Parliament Special Session; ಕಾಂಗ್ರೆಸ್ ನಾಯಕರ ಅಸಮಾಧಾನ
ನವದೆಹಲಿ, ಸೆಪ್ಟೆಂಬರ್ 18; ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿರುವ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಲಿದೆ. ಸೆಪ್ಟೆಂಬರ್ 18 ರಿಂದ 5 ದಿನಗಳ ವಿಶೇಷ ಅಧಿವೇಶನ ನಡೆಯಲಿದ್ದು, ಹಲವಾರು ವಿಚಾರಗಳ ಕುರಿತು ಚರ್ಚೆಗಳು ನಡೆಯಲಿವೆ. ಕೆಲವು ಮಸೂದೆಗಳನ್ನು ಸಹ ಮಂಡನೆ ಮಾಡಲಾಗುತ್ತಿದೆ.
ಸೆಪ್ಟೆಂಬರ್ 18ರ ಸೋಮವಾರಿಂದ ಶುಕ್ರವಾರದ ತನಕ ಸಂಸತ್ ಉಭಯ ಸದನಗಳ ವಿಶೇಷ ಅಧಿವೇಶನ ನಡೆಯಲಿದೆ. ಆದರೆ ಪ್ರಶ್ನೋತ್ತರ ಸಮಯ ಅಥವಾ ಖಾಸಗಿ ಮಸೂದೆಯ ಮಂಡನೆ ಇರುವುದಿಲ್ಲ. ಸೋಮವಾರ ಹಳೆಯ ಸಂಸತ್ನಲ್ಲಿ ಅಧಿವೇಶನ ಆರಂಭವಾಗಲಿದೆ. ಬಳಿಕ ಹೊಸ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿದೆ.

ಕಾಂಗ್ರೆಸ್ ಪಕ್ಷದ ನಾಯಕರು ಸಂಸತ್ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಂಸತ್ನಲ್ಲಿ ಚರ್ಚಿಸಬೇಕಿರುವ ವಿಚಾರಗಳ ಕುರಿತು ಕಾಂಗ್ರೆಸ್ ನಾಯಕು ಸಭೆಗಳನ್ನು ನಡೆಸಿದ್ದಾರೆ.
ಪತ್ರಕ್ಕೆ ಉತ್ತರವೇ ಇಲ್ಲ; ಕಾಂಗ್ರೆಸ್ ಸಂಸದ ಶಶಿ ತರೂರ್ ವಿಶೇಷ ಅಧಿವೇಶನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, "ಕಾಂಗ್ರೆಸ್ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ 9 ಅಂಶಗಳನ್ನು ಉಲ್ಲೇಖಿಸಿ ಪತ್ರವನ್ನು ಬರೆದಿದ್ದರು. ಆದರೆ ಆ ಪತ್ರಕ್ಕೆ ಇಲ್ಲಿಯ ತನಕ ಯಾವುದೇ ಪ್ರತಿಕ್ರಿಯೆ ಬಂದಿಲ್ಲ" ಎಂದು ಹೇಳಿದರು.
ಅಭಿಷೇಕ್ ಸಿಂಘ್ವಿ ಮಾತನಾಡಿ, "ಇದೊಂದು ದುರಾದೃಷ್ಟಕರವಾದ ವಿಚಾರ. ಈ ಸರ್ಕಾರ ಎಲ್ಲವನ್ನೂ ತಡವಾಗಿ ನಮಗೆ ಹೇಳುತ್ತದೆ. ವಿಶೇಷ ಅಧಿವೇಶನದಲ್ಲಿ ಹಲವು ಮಸೂದೆಗಳ ಕುರಿತು ಚರ್ಚೆಗಳು ನಡೆಯಲಿವೆ" ಎಂದರು.
ಸಂಸತ್ ಉಭಯ ಸದನಗಳ ವಿಶೇಷ ಅಧಿವೇಶನದ ಹಿನ್ನಲೆಯಲ್ಲಿ ಭಾನುವಾರ ಸಂಜೆ ಸರ್ವಪಕ್ಷಗಳ ಸಭೆ ನಡೆದಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ನಡೆದ ಸಭೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಗೈರಾಗಿದ್ದರು. ಅವರು ತೆಲಂಗಾಣದಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದರು.
