ಕಾಂಗ್ರೆಸ್ನಲ್ಲಿ ಕುಟುಂಬ ರಾಜಕಾರಣ ನಡೆಯುವುದಿಲ್ಲ ಎಂದ ಖರ್ಗೆ
ನವದೆಹಲಿ, ಫೆಬ್ರವರಿ 17: ಭಾರತದಲ್ಲಿ ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ಭಾರತೀಯ ಜನತಾ ಪಕ್ಷದ ನಾಯಕರು ಮಾಡಿರುವ ಆರೋಪವನ್ನು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಳ್ಳಿ ಹಾಕಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ರಾಜೀವ್ ಗಾಂಧಿ ನಂತರದಲ್ಲಿ ಗಾಂಧಿ ಕುಟುಂಬದವರಿಂದ ಇದುವರೆಗೂ ಯಾರೊಬ್ಬರೂ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿ ಆಗಿಲ್ಲ ಎಂದು ಹೇಳಿದರು.
ಕಾಂಗ್ರೆಸ್, ಎಸ್ಪಿ, ಬಿಎಸ್ಪಿಯದ್ದು ಕುಟುಂಬ ರಾಜಕಾರಣ; ಸಿಎಂ ಯೋಗಿ
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಪರಿವಾರವಾದ, ಕುಟುಂಬ ರಾಜಕಾರಣ ಎಂಬುದಿಲ್ಲ. ಈ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ದೇಶಕ್ಕಾಗಿ ಕೆಲಸ ಮಾಡುತ್ತಾನೆ. ರಾಜೀವ್ ಗಾಂಧಿಯವರ ನಂತರ ಗಾಂಧಿ ಕುಟುಂಬದಿಂದ ಯಾವುದೇ ನಾಯಕರು ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿ ಆಗಿಲ್ಲ. ಕಾಂಗ್ರೆಸ್ ಪಕ್ಷವು ಯಾವಾಗಲೂ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಚುನಾವಣೆಗಳನ್ನು ಎದುರಿಸುತ್ತದೆ. ಸಿದ್ಧಾಂತಕ್ಕಾಗಿಯೇ ನಾವು ನಮ್ಮ ಜೀವನವನ್ನು ತ್ಯಾಗ ಮಾಡಿದ್ದೇವೆ," ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕುಟುಂಬ ರಾಜಕಾರಣಕ್ಕೆ ಬಿಜೆಪಿ ಬೆಂಬಲ:
ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು. ದೇಶದಲ್ಲಿ ಕಾಂಗ್ರೆಸ್ ತೊರೆದು ಹೋಗುತ್ತಿರುವವರನ್ನು ಸೇರಿಸಿಕೊಳ್ಳುವುದರ ಮೂಲಕ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಬೆಂಬಲ ನೀಡುತ್ತಿದೆ.
ದೇಶದಲ್ಲಿ ಭಾರತೀಯ ಜನತಾ ಪಕ್ಷದಿಂದಲೇ ಪರವಾರವಾದ, ಕುಟುಂಬ ರಾಜಕಾರಣ ಹೆಚ್ಚಾಗುತ್ತಿದೆ. ರಾಜಕೀಯ ಹಿನ್ನೆಲೆಯುಳ್ಳ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಜಿತಿನ್ ಪ್ರಸಾದ್, ಜ್ಯೋತಿರಾಧಿತ್ಯ ಸಿಂಧಿಯಾ, ಸುವೇಂಧು ಅಧಿಕಾರಿ ಹೆಸರನ್ನು ಉಲ್ಲೇಖಿಸಿದ ಖರ್ಗೆ, ಇಂಥ ನಾಯಕರನ್ನು ಅವರ ರಾಜಕೀಯ ಹಿನ್ನಲೆಯನ್ನು ನೋಡಿಕೊಂಡು ಬಿಜೆಪಿ ತನ್ನತ್ತ ಸೆಳೆದುಕೊಂಡಿದೆ ಎಂದು ದೂಷಿಸಿದರು.
ಯುಪಿ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಉಲ್ಲೇಖ:
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಭಾರತೀಯ ಜನತಾ ಪಕ್ಷದ ನಾಯಕರು ಉಲ್ಲೇಖಿಸಿದ್ದರು. ದೇಶದಲ್ಲಿ ಕುಟುಂಬ ರಾಜಕಾರಣ ನಡೆಸಲು ಯಾವುದೇ ಕಾರಣಕ್ಕೂ ಬೆಂಬಲ ನೀಡಬಾರದು ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದರು.
ಉತ್ತರ ಪ್ರದೇಶದಲ್ಲಿ ಸಮಾಜವಾದಿ, ಬಹುಜನ ಸಮಾಜವಾದಿ, ಕಾಂಗ್ರೆಸ್ ಪಕ್ಷಗಳು ತಮಗಾಗಿ ಬದುಕುತ್ತಿದ್ದು, ತಮ್ಮ ವಂಶಸ್ಥರನ್ನು ಮಾತ್ರ ಪ್ರೋತ್ಸಾಹಿಸುತ್ತಿದ್ದಾರೆ. ಒಂದು ವೇಳೆ ನಾವು ರಾಷ್ಟ್ರೀಯತೆ ಬಗ್ಗೆ ಮಾತನಾಡಿದರೆ, ಅವರು ಜಾತೀಯತೆ ಬಗ್ಗೆ ಮಾತನಾಡುತ್ತಾರೆ. ನಾವು ಅಭಿವೃದ್ಧಿ ಬಗ್ಗೆ ಮಾತನಾಡಿದರೆ, ಅವರು ಧಾರ್ಮಿಕತೆ ಬಗ್ಗೆ ಮಾತನಾಡುತ್ತಾರೆ. ನಾವು ಗನ್ನಾ(ಬೆಲ್ಲ)ದ ಬಗ್ಗೆ ಮಾತನಾಡಿದರೆ, ಅವರು ಜಿನ್ನಾ ಬಗ್ಗೆ ಮಾತನಾಡುತ್ತಾರೆ," ಎಂದು ದೂಷಿಸಿದ್ದಾರೆ.