ನಾನು ಪ್ರಧಾನಿ ಹುದ್ದೆ ಆಕಾಂಕ್ಷಿಯಲ್ಲ : ಮಮತಾ ಬ್ಯಾನರ್ಜಿ
ನವದೆಹಲಿ, ಆಗಸ್ಟ್ 02: ಲೋಕಸಭೆ ಚುನಾವಣೆ 2019ರಲ್ಲಿ ಮೋದಿ ನೇತೃತ್ವದ ಎನ್ಡಿಎ ಸೋಲಿಸಲು ವಿವಿಧ ರೀತಿಯಲ್ಲಿ ವಿಪಕ್ಷಗಳು ಯತ್ನಿಸುತ್ತಿವೆ. ಬಹುಜನ ಸಮಾಜ ಪಕ್ಷದಿಂದ ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ನಡುವೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ. ಆದರೆ, ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ ಎಂದಿದ್ದಾರೆ.
ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಬದಲಿಗೆ ಬಿಜೆಪಿ ಸೋಲಿಸುವುದು ನಮ್ಮ ಆದ್ಯತೆ, ಎಲ್ಲ ಪ್ರತಿಪಕ್ಷಗಳು ಸೇರಿ ಪ್ರಧಾನಿ ಹುದ್ದೆಗೆ ಅಭ್ಯರ್ಥಿಯ ಆಯ್ಕೆ ಮಾಡಬೇಕು ಎಂದು ಟಿಎಂಸಿ ವರಿಷ್ಠೆ ಹಾಗೂ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧ ಪ್ರತಿಪಕ್ಷಗಳನ್ನು ಸಂಘಟಿಸುವುದು ನನ್ನ ಮೊದಲ ಆದ್ಯತೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ''ನಾನು ಯಾವುದೇ ಹುದ್ದೆ ಆಕಾಂಕ್ಷಿ ಅಲ್ಲ. ನಾನು ಎಲ್ಲ ಪಕ್ಷಗಳು ಸಂಘಟಿತವಾಗಿ ಕಾರ್ಯ ನಿರ್ವಹಿಸುವ ಬಗ್ಗೆ ಆಸಕ್ತನಾಗಿದ್ದೇನೆ. ಎಲ್ಲ ರಾಜಕೀಯ ಪಕ್ಷಗಳು ಸಂಘಟಿತವಾಗಿ ಕುಳಿತುಕೊಂಡು ನಿರ್ಧಾರ ತೆಗೆದುಕೊಳ್ಳಬೇಕು'' ಎಂದು ಅವರು ಹೇಳಿದ್ದಾರೆ.
ಬಿಎಸ್ಪಿಯಿಂದ ಪ್ರಧಾನಿ ಅಭ್ಯರ್ಥಿಯಾಗಿ ಮಾಯಾವತಿ
ಕಳೆದೆರಡು ದಿನಗಳಿಂದ ದೆಹಲಿಯಲ್ಲಿರುವ ಮಮತಾ ಬ್ಯಾನರ್ಜಿ ಅವರು ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್, ಜೆಡಿಎಸ್ ಮುಖ್ಯಸ್ಥ ಹೆಚ್.ಡಿ,ದೇವೇಗೌಡ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಕೋಲ್ಕತಾದಲ್ಲಿ ಜನವರಿ 19 ರಂದು ಬೃಹರ್ ಪ್ರತಿಭಟನಾ ಮೆರವಣಿಗ್ ಆಯೋಜಿಸಿದ್ದು, ಇದಕ್ಕಾಗಿ ಎಲ್ಲಾ ನಾಯಕರನ್ನು ಅಹ್ವಾನಿಸಲಾಗಿದೆ ಎಂದರು.