ಮೀಸಲಾತಿ ಮೂಲಭೂತ ಹಕ್ಕು ಅಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ, ಫೆಬ್ರವರಿ 8: ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದಿರುವ ಸುಪ್ರೀಂಕೋರ್ಟ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಯಾವ ನ್ಯಾಯಾಲಯವೂ ಆದೇಶ ನೀಡುವಂತಿಲ್ಲ ಎಂದು ಹೇಳಿದೆ.
ಖಾಸಗಿ ವಲಯದ ಉದ್ಯೋಗಕ್ಕೆ ಮೀಸಲಾತಿ ಇಲ್ಲ
ಶುಕ್ರವಾರ ಈ ಪ್ರಮುಖ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್, ಸರ್ಕಾರಿ ಉದ್ಯೋಗಗಳಲ್ಲಿ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವ ವಿವೇಚನಾಧಿಕಾರಿ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳಿಗೆ ಇದೆ. ಹಾಗೆಯೇ ಅದನ್ನು ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಅನುಸರಿಸಲೇ ಬೇಕು ಎಂಬ ನಿರ್ಬಂಧಗಳು ಇಲ್ಲ ಎಂದು ತಿಳಿಸಿದೆ.
ರಾಜ್ಯ ಸರ್ಕಾರ ನಿರ್ಧರಿಸಬಹುದು
ಸರ್ಕಾರದ ಹುದ್ದೆಗಳಿಗೆ ನೇಮಕಾತಿ ಮಾಡುವ ಸಂದರ್ಭದಲ್ಲಿ ಹಾಗೂ ಬಡ್ತಿ ನೀಡುವಾಗ ಅಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವ ಅಗತ್ಯವಿದೆಯೇ ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸಬಹುದು ಎಂದು ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಹೇಮಂತ್ ಗುಪ್ತಾ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.
ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಅನಿಸಿದರೆ ಈ ಸಮುದಾಯಗಳಿಗೆ ಮೀಸಲಾತಿ ನೀಡುವ ವಿಚಾರವಾಗಿ ಅದು ದತ್ತಾಂಶಗಳನ್ನು ಸಂಗ್ರಹಿಸಬಹುದು. ಇಲ್ಲದಿದ್ದರೆ ಅದರ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.
ಮೀಸಲಾತಿ ಮೂಲಭೂತ ಹಕ್ಕು ಅಲ್ಲ
ಈ ಹಿಂದೆ ನ್ಯಾಯಾಲಯವು ನೀಡಿದ್ದ ತೀರ್ಪುಗಳ ಪ್ರಕಾರ, ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ಬದ್ಧತೆ ಅಲ್ಲ. ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಬಡ್ತಿಯಲ್ಲಿ ಮೀಸಲಾತಿ ಕೊಡಬೇಕು ಎನ್ನುವುದು ವ್ಯಕ್ತಿಯ ಮೂಲಭೂತ ಹಕ್ಕು ಅಲ್ಲ. ಹಾಗೆಯೇ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಎಸ್ಸಿ/ಎಸ್ಟಿ ಮೀಸಲಾತಿ ಮತ್ತೆ 10 ವರ್ಷಕ್ಕೆ ಮುಂದುವರಿಕೆ
ರಾಜ್ಯ ಸರ್ಕಾರದ ವಿವೇಚನಾಧಿಕಾರ
ನೇಮಕಾತಿ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಸಂವಿಧಾನದ 16 (4) ಮತ್ತು 16 (4ಎ) ವಿಧಿಗಳು ರಾಜ್ಯ ಸರ್ಕಾರಕ್ಕೆ ನೀಡುತ್ತವೆ. ಮೀಸಲಾತಿ ನೀಡಬೇಕೇ ಅಥವಾ ಬೇಡವೇ ಎಂಬುದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟಿರುತ್ತದೆ ಎಂದು ವಿವರಿಸಿದೆ.
