Pawan Kalyan: ಆಸ್ಪತ್ರೆಗೆ ದಾಖಲಾದ ನಟ ಪವನ್ ಕಲ್ಯಾಣ್: ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಹೈದರಾಬಾದ್ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಬೆನ್ನುನೋವು ಮತ್ತು ಸೈನಸೈಟಿಸ್ನಂತಹ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ, ಶುಕ್ರವಾರ ಅಧಿಕೃತ ಸಭೆಯಲ್ಲಿದ್ದಾಗ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಎಂಆರ್ಐ (MRI) ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿತ್ತು.
10 ದಿನಗಳ ವಿಶ್ರಾಂತಿಗೆ ಸೂಚನೆ
ಶಸ್ತ್ರಚಿಕಿತ್ಸೆಯ ನಂತರ ಪವನ್ ಕಲ್ಯಾಣ್ ಅವರು ಸದ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಅವರಿಗೆ ಕನಿಷ್ಠ 7 ರಿಂದ 10 ದಿನಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಈ ಕಾರಣದಿಂದಾಗಿ ಅವರ ಮುಂಬರುವ ಎಲ್ಲಾ ಅಧಿಕೃತ ಪ್ರೋಗ್ರಾಂಗಳು ಮತ್ತು ಸಭೆಗಳನ್ನು ರದ್ದುಗೊಳಿಸಲಾಗಿದೆ. ಪೂರ್ಣ ಪ್ರಮಾಣದ ಗುಣಮುಖರಾಗಲು ಸ್ವಲ್ಪ ಸಮಯ ಬೇಕಾಗಲಿದ್ದು, ಅಲ್ಲಿಯವರೆಗೆ ವೈದ್ಯಕೀಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಸೂಚಿಸಲಾಗಿದೆ.

ಆರೋಗ್ಯ ವಿಚಾರಿಸಿದ ಪ್ರಧಾನಿ
ವರದಿಗಳನ್ನು ಪರಿಶೀಲಿಸಿದ ವೈದ್ಯರ ತಂಡವು ಶಸ್ತ್ರಚಿಕಿತ್ಸೆ ಅಗತ್ಯವೆಂದು ತಿಳಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪವನ್ ಅವರಿಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.
ನಂತರ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಮೋದಿ, "ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ಮಾತನಾಡಿದೆ. ಅವರು ಅತ್ಯಂತ ಧೈರ್ಯಶಾಲಿ ಮತ್ತು ಪರಾಕ್ರಮಿ ವ್ಯಕ್ತಿ. ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗುತ್ತಾರೆ ಎಂದು ನನಗೆ ನಂಬಿಕೆಯಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಹಾರೈಸಿದ್ದಾರೆ.
ಪ್ರಧಾನಿಯವರ ಹಾರೈಕೆಗೆ ಪ್ರತಿಕ್ರಿಯಿಸಿರುವ ಪವನ್ ಕಲ್ಯಾಣ್, "ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಶಸ್ತ್ರಚಿಕಿತ್ಸೆಯ ನಂತರ ನನ್ನ ಆರೋಗ್ಯದ ಬಗ್ಗೆ ವಿಚಾರಿಸಲು ಸಮಯ ಮೀಸಲಿಟ್ಟ ನಿಮ್ಮ ಕಾಳಜಿ ಮತ್ತು ಪ್ರೋತ್ಸಾಹದ ಮಾತುಗಳು ನನಗೆ ಹೆಚ್ಚಿನ ಶಕ್ತಿಯನ್ನು ನೀಡಿವೆ. ನಿಮ್ಮ ಮಾರ್ಗದರ್ಶನ ಮತ್ತು ಬೆಂಬಲಕ್ಕೆ ನಾನು ಸದಾ ಕೃತಜ್ಞ" ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದಾಗ ಅವರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅವರ ವೈಯಕ್ತಿಕ ವೈದ್ಯರು, ಅಂದಿನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದರು. ಶಸ್ತ್ರಚಿಕಿತ್ಸೆಯ ನಂತರ ಪವನ್ ಕಲ್ಯಾಣ್ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದರೂ, ವೈದ್ಯರು ಅವರಿಗೆ ಕನಿಷ್ಠ 10 ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ದೈನಂದಿನ ಅಧಿಕೃತ ಕೆಲಸಗಳನ್ನು ಪುನರಾರಂಭಿಸುವ ಮುನ್ನ ಅವರು ಚೇತರಿಸಿಕೊಳ್ಳುವುದು ಮುಖ್ಯವಾಗಿದೆ. ಪೂರ್ಣ ಪ್ರಮಾಣದ ಚೇತರಿಕೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಮುನ್ನೆಚ್ಚರಿಕೆ ವಹಿಸಲು ವೈದ್ಯಕೀಯ ತಂಡ ತಿಳಿಸಿದೆ ಎಂದು ಜನಸೇನಾ ಪಕ್ಷದ ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ಸಚಿವ ನಾರಾ ಲೋಕೇಶ್, ಬಿಆರ್ಎಸ್ ನಾಯಕ ಕೆ.ಟಿ.ರಾಮರಾವ್ ಸೇರಿದಂತೆ ತೆಲುಗು ಚಿತ್ರರಂಗದ ಹಲವು ಪ್ರಮುಖ ನಟರು ಪವನ್ ಕಲ್ಯಾಣ್ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನೆಚ್ಚಿನ ನಾಯಕನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.












Click it and Unblock the Notifications