ಜಮ್ಮು ಮತ್ತು ಕಾಶ್ಮೀರ ಸ್ಥಾನ ಮಾನ ರದ್ದು; ಸಂವಿಧಾನಿಕ ಪೀಠ ರಚನೆ
ಬೆಂಗಳೂರು, ಸೆಪ್ಟೆಂಬರ್ 28 : 370ನೇ ವಿಧಿ ಮತ್ತು 35-ಎ ಕಲಂ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆಗೆ ಸಂವಿಧಾನಿಕ ಪೀಠ ರಚನೆ ಮಾಡಲಾಗಿದೆ.
ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದಲ್ಲಿ ಐವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಲಾಗಿದೆ. ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಅಕ್ಟೋಬರ್ 1 ರಿಂದ ಪೀಠದಲ್ಲಿ ನಡೆಯಲಿದೆ.
ಸುಪ್ರೀಂಕೋರ್ಟ್ನ ಎರಡನೇ ಹಿರಿಯ ನ್ಯಾಯಮೂರ್ತಿ ಎಸ್. ಎ. ಬೋಡೆ, 3ನೇ ಹಿರಿಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ಸಂವಿಧಾನಿಕ ಪೀಠದಲ್ಲಿ ಇದ್ದಾರೆ. ಆಗಸ್ಟ್ 28ರಂದು ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಮೂವರು ಸದಸ್ಯರ ಪೀಠ ಸಂವಿಧಾನಿಕ ಪೀಠ ರಚನೆ ಮಾಡುವುದಾಗಿ ಹೇಳಿತ್ತು.

ವಿಶೇಷ ಸ್ಥಾನಮಾನ ರದ್ದು ಮಾಡಿ ರಾಷ್ಟ್ರಪತಿಗಳು ಆಗಸ್ಟ್ 5ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ವಕೀಲ ಎಂ. ಎಲ್. ಶರ್ಮಾ, ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ವಿವಿಧ ಅರ್ಜಿಗಳ ವಿಚಾರಣೆ ಸಂವಿಧಾನಿಕ ಪೀಠದಲ್ಲಿ ನಡೆಯಲಿದೆ.
ಸಂವಿಧಾನದ 370ನೇ ವಿಧಿ ಮತ್ತು 35-ಎ ಕಲಂ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಕ್ ಎಂದು ರಾಜ್ಯವನ್ನು 2 ಕೇಂದ್ರಾಡಳಿತ ಪ್ರದೇಶವಾಗಿ ವಿಭಾಗಿಸಲಾಗಿತ್ತು.
ವಿಶೇಷ ಸ್ಥಾನಮಾನ ರದ್ದಾಗಿರುವುದರಿಂದ ಇಡೀ ರಾಜ್ಯದ ಜನಸಂಖ್ಯೆ ಮತ್ತು ಜನಾಂಗೀಯ ಸ್ವರೂಪ ಏರುಪೇರಾಗಿದೆ. ಇದರಿಂದಾಗಿ ಕಾಶ್ಮೀರ ವಿಲೀನದ ವೇಳೆ ರಾಜ ಹರಿಸಿಂಗ್ ಜೊತೆ ಮಾಡಿಕೊಂಡ ಷರತ್ತಿನ ಉಲ್ಲಂಘನೆಯೂ ಆಗುತ್ತದೆ ಎಂದು ಅರ್ಜಿಗಳಲ್ಲಿ ಉಲ್ಲೇಖಿಸಲಾಗಿದೆ.












Click it and Unblock the Notifications