Get Updates
Get notified of breaking news, exclusive insights, and must-see stories!

ವಿರೋಧ ಪಕ್ಷಗಳ ಸಭೆಗೆ ಬಿಜೆಪಿ ಸೆಡ್ಡು: ಜುಲೈ 18ರಂದು ಎನ್‌ಡಿಎ ಒಗ್ಗಟ್ಟು ಪ್ರದರ್ಶನ: ಪವನ್ ಕಲ್ಯಾಣ್ ಭಾಗಿ

2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಈಗಿನಿಂದಲೇ ರಾಷ್ಟ್ರ ರಾಜಕಾರಣ ಕಾವು ಪಡೆದುಕೊಳ್ಳುತ್ತಿದೆ. ಮೋದಿ ನಾಯಕತ್ವದ ಬಿಜೆಪಿಯನ್ನು ಮಣಿಸಲು 24 ಪಕ್ಷಗಳು ಜುಲೈ 17 ಮತ್ತು 18ರಂದು ಕಾಂಗ್ರೆಸ್ ನೇತೃತ್ವದಲ್ಲಿ 24 ಪಕ್ಷಗಳ ನಾಯಕರು ಸಭೆ ಸೇರುತ್ತಿದ್ದಾರೆ. ಲೋಕಸಭಾ ಚುನಾವಣೆ ಮೈತ್ರಿ ಬಗ್ಗೆ ಸಾಕಷ್ಟು ಚರ್ಚೆಯಾಗಲಿದ್ದು, ರಣತಂತ್ರ ರೂಪಿಸಲಿದ್ದಾರೆ.

ಇದರ ಬೆನ್ನಲ್ಲೇ ಬಿಜೆಪಿ ಕೂಡ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಭೆ ಕರೆದಿದ್ದು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದೆ. ಜುಲೈ 18ರಂದು ನವದೆಹಲಿಯಲ್ಲಿ ಎನ್‌ಡಿಎ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧ್ಯಕ್ಷತೆ ವಹಿಸಲಿದ್ದಾರೆ. ಒಂದೇ ವಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಬಲ ಪ್ರದರ್ಶನವನ್ನು ನೋಡಬಹುದಾಗಿದೆ.

NDA Meeting In Delhi

ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಎರಡನೇ ಬಾರಿಗೆ ಸಭೆ ನಡೆಸುತ್ತಿವೆ. ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ಮೊದಲ ಬಾರಿಗೆ ವಿಪಕ್ಷಗಳ ಸಭೆ ನಡೆದಿತ್ತು. ಅಲ್ಲಿ 16 ಪಕ್ಷಗಳು ಭಾಗವಹಿಸಿದ್ದವು. ಬೆಂಗಳೂರಿನ ಸಭೆಯಲ್ಲಿ 24 ಪಕ್ಷಗಳು ಭಾಗವಹಿಸುತ್ತಿವೆ.

ಹೊಸದಾಗಿ 8 ಪಕ್ಷಗಳ ಸೇರ್ಪಡೆ

ಸೋಮವಾರದಿಂದ ಬೆಂಗಳೂರಿನಲ್ಲಿ ನಡೆಯಲಿರುವ ಎರಡು ದಿನಗಳ ಚಿಂತನ-ಮಂಥನ ಅಧಿವೇಶನ ನಡೆಯಲಿದೆ. ಪಾಟ್ನಾದಲ್ಲಿ ನಡೆದ ಮೊದಲ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸದ ಎಂಟು ಪಕ್ಷಗಳು ಬೆಂಗಳೂರಿನಲ್ಲಿ ಸೋಮವಾರದ ಚರ್ಚೆಯಲ್ಲಿ ಸೇರಿಕೊಳ್ಳಲಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ), ಕೊಂಗು ದೇಸ ಮಕ್ಕಳ್ ಕಚ್ಚಿ (ಕೆಡಿಎಂಕೆ), ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಕೇರಳ ಕಾಂಗ್ರೆಸ್ (ಜೋಸೆಫ್), ಮತ್ತು ಕೇರಳ ಕಾಂಗ್ರೆಸ್ (ಮಣಿ) ಪಕ್ಷಗಳು ಹೊಸದಾಗಿ ಭಾಗವಹಿಸಲಿವೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಈ ಬಾರಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್, ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜೆಎಂಎಂ ನಾಯಕ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಎಎಪಿಯ ಅರವಿಂದ್ ಕೇಜ್ರಿವಾಲ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾಗವಹಿಸಲಿದ್ದಾರೆ.

ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ

ವಿರೋಧ ಪಕ್ಷಗಳು ಹಗ್ಗಜಗ್ಗಾಟಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಡ ಜುಲೈ 18ರಂದು ಸಭೆ ನಡೆಸಲಿದೆ. ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವು ಹೊಸ ಮಿತ್ರಪಕ್ಷಗಳು ಮತ್ತು ಮಾಜಿ ಮಿತ್ರಪಕ್ಷಗಳು ಎನ್‌ಡಿಎ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಪಿಟಿಐ ವರದಿಗಳ ಪ್ರಕಾರ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ್ದಾರೆ. ಜನಪ್ರಿಯ ತೆಲುಗು ನಟ, ಜನ ಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಕೂಡ ಸಭೆಯಲ್ಲಿ ಭಾಗವಹಿಸುವುದು ಖಚಿತವಾಗಿದೆ.

ಬಿಹಾರದಿಂದ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾದ ಜಿತನ್ ರಾಮ್ ಮಾಂಝಿ, ರಾಷ್ಟ್ರೀಯ ಲೋಕ ಸಮತಾ ಪಕ್ಷದ ಉಪೇಂದ್ರ ಸಿಂಗ್ ಕುಶ್ವಾಹಾ ಮತ್ತು ವಿಕಾಸಶೀಲ್ ಇನ್ಸಾನ್ ಪಕ್ಷದ ಮುಖೇಶ್ ಸಹಾನಿ ಅವರನ್ನು ಆಹ್ವಾನಿಸಲಾಗಿದೆ. ಭಾನುವಾರ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿರುವ ಒಬಿಸಿ ನಾಯಕ ಓಂ ಪ್ರಕಾಶ್ ರಾಜ್‌ಭರ್ ಕೂಡ ಜುಲೈ 18ರಂದು ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದರ ಹೊರತಾಗಿ, ಮೇಘಾಲಯ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಸೇರಿದಂತೆ ಹಲವಾರು ಎನ್‌ಡಿಎ ಮಿತ್ರ ಪಕ್ಷಗಳು ಭಾಗವಹಿಸಲಿವೆ. ನಾಗಾಲ್ಯಾಂಡ್ ಮುಖ್ಯಮಂತ್ರಿ ಮತ್ತು ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಮುಖ್ಯಸ್ಥ ನೆಫಿಯು ರಿಯೊ, ಅಪ್ನಾ ದಳದ ಕೇಂದ್ರ ಸಚಿವರು ಅನುಪ್ರಿಯಾ ಪಟೇಲ್ (ಸೋನೆಲಾಲ್), ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಮದಾಸ್ ಅಠವಳೆ, ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಅಜಿತ್ ಪವಾರ್ ಭಾಗವಹಿಸಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+