ಆಜ್ತಕ್ ವಾಹಿನಿಯ ಸುಧೀರ್ ಚೌಧರಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಬೆಂಗಳೂರು, ಸೆ.16: ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿ ಸಂಕಷ್ಟಕ್ಕೆ ಸಿಲುಕಿರುವ ಆಜ್ತಕ್ ವಾಹಿನಿಯ ಸುಧೀರ್ ಚೌಧರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಅವರು ಕೋಮು ಗಲಭೆ ನಡೆಸಲು ಪ್ರಚೋದನೆ ನೀಡಿದ ಆರೋಪ ಸಂಬಂಧ ದಾಖಲಾದ ಎಫ್ಐಆರ್ಗೆ ಸಂಬಂಧಿಸಿದಂತೆ ಆಜ್ತಕ್ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ನಗರದ ಶೇಷಾದ್ರಿಪುರಂ ಠಾಣಾ ಪೊಲೀಸರಿಗೆ ಹೈಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸುಧೀರ್ ಚೌಧರಿ ಮತ್ತು ಆಜ್ತಕ್ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಈ ಆದೇಶ ನೀಡಿದ್ದಾರೆ.
"ಸೆ.20ರಂದು ಅರ್ಜಿಯನ್ನು ಇತ್ಯರ್ಥ ಪಡಿಸಲಾಗುವುದು. ಅಲ್ಲಿಯವರೆಗೆ ಪೊಲೀಸರು ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು. ಎಲ್ಲಾ ವಿಚಾರ ಸಾರ್ವಜನಿಕ ಅಂಗಳದಲ್ಲಿರುವ ಕಾರಣ ಅರ್ಜಿದಾರರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ'' ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ ಏನು? ಕಳೆದ ಸೆ.11ರಂದು ರಾತ್ರಿ 9.55ರ ವೇಳೆಗೆ ರಾಷ್ಟ್ರೀಯ ಸುದ್ದಿ ವಾಹಿನಿಯಾದ ಆಜ್ ತಕ್ನಲ್ಲಿ ಪ್ರಸಾರವಾದ ಸುದ್ದಿಯಲ್ಲಿ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಅವರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯ ಪ್ರಯೋಜನವನ್ನು ಕೇವಲ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ.
ಅಲ್ಪಸಂಖ್ಯಾತರಲ್ಲದ ಹಿಂದೂಗಳಿಗೆ ಈ ಯೋಜನೆ ನೀಡುತ್ತಿಲ್ಲ. ಆ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಅಲ್ಪಸಂಖ್ಯಾತರಲ್ಲದ ಬಡ ಹಿಂದೂಗಳಿಗೆ ಅನ್ಯಾಯವಾಗಿರುತ್ತದೆ ಎಂದು ಆರೋಪಿಸಿದ್ದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಹಾಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ಆಡಳಿತಾಧಿಕಾರಿ ಎಸ್.ಶಿವಕುಮಾರ್ , ಶೇಷಾದ್ರಿಪುರಂ ಠಾಣೆಯಲ್ಲಿ ದೂರು ನೀಡಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಜನರು ಬ್ಯಾಂಕ್ ಮೂಲಕ ಸಾಲ ಪಡೆದು ಟ್ಯಾಕ್ಸಿ/ಗೂಡ್ಸ್ ವಾಹನ/ ಆಟೊರಿಕ್ಷಾ ಖರೀದಿಸಲು ಬಯಸಿದ್ದಲ್ಲಿ ನಿಗಮವು ಸಾರಥಿ ಯೋಜನಯಡಿ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರು. ಸಹಾಯಧನ ನೀಡಲಾಗುತ್ತದೆ.
ಈ ಯೋಜನೆಯು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇತರೆ ಜಾತಿಯ ನಿಗಮಗಳಲ್ಲಿ ಅನುಷ್ಠಾನದಲ್ಲಿದೆ. ಆದರೆ, ಚೌಧರಿ ಅವರು ಸುಳ್ಳು ಸುದ್ದಿ ಬಿತ್ತರಿಸಿದ್ದಾರೆ.
ಕೋಮು ಗಲಭೆಗೆ ಪ್ರಚೋದನೆ ನೀಡುವ ಪಯತ್ನ
ಆ ಮೂಲಕ ಹಿಂದೂ ಧರ್ಮ ಮತ್ತು ಇತರ ಧರ್ಮಗಳ ನಡುವೆ ದ್ವೇಷ ಹರಡುವ, ಅಶಾಂತಿಯ ವಾತಾವರಣ ಸೃಷ್ಟಿಸುವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಈ ದೂರು ಆಧರಿಸಿ ಸುಧೀರ್ ಚೌಧರಿ, ಆಜ್ ತಕ್ ಸುದ್ದಿ ವಾಹಿನಿ ಮತ್ತು ವಾಹಿನಿಯ ಸಂಘಟಕರ ವಿರುದ್ಧ ಎರಡು ಸಮುದಾಯಗಳ ನಡುವೆ ಧ್ವೇಷ ಹರಡುವ ಮತ್ತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಲೇರಿದ್ದಾರೆ.












Click it and Unblock the Notifications