Breaking: 'ಒಂದು ದೇಶ, ಒಂದು ಚುನಾವಣೆ' ಪ್ರಸ್ತಾವನೆ; ಮಸೂದೆಗೆ ಕೇಂದ್ರ ಅನುಮೋದನೆ
ನರೇಂದ್ರ ಮೋದಿ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ 'ಒಂದು ದೇಶ, ಒಂದು ಚುನಾವಣೆ' ಪ್ರಸ್ತಾವನೆಗೆ ಮೋದಿ-ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಂದೇ ಬಾರಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ವಿರೋಧಗಳ ನಡುವೆಯೇ ಸಚಿವ ಸಂಪುಟ ಅನುಮೋದನೆ ಕೊಟ್ಟಿದೆ. ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಪ್ರಸ್ತಾವನೆಯನ್ನು ಅನುಮೋದಿಸಿದ ಬಳಿಕ ಸಚಿವ ಸಂಪುಟ ಅನುಮೋದನೆ ಕೊಟ್ಟಿದೆ. ಆದರೆ ಈ ಮಸೂದೆಗೆ ವಿಪಕ್ಷಗಳು ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದು, ಅಧಿವೇಶನದಲ್ಲಿ ಕೂಡ ವ್ಯಾಪಕ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.

ಇದೇ ವರ್ಷ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ 'ಒಂದು ದೇಶ, ಒಂದು ಚುನಾವಣೆ' ಬಗ್ಗೆ ಪ್ರಸ್ತಾಪ ಮಾಡಿದ್ದರು. ಬೇರೆ ಬೇರೆ ಕಡೆ ಬೇರೆ ಬೇರೆ ಸಮಯದಲ್ಲಿ ಚುನಾವಣೆ ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಹೇಳಿದ್ದರು.
ಮಸೂದೆಯಲ್ಲಿ ಇರುವುದೇನು?
ಸಚಿವ ಸಂಪುಟದ ಮುಂದೆ ಮಂಡಿಸಲಾದ ವರದಿಯಲ್ಲಿ ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ಅನುಷ್ಠಾನಕ್ಕೆ ಸಮಗ್ರ ಮಾರ್ಗಸೂಚಿಯನ್ನು ರೂಪಿಸಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆಯುವಂತೆ ಮೊದಲ ಹಂತದಲ್ಲಿ ಶಿಫಾರಸ್ಸು ಮಾಡಿದ್ದು, 100 ದಿನಗಳ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ಶಿಫಾರಸ್ಸು ಮಾಡಿದೆ.
ಪದೇ ಪದೇ ಚುನಾವಣೆಗಳು ನಡೆಯುವುದನ್ನು ತಪ್ಪಿಸುವ ಮೂಲಕ ಸುಗಮ ಆಡಳಿತ ನಡೆಸಲು ಅನುಕೂಲ ಮಾಡಿಕೊಡುತ್ತದೆ ಎನ್ನುವುದು ಸರ್ಕಾರದ ವಾದವಾಗಿದೆ. ಚುನಾವಣಾ ವೆಚ್ಚವನ್ನು ಕಡಿಮೆ ಮಾಡಬಹುದು ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.
ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ. ಯಾವುದೇ ಯೋಜನೆಗಳನ್ನು ಚುನಾವಣೆಗಳಿಗೆ ಜೋಡಿಸುವುದು ಸುಲಭವಾಗಿದೆ. ಮೂರರಿಂದ ಆರು ತಿಂಗಳಿಗೊಮ್ಮೆ ಎಲ್ಲೋ ಒಂದು ಕಡೆ ಚುನಾವಣೆ ನಡೆಯುತ್ತದೆ. ಪ್ರತಿಯೊಂದು ಕೆಲಸವೂ ಚುನಾವಣೆಗೆ ತಳುಕು ಹಾಕಿಕೊಂಡಿದೆ ಎಂದು ಸ್ವಾತಂತ್ರ್ಯ ದಿನದಂದು 11ನೇ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ಭಾಷಣದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು.
2024ರ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಇದನ್ನು ಪ್ರಸ್ತಾಪ ಮಾಡಿತ್ತು. ಬಿಜೆಪಿಯಲ್ಲಿ ಇದಕ್ಕೆ ಸಹಮತ ಇದ್ದರೂ, ವಿಪಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸಿವೆ.
ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದು, ಒಂದು ರಾಷ್ಟ್ರ ಒಂದು ಚುನಾವಣೆ ಪ್ರಜಾಪ್ರಭುತ್ವದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕು ಎಂದರೆ ಅಗತ್ಯವಿದ್ದಾಗ ಚುನಾವಣೆಗಳು ನಡೆಯಬೇಕು ಎಂದರು.












Click it and Unblock the Notifications