100 ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಪಿಎಂ ಪರಿಹಾರ ನಿಧಿ ಬಳಕೆ
ನವದೆಹಲಿ, ಏಪ್ರಿಲ್ 16: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಕೆಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ನೂರಾರು ಕೊರೊನಾ ರೋಗಿಗಳಿಗೆ ಸಮಸ್ಯೆ ಎದುರಾಗಿದೆ. ಈ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರದ ತಂಡ ಗುರುವಾರ ಯೋಜನೆಯೊಂದನ್ನು ರೂಪಿಸಿದ್ದು, ಪ್ರಧಾನ ಮಂತ್ರಿ ಪರಿಹಾರ ನಿಧಿ ಹಣವನ್ನು ದೇಶದ ನೂರು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಬಳಸಲು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನಿರ್ದೇಶಿಸಿರುವುದಾಗಿ ತಿಳಿದುಬಂದಿದೆ.
ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ವೈದ್ಯಕೀಯ ಆಮ್ಲಜನಕ ನಿರ್ಣಾಯಕ ಅಂಶ. ಆದರೆ ಕೊರೊನಾ ಎರಡನೇ ಅಲೆಯಲ್ಲಿ ಆಮ್ಲಜನಕಕ್ಕೇ ಅಭಾವ ಎದುರಾಗಿದೆ. ಹೀಗಾಗಿ ಈಚೆಗೆ ಕೊರೊನಾ ಸಂಬಂಧ ನಡೆದ ಕೇಂದ್ರದ "ಎಂಪವರ್ಡ್ ಗ್ರೂಪ್ 2" ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ಈ ತಂಡವನ್ನು, ವೈದ್ಯಕೀಯ ಸಾಧನಗಳು ಎಲ್ಲೆಡೆ ಲಭ್ಯವಿರುವಂತೆ ನೋಡಿಕೊಳ್ಳುವ ಸಲುವಾಗಿ ರೂಪಿಸಲಾಗಿತ್ತು. ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಅಲ್ಪ ಹಾಗೂ ದೀರ್ಘಕಾಲೀನ ಲಭ್ಯತೆಯನ್ನು ಸೃಷ್ಟಿಸಲು ಈ ತಂಡ ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.

* ಆಮ್ಲಜನಕಕ್ಕೆ ಹೆಚ್ಚಿನ ಬೇಡಿಕೆಯಿರುವ ರಾಜ್ಯಗಳನ್ನು ಗುರುತಿಸುವುದು ಮೊದಲ ಕೆಲಸವಾಗಿದೆ. ಕೊರೊನಾ ಎರಡನೇ ಅಲೆ ಆರಂಭವಾದಾಗಿನಿಂದ ಹನ್ನೆರಡು ರಾಜ್ಯಗಳಿಂದ ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ದೆಹಲಿ, ಛತ್ತೀಸ್ಗಡ, ಕೇರಳ, ತಮಿಳುನಾಡು, ಪಂಜಾಬ್, ಹರಿಯಾಣ ಹಾಗೂ ರಾಜಸ್ಥಾನದಿಂದ ಬೇಡಿಕೆ ಹೆಚ್ಚಾಗಿದೆ. ಈ ರಾಜ್ಯಗಳ ಬೇಡಿಕೆಯನ್ನು ಪೂರೈಸುವುದು ಮೊದಲ ಆದ್ಯತೆಯಾಗಿದೆ.
*100 ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಸ್ಥಾಪನೆ: ದೇಶದಲ್ಲಿ ನೂರು ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿ ಆಮ್ಲಜನಕ ಘಟಕ ಸ್ಥಾಪನೆ ಮಾಡುವುದು ಬಹು ಮುಖ್ಯ ಕಾರ್ಯವಾಗಿದ್ದು, ಇದಕ್ಕೆ ಪಿಎಂ ಪರಿಹಾರ ನಿಧಿಯನ್ನು ಬಳಸಿಕೊಳ್ಳುವುದಾಗಿ ತಿಳಿದುಬಂದಿದೆ.
* 50 ಸಾವಿರ ಮೆಟ್ರಿಕ್ ಟನ್ಗಳ ವೈದ್ಯಕೀಯ ಆಮ್ಲಜನಕವನ್ನು ಬೇರೆಡೆಯಿಂದ ಆಮದು ಮಾಡಿಕೊಳ್ಳುವ ಆಯ್ಕೆಯನ್ನೂ ತಂಡ ನೀಡಿದೆ.












Click it and Unblock the Notifications