ಉತ್ತರಾಖಂಡ ಹೈಕೋರ್ಟ್ ತೀರ್ಪು
ಉತ್ತರಾಖಂಡದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಹುದ್ದೆಗೆ ಮೀಸಲಾತಿ ನೀಡುವ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಬಡ್ತಿಯಲ್ಲಿ ಮೀಸಲಾತಿ ಒದಗಿಸಬೇಕು ಎಂದು 2019ರ ಜುಲೈ 15ರಂದು ಉತ್ತರಾಖಂಡ ಹೈಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಇಂದ್ರಾ ಸಾಹ್ನಿ (1992), ಎಂ. ನಾಗರಾಜ್ (2006), ಜರ್ನೈಲ್ ಸಿಂಗ್ (2018), ಸುರೇಶ್ ಚಂದ್ ಗೌತಮ್ (2016) ಪ್ರಕರಣಗಳಲ್ಲಿನ ತೀರ್ಪುಗಳ ಆಧಾರದಲ್ಲಿ ನ್ಯಾಯಪೀಠವು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.
ಉತ್ತರಾಖಂಡದ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಮುಂದೆ ನೇಮಕಾತಿ ನಡೆಸುವಾಗ ಸಹಾಯಕ ಎಂಜಿನಿಯರ್ಗಳ ಎಲ್ಲ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದವರನ್ನೇ ನೇಮಿಸಬೇಕು ಎಂದು ಉತ್ತರಾಖಂಡ ಹೈಕೋರ್ಟ್ ಆದೇಶಿಸಿತ್ತು. ಇದು ಸಮರ್ಥನೀಯ ಆದೇಶವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಎಸ್ಸಿ, ಎಸ್ಟಿ ನೌಕರರ ವಾದ
ಸರ್ಕಾರದ ಹುದ್ದೆಗಳಲ್ಲಿ ಎಸ್ಸಿ ಮತ್ತು ಎಸ್ಟಿ ಪ್ರಾತಿನಿಧ್ಯವು ಸಾಕಷ್ಟು ಪ್ರಮಾಣದಲ್ಲಿ ಇದೆ ಎಂಬುದನ್ನು ದತ್ತಾಂಶ ಸಂಗ್ರಹಣೆ ಮೂಲಕ ಖಾತರಿಪಡಿಸಿಕೊಂಡ ಬಳಿಕವಷ್ಟೇ ಮೀಸಲಾತಿ ನೀಡುವುದಿಲ್ಲ ಎಂದು ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ಉತ್ತರಾಖಂಡದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರು ವಾದಿಸಿದ್ದರು.
ಕೋರ್ಟ್ ನಿರ್ದೇಶನ ನೀಡಲಾಗದು
ಬಡ್ತಿಯಲ್ಲಿ ಮೀಸಲಾತಿ ನೀಡುವುದಿಲ್ಲ ಎಂಬ ನಿರ್ಧಾರವನ್ನು ಉತ್ತರಾಖಂಡ ಸರ್ಕಾರ ಪ್ರಜ್ಞಾಪೂರ್ವಕವಾಗಿ ತೆಗೆದುಕೊಂಡಿದೆ. ಬಡ್ತಿಯಲ್ಲಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರದ ಹೊಣೆಗಾರಿಕೆಯಲ್ಲ. ಹೀಗಾಗಿ ಪರಿಶಿಷ್ಟ ಜಾತಿ/ಪಂಗಡಗಳಿಗೆ ಸೇರಿದವರು ಅಗತ್ಯ ಪ್ರಮಾಣದಲ್ಲಿ ಸರ್ಕಾರಿ ಹುದ್ದೆಗಳಲ್ಲಿ ಇದ್ದಾರೆಯೇ ಎಂಬ ದತ್ತಾಂಶ ಸಂಗ್ರಹಿಸುವ ಅಗತ್ಯವಿಲ್ಲ. ಅದಕ್ಕೆ ದಾಖಲೆಗಳನ್ನು ತೋರಿಸಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಅಗತ್ಯವೂ ರಾಜ್ಯ ಸರ್ಕಾರಕ್ಕೆ ಇಲ್ಲ. ಹಾಗೆಯೇ ಸರ್ಕಾರಿ ಹುದ್ದೆಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಎಸ್ಸಿ/ಎಸ್ಟಿ ಮೀಸಲಾತಿ ಇಲ್ಲ ಎಂಬುದನ್ನು ನ್ಯಾಯಾಲಯದಲ್ಲಿ ವಾದಿಸಿದರೂ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.