ಕೊರೊನಾ ಲಸಿಕೆ ಕಡ್ಡಾಯದಿಂದ ಯಾರೂ ಏನನ್ನೂ ಕಳೆದುಕೊಳ್ಳುವುದಿಲ್ಲ: ಕೇಂದ್ರ
ನವದೆಹಲಿ, ಜನವರಿ 31: ಕೊರೊನಾ ಲಸಿಕೆ ಕಡ್ಡಾಯದಿಂದ ಯಾರೂ ಏನನ್ನೂ ಕಳೆದುಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿದೆ.
ವಿವಿಧ ರಾಜ್ಯಗಳು ಮತ್ತು ಅಧಿಕಾರಿಗಳು ಹೊರಡಿಸಿದ ಕೋವಿಡ್-19 ಲಸಿಕೆ ಕಡ್ಡಾಯ ಆದೇಶಗಳಿಂದಾಗಿ ಜನರು ತಮ್ಮ ಉದ್ಯೋಗ ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ವಾದಗಳನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ವಿರೋಧಿಸಿತು. ಯಾರೂ "ಏನನ್ನೂ ಕಳೆದುಕೊಳ್ಳುತ್ತಿಲ್ಲ" ಎಂದು ಹೇಳಿತು.
ಕೋವಿಡ್ ಲಸಿಕೆ ಕಡ್ಡಾಯ ಮತ್ತು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ದತ್ತಾಂಶ ಬಹಿರಂಗ ವಿಷಯ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿ ಆರ್ ಗವಾಯಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರದ ಪರವಾಗಿ ಉತ್ತರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಲಸಿಕೆ ಕಡ್ಡಾಯದಿಂದ ಯಾರು ಕೂಡಾ ಏನನ್ನೂ ಕಳೆದುಕೊಳ್ಳುತ್ತಿಲ್ಲ. ಯಾರು ಕೂಡಾ ನಿಮ್ಮ ಮುಂದೆ ಬಂದಿಲ್ಲ ಎಂದು ತಿಳಿಸಿದರು. ಈ ವಿಷಯದ ಬಗ್ಗೆ ಅಂತಿಮ ವಿಚಾರಣೆ ನಡೆಸಿ ನಿರ್ಧರಿಸುವುದಾಗಿ ನ್ಯಾಯಪೀಠ ಹೇಳಿತು.
ಲಸಿಕೆ ಪಡೆಯದ ಜನರು ಉದ್ಯೋಗ ಕಳೆದುಕೊಳ್ಳುವುದಾಗಿ ಅನೇಕ ರಾಜ್ಯಗಳು ಮತ್ತಿತರ ಅಧಿಕಾರಿಗಳು ಆದೇಶ ಹೊರಡಿಸಿರುವುದಾಗಿ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.
ಜನರು ಉದ್ಯೋಗ ಕಳೆದುಕೊಳ್ಳುತ್ತಿರುವುದರಿಂದ ಲಸಿಕೆ ಕಡ್ಡಾಯ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ ಭೂಷಣ್, ಲಸಿಕೆ ಕಡ್ಡಾಯ ಮಾಡಿರುವುದರಿಂದ ಜನರು ಸ್ವತಂತ್ರವಾಗಿ ಓಡಾಡಲು ಸಾಧ್ಯವಿಲ್ಲದಂತಾಗಿದೆ ಎಂದರು.
ಭಾರತದಲ್ಲಿ ಹೊಸ ಕೊರೊನಾ ಪ್ರಕರಣಗಳು ಸೋಮವಾರ ಇಳಿಕೆಯಾಗಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಳ್ಳುವ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 2,09,918 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 959 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,95,050ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,62,628 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,89,76,122ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17,59,434 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,57,74,705 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,66,03,96,227 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.












Click it and Unblock the Notifications