾರಣವೇನು?
ಮೇ 28ರಂದು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ. ಆದರೆ, ರಾಷ್ಟ್ರಪತಿಗಳು ಉದ್ಘಾಟನೆ ಮಾಡದಿರುವುದು ಮತ್ತು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದನ್ನು ವಿಪಕ್ಷಗಳು ಖಂಡಿಸಿದ್ದು, ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಎಂದು ಆರೋಪಿಸಿವೆ.

ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರದ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು, ಸಂಸತ್ ಭವನ ಉದ್ಘಾಟನೆ ಒಂದು ಮಹತ್ವದ ಸಂದರ್ಭವಾಗಿದೆ. ಆದರೆ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆ ಹಾಗೂ ಹೊಸ ಸಂಸತ್ ನಿರ್ಮಿಸಿದ ನಿರಂಕುಶ ವಿಧಾನದ ಬಗ್ಗೆ ನಮ್ಮ ಅಸಮ್ಮತಿ ಇದೆ.
ಇದರ ಹೊರತಾಗಿಯೂ, ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಸಂದರ್ಭವನ್ನು ಗುರುತಿಸಲು ನಾವು ಮುಕ್ತರಾಗಿದ್ದೇವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಸಂಸತ್ ಭವನ ಉದ್ಘಾಟಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ದೊಡ್ಡ ಅವಮಾನವಷ್ಟೇ ಅಲ್ಲದೆ, ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ವಿಪಕ್ಷಗಳ ಆರೋಪವಾಗಿದೆ.
ನೂತನ ಸಂಸತ್ ಭವನ ವಿರೋಧಿಸಿದ್ದ ವಿಪಕ್ಷಗಳು
ಇದಕ್ಕೂ ಮೊದಲು ನೂತನ ಸಂಸತ್ ಭವನ ನಿರ್ಮಿಸಲು ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಯೋಜನೆ ಕೈಗೆತ್ತಿಕೊಂಡಾಗ, ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಮಾತ್ರವಲ್ಲದೇ, ಸಂಸತ್ ಭವನ ನಿರ್ಮಾಣದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಆದರೆ, ಸುಪ್ರೀಂ ಕೋರ್ಟ್ ವಿಪಕ್ಷಗಳ ಅರ್ಜಿಯನ್ನು ತಿರಸ್ಕರಿಸಿತ್ತು.

ಈಗಿರುವ ಹಳೆಯ ಸಂಸತ್ ಕಟ್ಟಡ ಬ್ರಿಟಿಷರ ಕಾಲದ್ದಾಗಿದೆ. ದೇಶದ 545 ಲೋಕಸಭೆ ಸದಸ್ಯರು, 250ಕ್ಕೂ ಹೆಚ್ಚು ರಾಜ್ಯಸಭೆ ಸದಸ್ಯರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಜಾಗವಿರಲಿಲ್ಲ. ಅಲ್ಲದೇ, ಮಳೆ ಬಂದಾಗ ಸೋರುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.
ವಿಪರ್ಯಾಸವೆಂದರೆ, ಹೊಸ ಸಂಸತ್ ಕಟ್ಟಡ ನಿರ್ಮಾಣಕ್ಕೆ ಯುಪಿಎ ಸರ್ಕಾರವೇ ನಿರ್ಧರಿಸಿತ್ತು. ಅಂದಿನ ಸ್ಪೀಕರ್ ಮೀರಾ ಕುಮಾರ್ ಅವರು ಹೊಸ ಸಂಸತ್ ಭವನ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇನ್ನೇನು ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬೇಕು ಎನ್ನುವಷ್ಟರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತು. ಇದೀಗ ಕಾಂಗ್ರೆಸ್ ಪಕ್ಷವೇ ಹೊಸ ಸಂಸತ್ ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದೆ.












Click it and Unblock the Notifications