ಇಂದು ಸೋನಿಯಾ ಗಾಂಧಿ, ನಿತೀಶ್ ಕುಮಾರ್, ಲಾಲು ಯಾದವ್ ಭೇಟಿ
ನವದೆಹಲಿ, ಸೆ. 25: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಸಂಪೂರ್ಣ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಈ ಭೇಟಿ ನಡೆಯುತ್ತದೆ ಎನ್ನಲಾಗಿದೆ. ಆರು ವರ್ಷಗಳ ನಂತರ ಇದು ಮೂರು ಪಕ್ಷಗಳ ನಡುವಿನ ಮೊದಲ ಸಭೆಯಾಗಿದೆ ಎಂಬುದು ಇಲ್ಲಿ ಗಮನಾರ್ಹ ವಿಷಯವಾಗಿದೆ.
ಬಿಜೆಪಿ ದೊಡ್ಡ ಶತ್ರು, ನಾನು ಕೇಂದ್ರಕ್ಕೆ ತಲೆ ಬಾಗುವುದಿಲ್ಲ: ಲಾಲು ಪ್ರಸಾದ್ ಯಾದವ್
ಐಎನ್ಎಲ್ಡಿ ನಾಯಕ ಒಪಿ ಚೌತಾಲಾ ಅವರ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್ಡಿ) ಸಂಸ್ಥಾಪಕ ದಿವಂಗತ ಚೌಧರಿ ದೇವಿ ಲಾಲ್ ಅವರ ಜನ್ಮದಿನದಂದು ಫತೇಹಾಬಾದ್ ಜಿಲ್ಲೆಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಭಾಗವಹಿಸಲು ಇಬ್ಬರೂ ಪ್ರಭಾವಿ ನಾಯಕರು ದೆಹಲಿಗೆ ಆಗಮಿಸುತ್ತಿದ್ದಾರೆ.
ಲಾಲು, ನಿತೀಶ್, ಸೋನಿಯಾ ಮಹತ್ವದ ಭೇಟಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವುದಾಗಿ ಮಂಗಳವಾರ ಲಾಲು ಪ್ರಸಾದ್ ಯಾದವ್ ಹೇಳಿದ್ದರು.
"ಎಲ್ಲರೂ ಈಗ ಎಚ್ಚೆತ್ತುಕೊಳ್ಳಬೇಕು, 2024ರಲ್ಲಿ ಬಿಜೆಪಿಯನ್ನು ಬೇರು ಸಮೇತ ಕಿತ್ತೊಗೆಯಬೇಕು. ಶೀಘ್ರವೇ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ, ಅವರ ಪಾದಯಾತ್ರೆ ಮುಗಿದ ಬಳಿಕ ರಾಹುಲ್ ಗಾಂಧಿಯನ್ನೂ ಭೇಟಿ ಮಾಡುತ್ತೇನೆ" ಎಂದು ಆರ್ಜೆಡಿ ಮುಖ್ಯಸ್ಥರು ಹೇಳಿದ್ದಾರೆ.
ವಿಶ್ವಾಸಾರ್ಹ ನಾಯಕ, ಸಾಮೂಹಿಕ ಚಳವಳಿಯ ಅಗತ್ಯವಿದೆ
ಆದರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಜನರ ಮತವನ್ನು ಕೇಳಲು "ವಿಶ್ವಾಸಾರ್ಹ ಮುಖ" ಮತ್ತು ಸಾಮೂಹಿಕ ಚಳುವಳಿಯ ಅವಶ್ಯಕತೆಯಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
"ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಭೇಟಿ ಮಾಡುವುದರಿಂದ "ಹೆಚ್ಚು ವ್ಯತ್ಯಾಸವಾಗುವುದಿಲ್ಲ" . ಇಂತಹ ಸಭೆಗಳನ್ನು ಪ್ರತಿಪಕ್ಷಗಳ ಒಗ್ಗಟ್ಟು ಅಥವಾ ರಾಜಕೀಯ ಬೆಳವಣಿಗೆ ಎಂದು ನೋಡಲಾಗುವುದಿಲ್ಲ. ಇದನ್ನು ನಂಬದವರು ಕಾದು ನೋಡಬೇಕು" ಎಂದು ಅಭಿಪ್ರಾಯಪಟ್ಟಿದ್ದಾರೆ.
ಎಲ್ಲಾ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿರುವ ನಿತೀಶ್ ಕುಮಾರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, 2024 ರ ಲೋಕಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಯನ್ನು ಸೋಲಿಸಲು ಯತ್ನಿಸುತ್ತಿದ್ದು, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.
ನಿತೀಶ್ ಕುಮಾರ್ ಅವರು ಕೊನೆಯ ಸಾರಿ ದೆಹಲಿಗೆ ಭೇಟಿ ನೀಡಿದ್ದ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ನಾಯಕರಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದಾರೆ.
ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಬಿಹಾರಕ್ಕೆ ಭೇಟಿ ನೀಡಿ ನಿತೀಶ್ ಕುಮಾರ್ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನದ ಭಾಗವಾಗಿ ಭೇಟಿ ಮಾಡಿದ್ದರು.
ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿ ಎಂಬ ಪೋಸ್ಟರ್ಗಳು
ಬಿಹಾರದಲ್ಲಿ 'ಮಹಾಘಟಬಂಧನ್' ಸರ್ಕಾರ ರಚಿಸಲು ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದಾರೆ. ಈ ಘಟನೆಗಳ ನಂತರ ಅವರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿದ್ದಾರೆ.
ಇತ್ತ, ನಿತೀಶ್ ಕುಮಾರ್ ಅವರನ್ನು 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ವಿವಿಧ ಪೋಸ್ಟರ್ಗಳು ಕಳೆದ ತಿಂಗಳು ಪಾಟ್ನಾದಲ್ಲಿ ಕಂಡುಬಂದವು. ಜೆಡಿಯು ಹಾಕಿದ ಪೋಸ್ಟರ್ಗಳಲ್ಲಿ ಉತ್ತಮ ಆಡಳಿತದ ಭರವಸೆ ನೀಡಿದೆ.
ಮತ್ತೊಂದು ಪೋಸ್ಟರ್ನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲಾಗಿದ್ದು, ಸುಳ್ಳು ಇಲ್ಲ ಇಲ್ಲಿ ವಾಸ್ತವ ಮಾತ್ರ ಎಂಬ ಶೀರ್ಷಿಕೆ ಹೊಂದಿದೆ.
ಪ್ರಮುಖವಾಗಿ 2024 ರ ಚುನಾವಣೆಯಲ್ಲಿ ಪ್ರಧಾನಿ ಹುದ್ದೆಗೆ ನಿತೀಶ್ ಕುಮಾರ್ ಅವರು "ಪ್ರಬಲ ಅಭ್ಯರ್ಥಿ" ಆಗಬಹುದು ಎಂದು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.