ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಸ್ತಾಪಿಸಿದ ಪ್ರಮುಖ ಅಂಶಗಳು
ನವದೆಹಲಿ, ಜುಲೈ 20 : ರೈತರ ಸಾಲ ಮನ್ನಾ, ಸರ್ಕಾರದ ವಿದೇಶಾಂಗ ನೀತಿ, ಪ್ರತಿ ವ್ಯಕ್ತಿಯ ಖಾತೆಗೆ 15 ಲಕ್ಷ ರೂ. ಜಮೆ, ರಫೆಲ್ ಯುದ್ಧ ವಿಮಾನ ಖರೀದಿ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಪರವಾಗಿ ಮೊದಲು ಮಾತನಾಡಿದ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.
'ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ' ಎಂದು ಎದುರು ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕುತ್ತಲೇ ಆರೋಪಗಳನ್ನು ಮಾಡಿದರು. ಬಿಜೆಪಿ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕಲಾಪದಲ್ಲಿ ಕೆಲವು ಕಾಲ ಗದ್ದಲ ಉಂಟಾಯಿತು.
'ಪ್ರಧಾನಿ ಚೌಕೀದಾರರು ಮಾತ್ರವಲ್ಲ ಭ್ರಷ್ಟತೆಯ ಭಾಗೀದಾರರು' ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮಾಡಿದ ಭಾಷಣದ ಮುಖ್ಯಾಂಶಗಳು ಇಲ್ಲಿವೆ....

ಉದ್ಯೋಗ ಸೃಷ್ಟಿ ಎಲ್ಲಿದೆ?
ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಉದ್ಯೋಗ ಸೃಷ್ಟಿಯ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರು. '2 ಕೋಟಿ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಕಳೆದ ಒಂದು ವರ್ಷದಲ್ಲಿ ಕೇವಲ 4 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ. ಚೀನಾ 24 ಗಂಟೆಯಲ್ಲಿ 50 ಸಾವಿರ ಉದ್ಯೋಗ ನೀಡಿದೆ. ನಮ್ಮ ಸರ್ಕಾರ 400 ಉದ್ಯೋಗವನ್ನು ಮಾತ್ರ ನೀಡಿದೆ' ಎಂದು ವಾಗ್ದಾಳಿ ನಡೆಸಿದರು.

ರೈತರ ಬಗ್ಗೆ ಕಾಳಜಿ ಇಲ್ಲ
ಭಾಷಣ ಆರಂಭ ಮಾಡಿದ ರಾಹುಲ್ ಗಾಂಧಿ, ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದರು. 'ಉದ್ಯಮಿಗಳ ಸಾವಿರಾರು ಕೋಟಿ ರೂ. ಮೌಲ್ಯದ ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದಾರೆ. ಆದರೆ, ರೈತರ ಸಾಲವನ್ನು ಮನ್ನಾ ಮಾಡಲು ಪ್ರಧಾನಿ ಮೋದಿ ಅವರಿಗೆ ಇಚ್ಛಾಶಕ್ತಿ ಇಲ್ಲ' ಎಂದು ದೂರಿದರು.
'ದೇಶದಲ್ಲಿ ತೈಲದ ಬೆಲೆಗಳು ಹೆಚ್ಚಾಗುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಶ್ರೀಮಂತ ಉದ್ಯಮಿಗಳ ಜೇಬು ತುಂಬಿಸುವ ಕೆಲಸ ಮಾಡುತ್ತಿದ್ದಾರೆ' ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಆರೋಪಿಸಿದರು.

ದೇಶದ ಜನಗರಿ ಸುಳ್ಳು ಹೇಳುತ್ತಿದ್ದಾರೆ
ರೆಫಲ್ ಯುದ್ಧ ವಿಮಾನ ಖರೀದಿ ಬಗ್ಗೆ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, 'ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ' ಎಂದು ಆರೋಪಿಸಿದರು. ಬಿಜೆಪಿ ಸದಸ್ಯರು ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಗದ್ದಲ ಮಾಡಿದರು.
'ಯುದ್ಧ ವಿಮಾನ ಖರೀದಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡಬೇಕು. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಜನರಿಗೆ ಸುಳ್ಳು ಹೇಳಿದ್ದಾರೆ' ಎಂದು ರಾಹುಲ್ ಗಾಂಧಿ ಆರೋಪ ಮಾಡಿದರು.

ಬಡವರ ಹೃದಯದಲ್ಲಿ ಸ್ಥಾನವಿಲ್ಲ
ಜಿಎಸ್ಟಿ, ನೋಟುಗಳ ನಿಷೇಧ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಹೃದಯದಲ್ಲಿ ಸ್ಥಾನವಿಲ್ಲ. ಜಿಎಸ್ಟಿ ಜಾರಿಗೆ ತಂದು ಕೋಟ್ಯಾಂತರ ಜನರ ಉದ್ಯೋಗವನ್ನು ನಾಶ ಮಾಡಿದ್ದೀರಿ' ಎಂದು ರಾಹುಲ್ ಗಾಂಧಿ ಆರೋಪಿಸಿದರು.
'ದೇಶದ ಪ್ರತಿ ವ್ಯಕ್ತಿಯ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದೀರಿ. ಉದ್ಯೋಗ ಸೃಷ್ಟಿಯಾಗಲಿಲ್ಲ. ಜನರ ಖಾತೆಗೆ ಹಣ ಬರಲಿಲ್ಲ' ಎಂದು ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಹವಲು ಆರೋಪಗಳನ್ನು ಮಾಡಿದರು.











Click it and Unblock the Notifications