ತೈಲ ಬೆಲೆ ಏರಿಕೆ; ಜೂ. 11ರಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ
ನವದೆಹಹಲಿ, ಜೂನ್ 09; ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾರ್ವಕಾಲಿಕ ಏರಿಕೆಯನ್ನು ಕಂಡಿವೆ. ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಜನ ಸಾಮಾನ್ಯರು ಪರದಾಡುತ್ತಿದ್ದಾರೆ.
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಜೂನ್ 11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಪೆಟ್ರೋಲ್ ಬಂಕ್ಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಕ್ಷ ಹೇಳಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು ನಗರದಲ್ಲಿ ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಪೆಟ್ರೋಲ್ ದರ 73.55 ಆಗಿತ್ತು. ಭಾನುವಾರ ನಗರದಲ್ಲಿ ಲೀಟರ್ ಪೆಟ್ರೋಲ್ ದರ 98.26 ಆಗಿದೆ. ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.
ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದಾಗ ತೈಲ ಬೆಲೆ ಏರಿಕೆಯಾಗಿರಲಿಲ್ಲ. ಬಳಿಕ 20 ಬಾರಿ ಬೆಲೆ ಏರಿಕೆಯಾಗಿದೆ. ತೈಲ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿವೆ.
ತೈಲ ಬೆಲೆ ಏರಿಕೆ ಕುರಿತು ಮಾತನಾಡಿರುವ ಕೇಂದ್ರ ಪೆಟ್ರೋಲಿಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, "ಜಾಗತಿಕ ಮಟ್ಟದಲ್ಲಿ ಇತ್ತೀಚೆಗೆ ಕಚ್ಚಾತೈಲ ದರ ಹೆಚ್ಚಳವಾಗಿರುವುದೇ ಭಾರತದಲ್ಲಿ ತೈಲ ಬೆಲೆ ಏರಿಕೆಗೆ ಕಾರಣ" ಎಂದು ಹೇಳಿದ್ದಾರೆ.
"ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿರುವ ಕುರಿತು ಜಿಎಸ್ಟಿ ಮಂಡಳಿ ತೀರ್ಮಾನಿಸಬೇಕು. ಒಂದು ವೇಳೆ ಜಿಎಸ್ಟಿ ವ್ಯಾಪ್ತಿಗೆ ಬಂದರೆ ದರಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿವೆ" ಎಂದು ಸಚಿವರು ತಿಳಿಸಿದ್ದಾರೆ.
"ತೈಲ ದರ ಹೆಚ್ಚಳ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅವಲಂಬಿಸಿದೆ. ಪೆಟ್ರೋಲಿಂ ಉತ್ಪನ್ನಗಳು ಜಿಎಸ್ಟಿ ವ್ಯಾಪ್ತಿಗೆ ಬರಬೇಕು ಎಂಬುದು ನನ್ನ ಆಶಯ. ಆದರೆ ಜಿಎಸ್ಟಿ ಮಂಡಳಿ ಸದಸ್ಯರಲ್ಲಿ ಈ ಬಗ್ಗೆ ಒಮ್ಮತ ಮೂಡಿ ಅಂತಿಮ ನಿರ್ಧಾರ ಕೈಗೊಳ್ಳಬೇಕು" ಎಂದು ಸಚಿವರು ವಿವರಿಸಿದರು.












Click it and Unblock the Notifications