ಲೋಕಸಭೆ ಚುನಾವಣೆಗೆ ನಿಖಿಲ್ ಸಜ್ಜು: ಅಖಿಲೇಶ್ ಯಾದವ್ ಜೊತೆ ಸುದೀರ್ಘ ಚರ್ಚೆ
ಲಕ್ನೋ, ಜೂನ್ 15: ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಇಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಲಕ್ನೋದ ಅವರ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.
ತಮ್ಮ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡ ಅಖಿಲೇಶ್ ಯಾದವ್, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದ ಬಗ್ಗೆ ದೀರ್ಘಕಾಲ ಮಾತುಕತೆ ನಡೆಸಿದ್ದಾರೆ.

ಅಖಿಲೇಶ್ ಯಾದವ್ ಭೇಟಿ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದರು.
ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ
ಇನ್ನು ಮಾತು ಮುಂದುವರಿಸಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ. ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜೊತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಬಳಿ ಕೂಲಂಕಷವಾಗಿ ಚರ್ಚಿಸಿದರು ಎಂದು ಹೇಳಿದರು.
ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.












Click it and Unblock the Notifications