ನಿರ್ಭಯ ಪ್ರಕರಣ; ಅಕ್ಷಯ್ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ
ನವದೆಹಲಿ, ಡಿಸೆಂಬರ್ 17 : ನಿರ್ಭಯ ಪ್ರಕರಣದ ಅಪರಾಧಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿಗಳು ಹಿಂದೆ ಸರಿದರು. ಬುಧವಾರ ಅರ್ಜಿ ವಿಚಾರಣೆಗೆ ಹೊಸ ಪೀಠ ರಚನೆಯಾಗಲಿದೆ.
ಮಂಗಳವಾರ ಸುಪ್ರೀಂಕೋರ್ಟ್ನಲ್ಲಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಆಗ ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದರು. ಬುಧವಾರ ಹೊಸ ಪೀಠ ರಚನೆ ಮಾಡುವುದಾಗಿ ಹೇಳಿದರು.

ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ ಸಹೋದರನ ಪುತ್ರ ಅರ್ಜುನ್ ಬೋಬ್ಡೆ ಸಂತ್ರಸ್ತೆಯ ತಾಯಿ ಪರವಾಗಿ ವಾದ ಮಂಡನೆ ಮಾಡಿದ್ದರು. ಆದ್ದರಿಂದ, ಸಿಜೆಐ ವಿಚಾರಣೆಯಿಂದ ಹಿಂದೆ ಸರಿದಿದ್ದು, ಹೊಸ ಪೀಠದಲ್ಲಿ ವಿಚಾರಣೆ ಮುಂದುವರೆಯಲಿದೆ.
ನಿರ್ಭಯ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಕ್ಷಯ್ ಠಾಕೂರ್ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು.
ಅಕ್ಷಯ್ ಠಾಕೂರ್ ಪರವಾಗಿ ವಾದ ಮಂಡನೆ ಮಾಡಿದ ವಕೀಲ ಎ. ಪಿ. ಸಿಂಗ್ ಪ್ರಕರಣದ ವಿಚಾರಣೆ ಸರಿಯಾಗಿ ನಡೆದಿಲ್ಲ. ಆದ್ದರಿಂದ, ತೀರ್ಪನ್ನು ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.
ಆಗ ಮುಖ್ಯ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯಿಂದ ನಾನು ಹಿಂದೆ ಸರಿಯುತ್ತಿದ್ದೇನೆ. ಬುಧವಾರ ಬೆಳಗ್ಗೆ 10.30ಕ್ಕೆ ಹೊಸ ಪೀಠವನ್ನು ರಚನೆ ಮಾಡಲಾಗುತ್ತದೆ ಎಂದು ಹೇಳಿದರು.
ಅಕ್ಷಯ್ ಠಾಕೂರ್ ನಿರ್ಭಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿರುವ 4ನೇ ಅಪರಾಧಿ. ನ್ಯಾಯಾಲಯ ಈಗಾಗಲೇ ಮುಕೇಶ್, ವಿನಯ್ ಮತ್ತು ಪವನ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
ಅಕ್ಷಯ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೊಸ ಪೀಠದಲ್ಲಿ ನಡೆಯುವ ಕಾರಣ ಅಪರಾಧಿಗಳ ಗಲ್ಲು ಶಿಕ್ಷೆ ಜಾರಿ ವಿಳಂಬವಾಗಲಿದೆ. ದೆಹಲಿಯ ತಿಹಾರ್ ಜೈಲಿನಲ್ಲಿ ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.












Click it and Unblock the Notifications