ಸಚಿವರಾದ ರಾಜನಾಥ್ ಸಿಂಗ್, ಪಿಯೂಷ್ ಗೋಯೆಲ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡರು ಸಹ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾಗಿದ್ದರು.
ಹೊಸ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿರುವ ಹಿನ್ನಲೆಯಲ್ಲಿ ಸಂಸತ್ ಭವನದ ಮುಂದೆ ಭಾನುವಾರ ತ್ರಿವರ್ಣ ಧ್ವಜಾರೋಹಣ ನಡೆಸಲಾಗಿದೆ. ಉಪ ರಾಷ್ಟ್ರಪತಿಗಳು ಧ್ವಜಾರೋಹಣ ಮಾಡಿದ್ದು, ವಿವಿಧ ಕೇಂದ್ರ ಸಚಿವರು ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ಈಗಾಗಲೇ ವಿಶೇಷ ಅಧಿವೇಶನದ ಕಾರ್ಯಸೂಚಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅಧಿವೇಶನ ಆರಂಭವಾಗುವುದಕ್ಕೂ ಮೊದಲು ಸಂಸತ್ ಭವನದ ಮುಂದೆ ಮಾಧ್ಯಮಗಳ ಜೊತೆ ಮಾತನಾಡುವ ನಿರೀಕ್ಷೆಇದೆ. ಕಲಾಪಕ್ಕೆ ವಿರೋಧ ಪಕ್ಷಗಳು ಸಹಕಾರ ನೀಡಲು ಅವರು ಮನವಿ ಮಾಡುವ ಸಾಧ್ಯತೆ ಇದೆ.
ಮೊದಲ ದಿನದ ಅಧಿವೇಶನದಲ್ಲಿ 'ಸಂಸತ್ 75 ವರ್ಷಗಳ ಪಯಣ' ಕುರಿತು ಉಭಯ ಸದನಗಳಲ್ಲಿ ಚರ್ಚೆಗಳು ನಡೆಯಲಿವೆ. ಸಂಸದರು ವಿಧಾನಸಭೆಯಿಂದ ಸಂಸತ್ ತನಕ ನಡೆದು ಬಂದ ಸಂಸದೀಯ ಹಾದಿ ಕುರಿತು, ಸಾಧನೆ, ಅನುಭವ, ನೆನಪುಗಳು ಮತ್ತು ಕಲಿಕೆ ಕುರಿತು ಮಾತನಾಡಲಿದ್ದಾರೆ.
ಅಧಿವೇಶನದಲ್ಲಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಆಯುಕ್ತರ (ನೇಮಕಾತಿ, ಕರ್ತವ್ಯ ನಿಬಂಧನೆಗಳು ಮತ್ತು ಅಧಿಕಾರಾವಧಿ) ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಾಗುತ್ತದೆ. ಇದನ್ನು ಈಗಾಗಲೇ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ಒಟ್ಟು 10 ಮಸೂದೆಗಳನ್ನು ಮಂಡಿಸಲಾಗುತ್ತಿದೆ. ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಮೂರು ಸಾಲಿನ ವಿಪ್ ಜಾರಿ ಮಾಡಿದೆ.
ಲೋಕಸಭೆಯಲ್ಲಿ ವಕೀಲರ ಮಸೂದೆ (ತಿದ್ದುಪಡಿ), ನಿಯತಕಾಲಿಕೆಗಳ ಮುದ್ರಣ ಹಾಗೂ ನೋಂದಣಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲು ಉದ್ದೇಶಿಸಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ, ಏಕರೂಪ ನಾಗರಿಕ ಸಂಹಿತೆ, ಒಂದು ದೇಶ ಒಂದು ಚುನಾವಣೆ ಸೇರಿದಂತೆ ಇತರ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.












Click it and Unblock the Notifications