ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಸುಪ್ರೀಂ ಐತಿಹಾಸಿಕ ತೀರ್ಪು
ನವದೆಹಲಿ, ಸೆಪ್ಟೆಂಬರ್ 26 : ಎಸ್ಸಿ/ಎಸ್ಟಿ ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ತೀರ್ಪಿನಿಂದಾಗಿ ಕೇಂದ್ರ ಸರ್ಕಾರ ನಿರಾಳವಾಗಿದೆ.
ಬುಧವಾರ ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ನ ಐವರು ಸದಸ್ಯರ ಸಂವಿಧಾನಿಕ ಪೀಠ, 2006ರ ಎಂ.ನಾಗರಾಜು ಅವರ ತೀರ್ಪಿನ ಮರು ಪರಿಶೀಲನೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಬಡ್ತಿ ನೀಡುವಾಗ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿತು.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿ ಕುರಿಯನ್ ಜೋಸೆಫ್, ಆರ್.ಎಫ್.ನಾರಿಮನ್, ಎಸ್.ಕೆ.ಕೌಲ್ ಮತ್ತು ಇಂದು ಮಲ್ಹೋತ್ರ ಇದ್ದರು.

ಪ್ರಕರಣದ ವಿಚಾರಣೆಯನ್ನು ಸಪ್ತ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲು ಸಂವಿಧಾನಿಕ ಪೀಠ ನಿರಾಕರಿಸಿದೆ. ಪ್ರಾತಿನಿಧ್ಯ ಕೊರತೆ ಮತ್ತು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು 2006ರ ತೀರ್ಪಿನಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈ ನಿಯಮ ಕೈ ಬಿಡಬೇಕು ಎಂದು ಒತ್ತಾಯಿಸಿತ್ತು.
ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ್ದ ಅರ್ಟಾನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ಈ ಸಮುದಾಯಗಳು ಹಿಂದುಳಿದಿವೆ ನಿಜ. ಆದರೆ, ಪ್ರಾತಿನಿಧ್ಯದ ಕೊರತೆ ಇದೆ ಎಂಬುದನ್ನು ಸಾಬೀತು ಮಾಡಲು ಬೇಕಾದ ದತ್ತಾಂಶ ಸಂಗ್ರಹಿಸುವುದು ಅಸಾಧ್ಯ ಎಂದು ಹೇಳಿದ್ದರು.
ರಾಜ್ಯ ಸರ್ಕಾರಗಳು ಬಡ್ತಿ ನೀಡುವಾಗ ಎಸ್ಸಿ/ಎಸ್ಟಿ ಸೇರಿದಂತೆ ಹಿಂದುಳಿದ ವರ್ಗಗಳ ಉದ್ಯೋಗಿಗಳ ದತ್ತಾಂಶವನ್ನು ಸಂಗ್ರಹಿಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಎಂ.ನಾಗರಾಜು ಪ್ರಕರಣದಲ್ಲಿ ನೀಡಿದ ತೀರ್ಪಿನ ಮರುಪರಿಶೀಲನೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ 2006ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಬಡ್ತಿ ಮೀಸಲಾತಿ ಪ್ರಶ್ನಿಸಿ ಬೆಂಗಳೂರು ಮೂಲದ ಎಂ.ನಾಗರಾಜ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
ಮಹಾರಾಷ್ಟ್ರ ಮತ್ತು ತ್ರಿಪುರಾ ರಾಜ್ಯಗಳಿಗೆ ಸಂಬಂಧಿಸಿದ ಇದೇ ಮಾದರಿಯ ಪ್ರಕರಣಗಳ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿತ್ತು. ಆದ್ದರಿಂದ, ಅರ್ಜಿಗಳ ವಿಚಾರಣೆಗೆ ಸಂವಿಧಾನಿಕ ಪೀಠ ರಚನೆ ಮಾಡಲಾಗಿತ್ತು.
ಸರ್ಕಾರಿ ನೌಕರಿಯಲ್ಲಿ ಬಡ್ತಿ ನೀಡುವ ಕರ್ನಾಟಕ ಸರ್ಕಾರದ 2002ರ ಕಾಯ್ದೆಯನ್ನು ಸುಪ್ರೀಂಕೋರ್ಟ್ ಈ ವರ್ಷದ ಫೆಬ್ರವರಿಯಲ್ಲಿ ರದ್ದುಪಡಿಸಿತ್ತು.












Click it and Unblock the Notifications