ಆಗಸ್ಟ್ ಹಾಗೂ ಸೆಪ್ಟೆಂಬರ್ನಲ್ಲಿ ದೇಶಾದ್ಯಂತ ಸಾಧಾರಣ ಮಳೆ
ನವದೆಹಲಿ, ಆಗಸ್ಟ್ 01: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಮಧ್ಯೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 3 ರ ತನಕ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಳೆಗಾಲದ ನಾಲ್ಕು ತಿಂಗಳ ದ್ವಿತೀಯಾರ್ಧ(ಆಗಸ್ಟ್ ಮತ್ತು ಸೆಪ್ಟೆಂಬರ್)ದಲ್ಲಿ ದೀರ್ಘಕಾಲೀನ ಸರಾಸರಿಯ 97 ರಷ್ಟು ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಮಾನ್ಸೂನ್ ಹಿನ್ನೆಲೆಯಲ್ಲಿ ಮತ್ತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ತಿಂಗಳ ಕಾಲ ಎಲ್ಲಾ ಕಡೆ ಸಾಧಾರಣೆ ಮಳೆಯಾಗಲಿದೆ ಎಂದಿರುವ ಹವಾಮಾನ ಇಲಾಖೆ ಉತ್ತಮ ಬೆಳೆಯ ನಿರೀಕ್ಷೆ ಮಾಡಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಬೆಳಗಾವಿ, ಹಾವೇರಿ, ಕಲಬುರ್ಗಿ , ಬೀದರ್ ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ಆಗಸ್ಟ್ 2 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ; ಯೆಲ್ಲೂ ಅಲರ್ಟ್
ಕರಾವಳಿ ಜಿಲ್ಲೆಗಳು, ಕೊಡಗು, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ವಿಜಯಪುರದಲ್ಲಿ ಡೋಣಿ ನದಿ ಮೈದುಂಬಿದ್ದು, ಸೇತುವೆಯೊಂದು ಜಲಾವೃತಗೊಂಡಿದೆ.
ಕರಾವಳಿಯಲ್ಲಿ ಶುಕ್ರವಾರ ಮಳೆ ಹೆಚ್ಚಾಗಿದ್ದು, ಮಲೆನಾಡಿನಲ್ಲಿ ತುಂತುರು ಮಳೆಯಾಗಿದೆ. ಮಂಗಳೂರು ತಾಲೂಕಿನ ಮಿತ್ತಕೋಡಿ ಬಳಿ ರಸ್ತೆ ಬದಿಯಲ್ಲಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ಗದಗದ ಡಂಬಳದಲ್ಲಿ ಕೆಲಕಾಲ ಮಳೆಯಾಗಿದೆ. ತಾಳಿಕೋಟೆಯ ಡೋಣಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಡೋಣಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.